ಮಡಿಕೇರಿ, ಏ.12 : ತಾ. 18 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಈ ಸಂಬಂಧ ತಾ. 17 ರಂದು ಮಸ್ಟರಿಂಗ್, ಮತದಾನದ ನಂತರ ಡಿಮಸ್ಟರಿಂಗ್ ಸೇರಿದಂತೆ ಚುನಾವಣೆಯ ಕಾರ್ಯಗಳನ್ನು ವ್ಯವಸ್ಥಿತವಾಗಿ ನಡೆಸುವಲ್ಲಿ ಸೆಕ್ಟರ್ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇತರರೊಂದಿಗೆ ಚುನಾವಣೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾ. 17 ರಂದು ಮಸ್ಟರಿಂಗ್ ಕಾರ್ಯವನ್ನು ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಯಶಸ್ಸುಗೊಳಿಸಬೇಕು. ನಂತರ ಮತಗಟ್ಟೆ ಅಧಿಕಾರಿಗಳು ಮತಗಟ್ಟೆಗೆ ತಲುಪಿದ್ದಾರೆಯೇ ಎಂಬದನ್ನು ಖಾತರಿಪಡಿಸಿಕೊಳ್ಳಬೇಕು. ಮತದಾನದಂದು ಮಾಕ್ಪೋಲ್ ಮತ್ತಿತರ ಅಗತ್ಯ ಸಿದ್ಧತೆ ಬಗ್ಗೆ ಮಾಹಿತಿ ನೀಡಬೇಕು. ಶೇಕಡಾವಾರು ಮತದಾನ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಮಾಹಿತಿ ಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ಸೆಕ್ಟರ್ ಅಧಿಕಾರಿಗಳು ಮತಗಟ್ಟೆ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ, ತಮ್ಮ ವ್ಯಾಪ್ತಿಯಲ್ಲಿ ಯಾವದೇ ರೀತಿಯ ಗೊಂದಲಗಳಿಗೆ ಅವಕಾಶ ಮಾಡದೆ ವ್ಯವಸ್ಥಿತವಾಗಿ ಚುನಾವಣೆ ನಡೆಸುವಂತಾಗಲು ಹೆಚ್ಚಿನ ಗಮನಹರಿಸಬೇಕು ಎಂದರು.
ಮತಗಟ್ಟೆಗಳಲ್ಲಿ ಮತಗಟ್ಟೆ ಅಧಿಕಾರಿಗಳಿಗೆ ಮೂಲ ಸೌಲಭ್ಯ ಒದಗಿಸುವದು, ಮತಗಟ್ಟೆ ಸ್ಥಿತಿ, ಮತಗಟ್ಟೆ ಆವರಣ ಸ್ವಚ್ಛವಾಗಿ ಇಟ್ಟುಕೊಳ್ಳುವ ನಿಟ್ಟಿನಲ್ಲಿ ಸಂಬಂಧಪಟ್ಟವರ ಗಮನಕ್ಕೆ ತರುವದು. ವಿದ್ಯುತ್ ವ್ಯವಸ್ಥೆ, ಶೌಚಾಲಯ, ಪೀಠೋಪಕರಣ, ರ್ಯಾಂಪ್, ಕುಡಿಯುವ ನೀರು ಇದೆಯೇ ಎಂಬದನ್ನು ಮತ್ತೊಮ್ಮೆ ಖಾತರಿಪಡಿಸಿಕೊಳ್ಳುವಂತೆ ಸಲಹೆ ಮಾಡಿದರು.
ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿ ಮತದಾರರ ಪಟ್ಟಿಯನ್ನು ಪರಿಶೀಲಿಸುವದು. ಭಾವಚಿತ್ರವಿರುವ ಮತದಾರರ ಚೀಟಿಯನ್ನು ವಿತರಿಸಲು ಅಗತ್ಯ ಕ್ರಮಕೈಗೊಳ್ಳುವದು. ಮತದಾರರ ಗೈಡ್ ವಿತರಣೆ ಮತ್ತಿತರ ಕಾರ್ಯವನ್ನು ಸಂಬಂಧಪಟ್ಟ ಅಧಿಕಾರಿಗಳು ನಿರ್ವಹಿಸಬೇಕು ಎಂದರು.
ಜಿಲ್ಲೆಯಲ್ಲಿ 10 ಸಖಿ ಮತಗಟ್ಟೆಗಳು, 5 ಸಾಂಪ್ರದಾಯಿಕ ಮತಗಟ್ಟೆ ಹಾಗೂ 1 ವಿಶೇಷಚೇತನರ ಮತಗಟ್ಟೆಗಳೆಂದು ಗುರುತಿಸಲಾಗಿದೆ. ಈ ಮತಗಟ್ಟೆಗಳಲ್ಲಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. ಮತದಾನದ ಹಿಂದಿನ ದಿನ ಮತ್ತು ಮತದಾನದ ದಿನ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಗಮನಹರಿಸುವದು, ಡಿ ಮಸ್ಟರಿಂಗ್ ಕಾರ್ಯವನ್ನು ಸಮರ್ಪಕವಾಗಿ ಮಾಡುವದು, ಮತಗಟ್ಟೆ ಅಧಿಕಾರಿಗಳನ್ನು ಕರೆದುಕೊಂಡು ಬರುವ ಬಗ್ಗೆ ವಾಹನ ವ್ಯವಸ್ಥೆ ಮಾಡುವದು. ಡಿ ಮಸ್ಟರಿಂಗ್ ಮುಗಿದ ನಂತರ ಮತಗಟ್ಟೆ ಅಧಿಕಾರಿಗಳನ್ನು ಅವರ ಕೇಂದ್ರ ಸ್ಥಾನಕ್ಕೆ ಕರೆ ತರುವಂತಾಗಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಆಯ್ದ 30 ಮತಗಟ್ಟೆಗಳಲ್ಲಿ ವೆಬ್ಕಾಸ್ಟಿಂಗ್ ಮಾಡಲಾಗುತ್ತಿದ್ದು, ಈ ಬಗ್ಗೆ ಹೆಚ್ಚಿನ ನಿಗಾವಹಿಸಬೇಕು.
ವಲ್ನರಬಲ್ ಮತ್ತು ಕ್ರಿಟಿಕಲ್ ಮತಗಟ್ಟೆಗಳಿಗೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕಿದೆ. ಆ ನಿಟ್ಟಿನಲ್ಲಿ ಸೆಕ್ಟರ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು.
ಸ್ವೀಪ್ ಸಮಿತಿ ಅಧ್ಯಕ್ಷೆ ಕೆ.ಲಕ್ಷ್ಮಿಪ್ರಿಯಾ ಅವರು ಜಿಲ್ಲೆಯಲ್ಲಿ ಶೇಕಡಾವಾರು ಮತದಾನ ಹೆಚ್ಚಳಕ್ಕೆ ಸ್ವೀಪ್ ಸಮಿತಿ ವತಿಯಿಂದ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ವಿಶೇಷ ಚೇತನರು ಮತಗಟ್ಟೆಗೆ ತೆರಳುವಂತಾಗಲು ಈಗಾಗಲೇ ವಾಹನ ವ್ಯವಸ್ಥೆ ಹಾಗೂ ತ್ರಿಚಕ್ರ, ಗಾಲಿ ವ್ಯವಸ್ಥೆ ಮಾಡಲಾಗಿದ್ದು, ಈ ಸಂಬಂಧ ತಾ.ಪಂ. ಇಒ ಅವರೊಂದಿಗೆ ಸಮನ್ವಯತೆ ಸಾಧಿಸುವಂತೆ ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಪಿ. ಶಿವರಾಜು ಮಾತನಾಡಿ ಚುನಾವಣಾ ಆಯೋಗದ ನಿರ್ದೇಶನಗಳನ್ನು ಚಾಚು ತಪ್ಪದೇ ಪಾಲಿಸಬೇಕು. ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇದ್ದು, ಚುನಾವಣೆ ಸಂಬಂಧ ಹದ್ದಿನ ಕಣ್ಣಿಡಬೇಕಿದೆ ಎಂದು ಅವರು ಹೇಳಿದರು.
ಮತಗಟ್ಟೆ ಕೇಂದ್ರಗಳು, ಮತದಾನ ಹಿಂದಿನ ದಿನ, ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್ ದಿನದಂದು ಅನುಸರಿಸಬೇಕಾದ ಕ್ರಮಗಳು ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.
ಸಹಾಯಕ ಚುನಾವಣಾಧಿಕಾರಿಗಳಾದ ಟಿ.ಜವರೇಗೌಡ, ಶ್ರೀನಿವಾಸ್, ಮಾಸ್ಟರ್ ತರಬೇತಿದಾರರಾದ ವಾಲ್ಟರ್ ಡಿಮೆಲ್ಲೋ, ಷಂಶುದ್ದೀನ್, ವಿವಿಧ ನೋಡಲ್ ಅಧಿಕಾರಿಗಳು, ಸೆಕ್ಟರ್ ಅಧಿಕಾರಿಗಳು ಇತರರು ಪಾಲ್ಗೊಂಡಿದ್ದರು.