ಮಡಿಕೇರಿ, ಮೇ 4: ಕೊಡಗು ಜಿಲ್ಲೆಯಲ್ಲಿ ಅನುಸೂಚಿತ ಬುಡಕಟ್ಟುಗಳು ಹಾಗೂ ಪಾರಂಪರಿಕ ಅರಣ್ಯ ವಾಸಿಗಳ ಅರಣ್ಯ ಹಕ್ಕು ಪತ್ರ ಸಂಬಂಧ ತಿರಸ್ಕøತವಾಗಿರುವ 1894 ಅರ್ಜಿಗಳನ್ನು ಮರು ಪರಿಶೀಲಿಸಲು ಅವಕಾಶವಿದ್ದು, ಈ ಸಂಬಂಧ ಮನವಿ ಸಲ್ಲಿಸಲು ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅರಣ್ಯ ಹಕ್ಕು ಕಾಯ್ದೆಯಡಿ ಇದುವರೆಗೆ 3,623 ಅರ್ಜಿಗಳು ಸ್ವೀಕೃತಗೊಂಡಿದ್ದು, ಇದರಲ್ಲಿ 1727 ಅರ್ಜಿಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಹಕ್ಕು ಪತ್ರ ವಿತರಿಸಲಾಗಿದೆ. ಉಳಿದಂತೆ 1894 ಅರ್ಜಿಗಳು ತಿರಸ್ಕøತಗೊಂಡಿವೆ. ಇವುಗಳನ್ನು ಮರು ಪರಿಶೀಲಿಸಲು ಅವಕಾಶವಿದ್ದು, ಈ ಬಗ್ಗೆ ಸಂಬಂಧಪಟ್ಟವರು ಮನವಿ ಸಲ್ಲಿಸಬಹುದು ಎಂದು ಅವರು ಹೇಳಿದರು.

ಈ ಬಗ್ಗೆ ಮಾಹಿತಿ ನೀಡಿದ ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಮಡಿಕೇರಿ ತಾಲೂಕಿನಲ್ಲಿ 758, ಸೋಮವಾರಪೇಟೆ ತಾಲೂಕಿನಲ್ಲಿ 315, ವೀರಾಜಪೇಟೆ ತಾಲೂಕಿನಲ್ಲಿ 821 ಅರ್ಜಿಗಳು ತಿರಸ್ಕøತಗೊಂಡಿವೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯ ಮಾಲ್ದಾರೆ, ತಿತಿಮತಿ ವ್ಯಾಪ್ತಿಯಲ್ಲಿನ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖಾ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬ ಬಗ್ಗೆ ದೂರುಗಳು ಕೇಳಿ ಬರುತ್ತಿದ್ದು, ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದರು.

ಜಿಲ್ಲೆಯ ಹಲವು ಹಾಡಿಗಳಿಗೆ ರಸ್ತೆ, ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯಗಳನ್ನು ಕಲ್ಪಿಸಿಲ್ಲ ಎಂಬ ದೂರುಗಳು ಇಂದಿಗೂ ಸಹ ಕೇಳಿ ಬರುತ್ತಿವೆ. ನಾಗರಹೊಳೆ, ಕೆದಮುಳ್ಳೂರು ಮತ್ತಿತರ ಹಾಡಿಗಳಲ್ಲಿ ಮೂಲ ಸೌಲಭ್ಯ ಕಲ್ಪಿಸಲು ತುರ್ತು ಕ್ರಮ ಕೈಗೊಳ್ಳುವಂತೆ ಅವರು ನಿರ್ದೇಶನ ನೀಡಿದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ಈಗಾಗಲೇ ಪೂರ್ಣಗೊಂಡಿರುವ ಮನೆಗಳೆಷ್ಟು, ವಿದ್ಯುತ್ ಸಂಪರ್ಕ ಕಲ್ಪಿಸಬೇಕಿರುವದು ಎಷ್ಟು, ಈಗಾಗಲೇ ಹಂಚಿಕೆಯಾಗಿರುವ ಮನೆಗಳಲ್ಲಿ ಅರ್ಹರು ವಾಸ ಮಾಡುತ್ತಿದ್ದಾರೆಯೇ ಎಂಬ ಮಾಹಿತಿಯನ್ನು ಜಿಲ್ಲಾಧಿಕಾರಿ ಅವರು ಪಡೆದರು.

ಈ ಬಗ್ಗೆ ಮಾಹಿತಿ ನೀಡಿದ ಸಂಬಂಧಪಟ್ಟ ಇಲಾಖೆಯವರು ಬಸವನಹಳ್ಳಿಯಲ್ಲಿ 138 ಮನೆಗಳು ಪೂರ್ಣಗೊಂಡಿದ್ದು, 127 ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನು 60 ಮನೆಗಳನ್ನು ನಿರ್ಮಿಸಬೇಕಿದೆ ಎಂದು ಅವರು ಮಾಹಿತಿ ನೀಡಿದರು. 138 ಕುಟುಂಬಗಳಲ್ಲಿ 6 ಕುಟುಂಬಗಳು ಹೊರತುಪಡಿಸಿ ಉಳಿದವರು ಮನೆಯಲ್ಲಿ ವಾಸ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳಿಗೆ ಸೇರ್ಪಡೆ ಮಾಡುವ ನಿಟ್ಟಿನಲ್ಲಿ ಹಿಂದೆ ಬಿದ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಇದೆ, ಹೆಚ್ಚಿನ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಮಾಡುವಂತಾಗಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಜೊತೆ ಚರ್ಚಿಸಲಾಗುವದು ಎಂದು ಅವರು ತಿಳಿಸಿದರು. ಆಶ್ರಮ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಗಿರಿಜನರು ಸ್ವತಃ ಮನೆ ನಿರ್ಮಿಸಿಕೊಳ್ಳವ ನಿಟ್ಟಿನಲ್ಲಿ 2010-11 ರಿಂದ ಬಾಕಿ ಇದ್ದು, ಮೂರು ನಾಲ್ಕು ತಿಂಗಳಲ್ಲಿ ಮನೆ ನಿರ್ಮಿಸಿಕೊಳ್ಳಲು ಮುಂದಾಗಬೇಕು. ಆದ್ದರಿಂದ ಈ ಸಂಬಂಧ ತಾ.ಪಂ.ಇಒಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಸೂಚಿಸಿದರು. ವೀರಾಜಪೇಟೆ ತಾ.ಪಂ. ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಹಂಚಲು ಪಂಚಾಯತ್ ರಾಜ್ ಇಲಾಖೆಯಲ್ಲಿ ಕಾಯ್ದಿರಿಸಲಾಗಿದ್ದ ಜಾಗದ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಒತ್ತುವರಿಯಾಗಿರುವ ಜಾಗವನ್ನು ಕೂಡಲೇ ತೆರವುಗೊಳಿಸಬೇಕು. ಈ ಸಂಬಂಧ ಸಮರ್ಪಕ ಮಾಹಿತಿ ಒದಗಿಸುವಂತೆ ಅವರು ಸೂಚಿಸಿದರು.

ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಮಾಡುವ ನಿಟ್ಟಿನಲ್ಲಿ ಬಡಾವಣೆ ನಿರ್ಮಾಣ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ತಾ.ಪಂ.ಇಒಗಳಿಗೆ ಅನೀಸ್ ಕಣ್ಮಣಿ ಜಾಯ್ ಸೂಚಿಸಿದರು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಅವರು ಪರಿಶಿಷ್ಟ ಪಂಗಡದವರಿಗೆ ನಿವೇಶನ ಕಲ್ಪಿಸಲು ನಿವೇಶನ ಲಭ್ಯತೆ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ನಾಗರಹೊಳೆ ವ್ಯಾಪ್ತಿಯ 5 ಹಾಡಿಗಳು ಹೊರತು ಪಡಿಸಿ ಉಳಿದ ಹಾಡಿಗಳಲ್ಲಿ ಅರಣ್ಯ ಇಲಾಖೆಯಿಂದ ಅನುಮತಿ ದೊರೆಯದ ಕಾರಣ ಯಾವದೇ ಮೂಲ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿಲ್ಲ ಎಂದು ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ಅವರು ಸಭೆಯ ಗಮನಕ್ಕೆ ತಂದರು. ಸೆಸ್ಕ್ ಇಲಾಖೆ ಎಇಇ ದೇವಯ್ಯ, ತಾ.ಪಂ.ಇಒ ಜಯಣ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಡಾ. ಶಿವಕುಮಾರ್, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿಗಳಾದ ಚಿಕ್ಕಬಸವಯ್ಯ (ಮಡಿಕೇರಿ), ಚಂದ್ರಶೇಖರ್ (ವೀರಾಜಪೇಟೆ), ಶೇಖರ್ (ಸೋಮವಾರಪೇಟೆ), ರಂಗನಾಥ್ ಇತರರು ಇದ್ದರು.