*ಗೋಣಿಕೊಪ್ಪಲು, ಮೇ 17 : ಪೊನ್ನಂಪೇಟೆ ಸಮೀಪದ ಹಳ್ಳಿಗಟ್ಟು ಭದ್ರಕಾಳಿ ಹಾಗೂ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೇಡು ಹಬ್ಬ ತಾ. 18ರಂದು (ಇಂದು) ಹಾಗೂ ತಾ. 19ನೇ (ನಾಳೆ) ನಡೆಯಲಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಚಮ್ಮಟೀರ ಕುಶಾಲಪ್ಪ ತಿಳಿಸಿದ್ದಾರೆ.

ತಾ. 18ರಂದು ಗುಂಡಿಯತ್ತ್ ಅಯ್ಯಪ್ಪ ದೇವರ ಅವುಲ್ ಹಾಗೂ ರಾತ್ರಿ ಮನೆ ಮನೆ ಕಳಿ ಊರು ತಕ್ಕರಾದ ಚಮ್ಮಟೀರ ಮನೆಯಿಂದ ಹೊರಡಲಿದೆ. ತಾ. 19ರಂದು ಕೃತಕವಾಗಿ ಶೃಂಗರಿಸಲಾದ ಒಂದು ಕುದುರೆ ಹಾಗೂ ಒಂದು ಮೊಗ ಚಮ್ಮಟೀರ ಹಾಗೂ ಮತ್ತೊಂದು ಕುದುರೆ ಹಾಗೂ ಮೊಗ ಮೂಕಳೇರ ಕುಟುಂಬದ ಮನೆಯಿಂದ ಹೊರಟು ದೇವಸ್ಥಾನದ ಸಮೀಪ ಅಂಬಲದಲ್ಲಿ ಸೇರಿ ಪರಸ್ಪರ ಕೆಸರು ಎರಚಾಟದ ನಂತರ ದೇವಸ್ಥಾನದಲ್ಲಿ ಹರಕೆ ಕಾಣಿಕೆ ಒಪ್ಪಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಹಬ್ಬದ ಆಚರಣೆ : ಇಂದು ಶನಿವಾರ ಮಧ್ಯಾಹ್ನ ನಂತರ ಮೇಲೆ ಸುಮಾರು 2 ಗಂಟೆಗೆ ಊರು ತಕ್ಕರಾದ ಚಮ್ಮಟೀರ ಕುಟುಂಬದ ಮನೆಯಿಂದ ಮೂಲ ನಿವಾಸಿಗಳಲ್ಲಿ ಒಬ್ಬರಾದ ಪಣಿಕ ಜನಾಂಗದಿಂದ ‘ಪೆÇಲವಂದೆರೆ’ ಹೊರಡುವ ಮೂಲಕ ಎರಡು ದಿನಗಳ ಹಬ್ಬಕ್ಕೆ ಚಾಲನೆ ದೊರೆಯಲಿದೆ. ನಂತರ ಊರಿನ ಮೂರು ನಿಗಧಿತ ದೇವರ ನೆಲೆಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪೆÇಲವಪ್ಪಂಡ ಕೋಟದಲ್ಲಿ (ಕೂಕಂಡ ಹಾಗೂ ಮೂಕಳೇರ ಬಲ್ಯ ಮನೆ ಹತ್ತಿರದ ದೇವಸ್ಥಾನ) ಊರಿನ ಜನರು, ಹೆಂಗಸರು, ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಇದಕ್ಕೆ ಮುಂಚೆ ಇಬ್ಬರು ಕೊಡವ ಪೂಜಾರಿಗಳು (ಒಬ್ಬರು ಚಮ್ಮಟೀರ ಹಾಗೂ ಮತ್ತೊಬ್ಬರು ಮೂಕಳೇರ) ಮೂಕಳೇರ ಬಲ್ಯಮನೆಯ ಹತ್ತಿರದ ದೇವರ ಕೆರೆಯಲ್ಲಿ ಸ್ನಾನ ಮಾಡಿ ವಿವಿಧ ವಿಧಿ ವಿಧಾನದೊಂದಿಗೆ ಭಂಡಾರ ಪೆಟ್ಟಿಗೆ ಶುದ್ಧಿಗೊಳಿಸಿ ನಂತರ ಕೆರೆಯ ಹತ್ತಿರದಲ್ಲಿ ಹೊಸ ಮಣ್ಣಿನ ಮಡಿಕೆಯಲ್ಲಿ ಭತ್ತವನ್ನು ಬೇಯಿಸಿ ಹದಗೊಳಿಸಿ ಕುಟ್ಟಿ ಅವಲಕ್ಕಿಯನ್ನು ಮಾಡಿ ದೇವರಿಗೆ ನೈವೇಧ್ಯ ತಯಾರು ಮಾಡಲಾಗುತ್ತದೆ.

ಈ ಇಬ್ಬರು ಪೂಜಾರಿಗಳು ಬೆಳಿಗ್ಗೆಯಿಂದಲೇ ಉಪವಾಸ ಹಾಗೂ ಬಹಳ ಕಟ್ಟು ನಿಟ್ಟಿನಲ್ಲಿರಬೇಕು. ನೀರು ಸಹ ಸೇವಿಸುವಂತಿಲ್ಲ. ಇವರು ಪೊಲವಪ್ಪಂಡ ಕೋಟ ಪ್ರವೇಶಿಸಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿ ನೆರೆದ ಭಕ್ತರಿಗೆ ಕುಟ್ಟಿ ತಯಾರಿಸಿದ ಅವಲಕ್ಕಿಗೆ ಬಾಳೆ ಹಣ್ಣು ಸೇರಿಸಿ ಅವುಲ್ ಮಾಡಿದನ್ನು ಪ್ರಸಾದವಾಗಿ ನೀಡುತ್ತಾರೆ. ಅಲ್ಲಿ ವಿಶೇಷ ಪೂಜೆಯ ನಂತರ ಸಂಜೆಯಾಗುತ್ತಿದ್ದಂತೆ ಪೊನ್ನಂಪೇಟೆ ಮುಖ್ಯ ರಸ್ತೆಯ ಜೋಡುಬೀಟಿಯಲ್ಲಿರುವ ಪ್ರಮುಖ ದೇವಾಲಯದಲ್ಲಿ ಒಂದಾದ ಗುಂಡಿಯತ್ ಅಯ್ಯಪ್ಪ ದೇವಸ್ಥಾನ ಪ್ರವೇಶಿಸುತ್ತಾರೆ. ಇಲ್ಲಿಗೆ ಹೆಂಗಸರು ಹೋಗುವಂತಿಲ್ಲ. ಹಾಗೂ ಈ ಎಲ್ಲಾ ದೇವಸ್ಥಾನಕ್ಕೂ ಕೂಡ ಬ್ರಾಹ್ಮಣರ ಪೂಜೆ ನಿಷೇಧವಾಗಿದೆ. ಇಲ್ಲಿ ಕೊಡವರೇ ಪೂಜಾರಿಗಳು. ಈ ದೇವಸ್ಥಾನದ ಸುತ್ತ ಶುಚಿಗೊಳಿಸಿ ಇಲ್ಲಿ ವಿಶೇಷ ಪೂಜೆ ಸಲ್ಲಿಸಿ ನೈವೇದ್ಯ ಅರ್ಪಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಭಕ್ತರು ಕೂಡ ಅತ್ಯಂತ ಶುದ್ಧತೆಯಿಂದ ಹೋಗಬೇಕಾಗಿದ್ದು, ಒಂದಿಷ್ಟು ಕೆಟ್ಟ ರೀತಿಯಿಂದ ನಡೆದುಕೊಂಡರೆ ಹೆಜ್ಜೇನು ಹಿಂಡು ಬೀಳುತ್ತದೆ ಎಂಬ ಪ್ರತೀತಿ ಇದೆ.

ಇಲ್ಲಿ ವಿಶೇಷ ಪೂಜೆಯ ನಂತರ ಹರಕೆ ಎಂಬಂತೆ ಸಾವಿರಾರು ತೆಂಗಿನಕಾಯಿಯನ್ನು ಈಡುಗಾಯಿ ರೂಪದಲ್ಲಿ ಭಕ್ತರು ಒಡೆದು ಹರಕೆ ತೀರಿಸಿಕೊಳ್ಳುತ್ತಾರೆ. ನಂತರ ಇಲ್ಲಿಂದ ಹೊರಟು ಇಲ್ಲಿನ ಸಮೀಪದ ನಿಗಧಿತ ಜಾಗದಲ್ಲಿ ತೆಂಗಿನ ಕಾಯಿ, ಬಾಳೆಹಣ್ಣು ತಿನ್ನುವ ಮೂಲಕ ಪೂಜಾರಿಗಳು ಉಪವಾಸವನ್ನು ಅಂತ್ಯಗೊಳಿಸುತ್ತಾರೆ. ಇಲ್ಲಿಂದ ಹೊರಟು ಮೂಕಳೇರ ಬಲ್ಯಮನೆಯಲ್ಲಿ ಸಾಮೂಹಿಕ ಬೋಜನ ಮಾಡಿ ನಂತರ ಚಮ್ಮಟೀರ ಬಲ್ಯ ಮನೆಗೆ ತೆರಳಿ ಅಲ್ಲಿ ವಿವಿಧ ವೇಷದಲ್ಲಿ ದೇವರ ಕಳಿ ಹಾಕಿ ಮನೆ ಮನೆ ಹೊರಡುತ್ತಾರೆ. ಈ ಹಿಂದೆ ಊರಿನ ಮನೆಯನ್ನೆಲ್ಲಾ ಸುತ್ತುತ್ತಿದ್ದು, ಇದೀಗ ಚಮ್ಮಟೀರ ಮಚ್ಚಿಯಂಡ ಹಾಗೂ ಮೂಕಳೇರ ಬಲ್ಯಮನೆಯಲ್ಲಿ ಈ ಕಳಿ ರಾತ್ರಿಯಿಡಿ ಸುತ್ತಲಾಗುತ್ತದೆ.

ತಾ. 19ರಂದು ಮಧ್ಯಾಹ್ನದ ನಂತರ ಚಮ್ಮಟೀರ ಹಾಗೂ ಮೂಕಳೇರ ಮನೆಯಿಂದ ಒಂದೊಂದು ಕುದುರೆ ಹಾಗೂ ಮೊಗವನ್ನು ಶೃಂಗರಿಸಿ ಅದನ್ನು ಹೊತ್ತು ಸುಮಾರು 3 ಗಂಟೆಯ ಬಳಿಕ ಊರಿನ ಪ್ರಮುಖ ದೇವಾಲಯವಾದ ಭದ್ರಕಾಳಿ ದೇವಸ್ಥಾನದ ಹತ್ತಿರದ ಅಂಬಲದಲ್ಲಿ ಸೇರಿ, ಎರಡು ಕಡೆಯಿಂದ ತಲಾ ಒಂದೊಂದು ಕುದುರೆ (ಕೃತಕವಾಗಿ ತಯಾರಿಸಿದ್ದು) ಹಾಗೂ ಮೊಗ ಮುಖಾಮುಖಿ ಆಗುತ್ತಿದ್ದಂತೆ ಪರಸ್ಪರ ಊರಿನವರು ಆಲಂಗಿಸಿಕೊಂಡು ಅಂಬಲದ ಸಮೀಪದ ದೇವರ ಕೆರೆಯಿಂದ ಕೆಸರನ್ನು ತಂದು ಪರಸ್ಪರ ಕೆಸರು ಎರಚಾಡಿ ಕೊಳ್ಳುವುದು ಇಲ್ಲಿನ ವಿಶೇಷವಾಗಿದೆ. ಹಿರಿಯರು ಕಿರಿಯರು ಮಕ್ಕಳು ಎಂಬ ಭೇದವಿಲ್ಲದೆ ಪರಸ್ಪರ ಕೆಸರು ಎರಚಾಡಿ ಆಲಂಗಿಸಿ ಕೊಳ್ಳುತ್ತಾರೆ. ಇಲ್ಲಿ ಹೆಂಗಸರಿಗೆ ಹಾಗೂ ಪರ ಊರಿನವರಿಗೆ ಹಾಗೂ ನೆಂಟರಿಗೆ ಕೆಸರು ಎರಚುವಂತಿಲ್ಲ. ಆದರೆ ಪರ ಊರಿನವರಿಗೆ ಹಾಗೂ ನೆಂಟರಿಗೆ ಮುಕ್ತವಾಗಿ ಇಲ್ಲಿ ಕುಣಿಯಲು ಅವಕಾಶವಿದೆ. ಅಂತಹವರಿಗೆ ಒಂದೊಂದು ಬೆತ್ತದ ಕೋಲು ನೀಡಲಾಗುತ್ತದೆ ಆ ಕೋಲು ಹಿಡಿದವರಿಗೆ ಕೆಸರು ಎರಚುವಂತಿಲ್ಲ ನಂತರ ಭದ್ರಕಾಳಿ ದೇವಸ್ಥಾನದಲ್ಲಿ ಸೇರಿ ಮೂರು ಸುತ್ತು ಬಂದು ಕಾಣಿಕೆ ಹಾಕುವ ಮೂಲಕ ಹಬ್ಬಕ್ಕೆ ತೆರೆ ಎಳೆಯಲಾಗುತ್ತದೆ.

ವರದಿ : ಎನ್.ಎನ್. ದಿನೇಶ್