ಮಡಿಕೇರಿ, ಮೇ 22 : ಭಾರತೀಯ ಸರ್ವೇಕ್ಷಣಾ ಇಲಾಖೆಯ ಮಧ್ಯಂತರ ವರದಿಯನ್ನು ಆಧರಿಸಿ, ಕರ್ನಾಟಕ ರಾಜ್ಯ ರಾಷ್ಟ್ರೀಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ (ಕೆಎಸ್ಎನ್ಡಿಎಂಸಿ), ಯುನಿಸೆಫ್ ಸಂಸ್ಥೆಗಳೊಂದಿಗೆ ಚರ್ಚಿಸಿದಂತೆ, ಲಭ್ಯವಿರುವ ಮಾಹಿತಿ ಮತ್ತು ದಾಖಲೆಗಳ ಆದಾರದಲ್ಲಿ ಕೊಡಗು ಜಿಲ್ಲೆಯಲ್ಲಿ 2019ರ ಮುಂಗಾರು ಮಳೆಯಲ್ಲಿ ಭೂ ಕುಸಿತ ಉಂಟಾಗಬಹುದಾದ ಕೆಲವು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ.
ಇಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಮುಂಜಾಗ್ರತೆಯಾಗಿ ತುರ್ತು ಪರಿಹಾರ ಕಾರ್ಯ ಕೈಗೊಳ್ಳಲು ಜಿಲ್ಲಾಡಳಿತ ವತಿಯಿಂದ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಅಗತ್ಯ ತುರ್ತು ಸಂದರ್ಭಗಳಲ್ಲಿ ಗುರುತಿಸಲಾಗಿರುವ ಸೂಕ್ಷ್ಮ ಪ್ರದೇಶಗಳ ಸಾರ್ವಜನಿಕರು ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ನೆರವು, ಸಲಹೆ ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ನೋಡಲ್ ಅಧಿಕಾರಿಗಳು ಮತ್ತು ಗ್ರಾಮ ಹೆಸರು: ನಿಡುವಟ್ಟು, ಬಾರಿಬೆಳ್ಳಚ್ಚು, ಹೆಬ್ಬೆಟ್ಟಗೇರಿ, ದೇವಸ್ತೂರು-ಕೃಷಿ ಇಲಾಖೆ ಉಪ ನಿರ್ದೇಶಕರಾದ ರಾಜು (8277931901), (9900594717). ತಂತಿಪಾಲ, ಬಾಡಿಗೇರಿ, ಮುಕ್ಕೋಡ್ಲು, ಮೇಘತ್ತಾಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ (9886907455). ಮಕ್ಕಂದೂರು, ಉದಯಗಿರಿಗೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಶಿವಕುಮಾರ್ (9741999571), ಕಾಟಕೇರಿ, ಮದೆ(ಜೋಡುಪಾಲ) 2ನೇ ಮೊಣ್ಣಂಗೇರಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಹೇಮಂತ್ ಕುಮಾರ್ (9980240966).
ಇಂತಹ ಪ್ರದೇಶಗಳಲ್ಲಿ ಮಳೆಗಾಲದಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಲ್ಲಿ ತುರ್ತಾಗಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ಪೊಲೀಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಅರಣ್ಯ ಇಲಾಖೆ, ವಿದ್ಯುತ್ ಇಲಾಖೆಗಳು ತಮ್ಮ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡಲಾಗುತ್ತಿದೆ.
ಅಲ್ಲದೆ ಇಂತಹ ಸೂಕ್ಷ್ಮ ಪ್ರದೇಶಗಳ ಜನರಲ್ಲಿ ಪ್ರಕೃತಿ ವಿಕೋಪ ಸಂಭವಿಸಿದಾಗ ವಹಿಸಬೇಕಾದ ತುರ್ತು ಕ್ರಮಗಳ ಬಗ್ಗೆ ಸಂಘ ಸಂಸ್ಥೆಗಳೂ, ಚುನಾಯಿತ ಪ್ರತಿನಿಧಿಗಳು ಮತ್ತು ನೋಡಲ್ ಅಧಿಕಾರಿಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಮುಂಬರುವ ಮಳೆಗಾಲದಲ್ಲಿ ವಿಕೋಪಗಳು ಎದುರಾದಲ್ಲಿ ಅದನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾಡಳಿತವು ಎಲ್ಲಾ ರೀತಿಯ ಸುರಕ್ಷಾ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ಯಾವದೇ ಊಹಾಪೋಹಗಳಿಗೆ ಕಿವಿಗೊಡದೆ, ವದಂತಿಗಳನ್ನು ಹರಡದೆ, ಎದೆಗುಂದದೆ ಜಿಲ್ಲಾಡಳಿತದೊಂದಿಗೆ ಸಹಕರಿಸಲು ಕೋರಿದೆ.ಜಿಲ್ಲೆಗೆ ಆಗಮಿಸುವ ಪ್ರವಾಸಿಗರೂ ಸಹ ಜಿಲ್ಲಾಡಳಿತ ಆಗಿಂದಾಗ್ಗೆ ನೀಡುವ ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಮುಂಜಾಗ್ರತೆ ವಹಿಸಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.