ಮಡಿಕೇರಿ, ಜೂ. 4: ತಾ. 17ರ ವರೆಗೆ ಹಮ್ಮಿಕೊಳ್ಳಲಾಗಿರುವ ಅತಿಸಾರ ಭೇದಿ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್ ಸೋಮವಾರ ಚಾಲನೆ ನೀಡಿದರು.

ನಗರದ ಜಿಲ್ಲಾಸ್ಪತ್ರೆಯ ಸೆಮಿನಾರ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಅತಿಸಾರ ಭೇದಿ ತೀವ್ರ ನಿಯಂತ್ರಣ ಪಾಕ್ಷಿಕ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಷ್ಟ್ರದಲ್ಲಿ ಅತಿಸಾರ ಭೇದಿಯಿಂದ ಸಾವಿರಾರು ಮಕ್ಕಳು ಸಾವನ್ನಪ್ಪುತ್ತಿದ್ದಾರೆ. ಆದ್ದರಿಂದ ಅತಿಸಾರ ಭೇದಿ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವದು ಅಗತ್ಯ. ಆ ನಿಟ್ಟಿನಲ್ಲಿ ಸ್ವಚ್ಛತೆ ಕಡೆ ವಿಶೇಷ ಗಮನ ಹರಿಸಬೇಕಿದೆ ಎಂದರು.

ದೇಶದಲ್ಲಿ ಅತಿಸಾರ ಭೇದಿಯಿಂದ ಶೇ.10 ರಷ್ಟು ಮಕ್ಕಳು ಸಾವನ್ನಪ್ಪುತ್ತಿ ದ್ದಾರೆ. ಅತಿಸಾರ ಭೇದಿಯಿಂದ ಸಾವನ್ನಪ್ಪುವದನ್ನು ನಿಯಂತ್ರಣ ಮಾಡಲು ಮಕ್ಕಳ ದೇಹದಲ್ಲಿ ನೀರಿನಾಂಶ ಕಡಿಮೆಯಾಗದಂತೆ ನೋಡಿಕೊಳ್ಳಬೇಕಿದೆ. ಆ ದಿಸೆಯಲ್ಲಿ ಭೇದಿಯಾದ ತಕ್ಷಣ ಆಸ್ಪತ್ರೆಗೆ ಮಗು ವನ್ನು ಕರೆದುಕೊಂಡು ಹೋಗಬೇಕು ಎಂದು ಸಲಹೆ ನೀಡಿದರು.

ಆಶಾ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಐದು ವರ್ಷ ದೊಳಗಿನ ಮಕ್ಕಳಿಗೆ ಒಆರ್‍ಎಸ್. ಪೊಟ್ಟಣ ವಿತರಣೆ ಮಾಡಲಿದ್ದಾರೆ. ಜೊತೆಗೆ ಗುಂಪು ಸಭೆಗಳನ್ನು ನಡೆಸಿ ಪ್ರಾತ್ಯಕ್ಷಿಕೆ ಮೂಲಕ ಮಕ್ಕಳಿಗೆ ಒಆರ್‍ಎಸ್. ನೀಡುವ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅತಿಸಾರ ಭೇದಿ ನಿಯಂತ್ರಣ ಸಂಬಂಧ ತಾ. 17ರವರಗೆ ಪಾಕ್ಷಿಕ ಅಭಿಯಾನ ಹಮ್ಮಿಕೊಳ್ಳ ಲಾಗಿದೆ. ಆ ನಿಟ್ಟಿನಲ್ಲಿ ಒಆರ್‍ಎಸ್ ಪೊಟ್ಟಣ ನೀಡುವದು ಜೊತೆಗೆ ಝಿಂಕ್ ಮಾತ್ರೆಯನ್ನು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

ಆರ್‍ಸಿಎಚ್ ಅಧಿಕಾರಿ ಡಾ. ಆನಂದ್ ಮಾತನಾಡಿ ಅತಿಸಾರ ಭೇದಿಯಿಂದ ಉಂಟಾಗುವ ಶಿಶು ಮರಣ ತಡೆಯುವ ನಿಟ್ಟಿನಲ್ಲಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಜಿ.ಪಂ. ಸಹಾಯಕ ಕಾರ್ಯದರ್ಶಿ ಬಾಬು, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಕಾರ್ಯಪ್ಪ, ಪ್ರಾಧ್ಯಾಪಕ ಡಾ. ರಾಮಚಂದ್ರ ಕಾಮತ್, ಸಾಂಕ್ರಾಮಿಕ ರೋಗಗಳ ನಿಯಂತ್ರಣಾಧಿಕಾರಿ ಡಾ. ಎಂ. ಶಿವಕುಮಾರ್, ಕ್ಷಯರೋಗ ನಿಯಂತ್ರಣಾಧಿಕಾರಿ ಎ.ಸಿ. ಶಿವಕುಮಾರ್, ಮಕ್ಕಳ ತಜ್ಞರಾದ ಡಾ. ಪುರುಷೋತ್ತಮ ಇತರರು ಇದ್ದರು. ಕೆ. ಶೋಭಾ ಪ್ರಾರ್ಥಿಸಿದರು. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಮೇಶ್ ನಿರೂಪಿಸಿ, ವಂದಿಸಿದರು.