ಮಡಿಕೇರಿ, ಜೂ. 18: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ರೈತರ ಆದಾಯ ವೃದ್ಧಿಸಲು ಜಿಲ್ಲೆಯ ಎಲ್ಲಾ ರೈತ ಕುಟುಂಬಗಳಿಗೆ ಪ್ರತಿ ವರ್ಷ ರೂ.6 ಸಾವಿರಗಳನ್ನು ಪ್ರತಿ 4 ತಿಂಗಳಿಗೊಮ್ಮೆಯಂತೆ ಒಟ್ಟು 3 ಸಮಾನ ಕಂತುಗಳಲ್ಲಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ರೈತರು ತಮ್ಮ ಆಧಾರ್ ಸಂಖ್ಯೆ, ಪಹಣಿ ವಿವರಗಳು ಹಾಗೂ ಬ್ಯಾಂಕ್ ಖಾತೆಯ ವಿವರಗಳೊಂದಿಗೆ ಹತ್ತಿರದ ಗ್ರಾಮ ಪಂಚಾಯಿತಿ ಕಚೇರಿಯ ಬಾಪೂಜಿ ಸೇವಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರ ಅಥವಾ ಜನ ಸ್ನೇಹಿ ಕೇಂದ್ರಗಳಲ್ಲಿ ಸ್ವಯಂ ಘೋಷಣಾ ಪತ್ರದೊಂದಿಗೆ ತಾ. 25 ರೊಳಗೆ ನೋಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ. ಅನರ್ಹತೆಗಳು: ನಿವೃತ್ತ, ಹಾಲಿ ಸೇವೆಯಲ್ಲಿರುವ ಸರ್ಕಾರಿ ಅಧಿಕಾರಿ, ನೌಕರರು (ಗ್ರೂಫ್ ಡಿ ಹೊರತು), 10 ಸಾವಿರ ರೂ.ಗಿಂತ ಹೆಚ್ಚಿನ ಮೊತ್ತ ಪಡೆಯುತ್ತಿರುವ ಪಿಂಚಣಿದಾರರು, ಆದಾಯ ತೆರಿಗೆ ಪಾವತಿದಾರರು, ವೃತ್ತಿಪರರು (ವೈದ್ಯರು, ಅಭಿಯಂತರರು, ವಕೀಲರು ಮತ್ತು ಇತರೆ), ಮಾಜಿ ಮತ್ತು ಹಾಲಿ ಸಾಂವಿಧಾನಿಕ ಹುದ್ದೆ ಹೊಂದಿದವರಿಗೆ ಅವಕಾಶವಿರುವದಿಲ್ಲ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕ ರಾಜು ಅವರು ತಿಳಿಸಿದ್ದಾರೆ.