ಸೋಮವಾರಪೇಟೆ, ಜು. 15: ಕಳೆದ ಅನೇಕ ದಶಕಗಳಿಂದ ಸುಣ್ಣಬಣ್ಣ ಕಾಣದೆ ನೆಲೆ ನಿಂತಿರುವ ಮಿನಿ ವಿಧಾನಸೌಧ ಬೀಳುವ ಮುನ್ನ ಸರ್ಕಾರ ಎಚ್ಚರಿಕೆ ವಹಿಸಬೇಕಿದೆ. ಪ್ರತಿ ಮಳೆಗಾಲದಲ್ಲೂ ಕಟ್ಟಡದ ಒಳಭಾಗದಲ್ಲಿ ಮಳೆ ನೀರಿನಿಂದ ರಕ್ಷಣೆ ಪಡೆಯಲು ಟಾರ್ಪಲ್ ಮೊರೆ ಹೋಗಲಾಗುತ್ತಿದೆ.
ಕಳೆದ ಕೆಲ ದಶಕಗಳಿಂದೀಚೆಗೆ ತಾಲೂಕು ಕಚೇರಿ ಕಟ್ಟಡ ಶಿಥಿಲಾಸ್ಥೆಗೆ ತಲಪುತ್ತಿದ್ದು, ಮಳೆಗಾಲ ಕಳೆಯುವದು ಸಿಬ್ಬಂದಿಗಳಿಗೆ ಹಗ್ಗದ ಮೇಲಿನ ನಡಿಗೆಯಂತಾಗಿದೆ. ಈ ವರ್ಷದ ಮಳೆಗಾಲಕ್ಕೆ ಕಟ್ಟಡ ದುರಸ್ತಿಯಾಗುವದಿಲ್ಲ ಎಂಬದು ಬಹುತೇಕ ಖಚಿತವಾಗಿದೆ. ಏಕೆಂದರೆ ಇದುವರೆಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ.
ತಾಲೂಕಿನ ಮಿನಿವಿಧಾನಸೌಧ ಮಳೆಗಾಲದಲ್ಲಿ ಸೋರಲು ಪ್ರಾರಂಭಿಸಿ ವರ್ಷಗಳೇ ಕಳೆದಿವೆ. ಆದರೆ ಇದುವರೆಗೆ ಕಟ್ಟಡ ದುರಸ್ತಿಗೆ ಸರ್ಕಾರ ಅನುದಾನ ಕಲ್ಪಿಸದ ಹಿನ್ನೆಲೆ, ಕಂದಾಯ ಇಲಾಖೆಯ ಸಾವಿರಾರು ಕಡತಗಳನ್ನು ರಕ್ಷಣೆ ಮಾಡಿಕೊಳ್ಳುವದಕ್ಕೆ ಹರಸಾಹಸ ಪಡಬೇಕಾಗಿದೆ.
1997ರಲ್ಲಿ ನಿರ್ಮಾಣವಾದ ತಾಲೂಕು ತಹಶೀಲ್ದಾರರ ಕಟ್ಟಡಕ್ಕೆ ಮಿನಿ ವಿಧಾನಸೌಧ ಎಂದು ನಾಮಕರಣ ಮಾಡಲಾಗಿದೆ. 22 ವರ್ಷಗಳ ಹಿಂದೆ ಈ ಕಟ್ಟಡಕ್ಕೆ ಸುಮಾರು 1 ಕೋಟಿ ರೂ.ಗಳನ್ನು ವಿನಿಯೋಗಿಸಲಾಗಿದೆ.
ಕಟ್ಟಡದಲ್ಲಿ ತಹಸೀಲ್ದಾರ್ ಕಚೇರಿ, ಖಜಾನೆ, ಚುನಾವಣೆ ಶಾಖೆ, ಆರ್ಟಿಸಿ ವಿತರಣಾ ಕೇಂದ್ರ, ನೆಮ್ಮದಿ ಕೇಂದ್ರ, ಆಹಾರ ಮತ್ತು ನಾಗರಿಕ ಸರಬರಾಜು ಕೇಂದ್ರ, ಭೂಮಿ ಇಲಾಖೆ, ಅಭಿಲೇಖಾಲಯ ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಪಟ್ಟ ಎಲ್ಲಾ ವಿಭಾಗಗಳು ಈ ಕಟ್ಟಡದಲ್ಲೇ ಕಾರ್ಯನಿರ್ವಹಿಸುತ್ತಿವೆ. ಧಾರಾಕಾರ ಮಳೆ ಸುರಿದರೆ ಕೊಠಡಿಗಳ ಮೇಲ್ಚಾವಣಿಯಲ್ಲಿ ನೀರು ಜಿನುಗುತ್ತದೆ. ಬಹುತೇಕ ವಿಭಾಗಗಳು ಕಂಪ್ಯೂಟರೀಕರಣಗೊಂಡಿದ್ದು, ಶೀತಕ್ಕೆ ಕಂಪ್ಯೂಟರ್ಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳುವದೇ ಕಷ್ಟಕರ ಎಂದು ಸಿಬ್ಬಂದಿಗಳು ಅಳಲುತೋಡಿಕೊಳ್ಳುತ್ತಿದ್ದಾರೆ. ಆರ್ಟಿಸಿ ವಿತರಿಸುವ ವಿಭಾಗದಲ್ಲಿ ಪ್ರತಿವರ್ಷ ಮಳೆಗಾಲದಲ್ಲಿ ಮೇಲ್ಚಾವಣಿಗೆ ಪ್ಲಾಸ್ಟಿಕ್ ಹೊದಿಕೆಯನ್ನು ಕಟ್ಟಿ ಮಳೆ ನೀರಿನಿಂದ ಬಚಾವಾಗುವ ಪ್ರಯತ್ನ ಮಾಡಲಾಗಿದೆ. ರೆಕಾರ್ಡ್ ರೂಂನಲ್ಲಿ 1.37 ಲಕ್ಷಕ್ಕೂ ಅಧಿಕ ಕಡತಗಳಿದ್ದು, ಅವುಗಳ ರಕ್ಷಣೆಗೆ ಹರಸಾಹಸ ಪಡಲಾಗುತ್ತಿದೆ. ಭೂಮಿ ಕೇಂದ್ರದಲ್ಲಿ ಮೇಲ್ಚಾವಣಿ ಹಾಗೂ ಗೋಡೆಗಳಲ್ಲಿ ನೀರು ಸೋರುತ್ತಿದೆ.
ತಾಲೂಕಿನ ಆರು ಹೋಬಳಿ, 298 ಗ್ರಾಮಗಳ ಜನರು ಕಂದಾಯ, ಆಹಾರ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಕೆಲಸ ಕಾರ್ಯಗಳಿಗೆ ಮಿನಿ ವಿಧಾನಸೌಧಕ್ಕೆ ಬರುತ್ತಾರೆ. ಸಂತೆ ದಿನವಾದ ಸೋಮವಾರ ನೂರಾರು ಮಂದಿ ಕಟ್ಟಡದೊಳಗೆ ಇರುತ್ತಾರೆ. ಕಳೆದ ಐದು ವರ್ಷಗಳಿಂದ ಕಟ್ಟಡ ಸೋರುತ್ತಿದ್ದು, ಗೋಡೆಗಳು ಶಿಥಿಲಗೊಂಡಿರುವ ಹಿನ್ನೆಲೆ ಕಟ್ಟಡದ ಗಟ್ಟಿತನದ ಬಗ್ಗೆ ಆತಂಕವೂ ಎದುರಾಗಿದೆ.
ಕಳೆದ ಹಲವು ವರ್ಷಗಳಿಂದ ಕಟ್ಟಡ ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪತ್ರ ಬರೆಯಲಾಗುತ್ತಿದೆ. ಜಿಲ್ಲೆಯ ಹಿಂದಿನ ಉಸ್ತುವಾರಿ ಸಚಿವರುಗಳಾದ ಕೆ.ಜೆ.ಜಾರ್ಜ್, ದಿನೇಶ್ ಗುಂಡೂರಾವ್, ಎಂ.ಆರ್.ಸೀತಾರಾಮ್, ಕಂದಾಯ ಇಲಾಖೆಯ ಮಾಜಿ ಸಚಿವ ಕಾಗೋಡು ತಿಮ್ಮಪ್ಪ, ಆರೋಗ್ಯ ಇಲಾಖೆಯ ಮಾಜಿ ಸಚಿವ ಯು.ಟಿ.ಖಾದರ್ ಅವರಿಗೂ ಮನವಿ ಸಲ್ಲಿಸಲಾಗಿದೆ. ಇದುವರೆಗೆ ಕಟ್ಟಡ ದುರಸ್ತಿಗೆ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ ಎಂದು ಅಧಿಕಾರಿಗಳು ನಿರಾಶೆ ವ್ಯಕ್ತಪಡಿಸುತ್ತಿದ್ದಾರೆ.
ಇದರೊಂದಿಗೆ ಕಟ್ಟಡಕ್ಕೆ ಅಳವಡಿಸಿದ್ದ ಕಿಟಕಿಗಳು ಒಡೆದು ಮಳೆಯ ಎರಚಲು ನೀರು ಕಚೇರಿಯೊಳಗೆ ಬರುತ್ತಿದೆ. ಇದರಿಂದ ರಕ್ಷಣೆ ಪಡೆಯಲು ಕಿಟಕಿಗಳಿಗೆ ಪ್ಲಾಸ್ಟಿಕ್ ಕಟ್ಟಲಾಗಿದೆ. ಇಂತಹ ದುಸ್ಥಿತಿಯಲ್ಲಿರುವ ತಾಲೂಕು ಕಚೇರಿ ಜಿಲ್ಲೆಯಲ್ಲಿ ಬೇರಾವದೂ ಇಲ್ಲ. ಶಾಸಕರ ಕಚೇರಿಯ ಹಿಂಭಾಗದಲ್ಲಿರುವ ತಾಲೂಕು ಕಚೇರಿಯ ಬಗ್ಗೆ ಶಾಸಕರೂ ಗಮನ ಹರಿಸಬೇಕಿದೆ ಎಂಬ ಆಗ್ರಹ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.
- ವಿಜಯ್ ಹಾನಗಲ್