ಕುಶಾಲನಗರ, ಜು. 19: ನದಿಯ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಸ್ವಚ್ಛ ಕಾವೇರಿ ನಿರ್ಮಾಣವಾಗಬೇಕು ಎಂದು ಖಾಸಗಿ ಬಸ್ ಮಾಲೀಕರ ಸಂಘದ ಕಾರ್ಯದರ್ಶಿ ಬಿ. ಜನಾರ್ಧನ ಪ್ರಭು ಕರೆ ನೀಡಿದ್ದಾರೆ.

ಕುಶಾಲನಗರ ಅಯ್ಯಪ್ಪಸ್ವಾಮಿ ದೇವಾಲಯ ಬಳಿ ಕಾವೇರಿ ಮಹಾ ಆರತಿ ಬಳಗದ ಆಶ್ರಯದಲ್ಲಿ ನಡೆದ 96ನೇ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅರ್ಚಕ ಕೃಷ್ಣಮೂರ್ತಿ ಭಟ್ ಕುಂಕುಮಾರ್ಚನೆ, ಅಷ್ಟೋತ್ತರ ನೆರವೇರಿಸಿದರು. ನಂತರ ನದಿಗೆ ಸಾಮೂಹಿಕವಾಗಿ ಮಹಾಆರತಿ ಬೆಳಗಲಾಯಿತು. ಇದೇ ಸಂದರ್ಭ ಮಳೆಗಾಗಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಹಾ ಆರತಿ ಬಳಗದ ಪ್ರಮುಖರಾದ ಎಂ.ಎನ್. ಚಂದ್ರಮೋಹನ್, ಡಿ.ಆರ್. ಸೋಮಶೇಖರ್, ಕೆ.ಆರ್. ಶಿವಾನಂದನ್, ಮಂಡೇಪಂಡ ಬೋಸ್ ಮೊಣ್ಣಪ್ಪ, ಬಿ.ಜೆ. ಅಣ್ಣಯ್ಯ, ಡಿ.ಎಸ್. ಅಂಬರೀಷ್, ಖಾಸಗಿ ಬಸ್ ಮಾಲೀಕರ ಸಂಘದ ಪ್ರಮುಖರಾದ ಉದಯ್, ಗಣೇಶ್, ದಯಾನಂದ ಮತ್ತಿತರರು ಇದ್ದರು.

ಗುರುಪೂರ್ಣಿಮ ಅಂಗವಾಗಿ ಕುಶಾಲನಗರದ ಕೊಪ್ಪ ಕಾವೇರಿ ಸೇತುವೆ ಬಳಿ ಕಾವೇರಿ ಪ್ರತಿಮೆಗೆ ಅಭಿಷೇಕ, ಪೂಜಾ ಕಾರ್ಯಕ್ರಮಗಳು ನಡೆದವು. ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಬಾರವಿ ಕನ್ನಡ ಸಂಘದ ಬಬೀಂದ್ರಪ್ರಸಾದ್, ರವೀಂದ್ರಪ್ರಸಾದ್, ವಿಜಯೇಂದ್ರಪ್ರಸಾದ್ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.