ಮಡಿಕೇರಿ, ಆ. 24: ರಾಜ್ಯ ಸರ್ಕಾರಿ ನಿವೃತ್ತ ನೌಕರರ ಕುಂದುಕೊರತೆ ಪರಿಹರಿಸುವ ಸಂಬಂಧ ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಸಭೆ ನಡೆಯಿತು.

ಸರ್ಕಾರಿ ನಿವೃತ್ತ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹಮ್ಮದ್, ಭಾರತೀಯ ಸ್ಟೇಟ್ ಬ್ಯಾಂಕ್‍ನ ವ್ಯವಸ್ಥಾಪಕ ದಿನೇಶ್ ಪೈ, ಸಹಾಯಕ ಖಜಾನಾಧಿಕಾರಿ ಕಲ್ಪನಾ, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ ಋಣ ನಿರ್ವಹಣೆಯ ಸಹಾಯಕ ನಿರ್ದೇಶಕ ಎಂ.ಪಿ. ಪ್ರಸನ್ನ ಉಪಸ್ಥಿತಿಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಮಾತನಾಡಿದ ನಿವೃತ್ತ ನೌಕರ ವೈ.ಸಿ. ಬಿದ್ದಪ್ಪ ಸರ್ಕಾರದಿಂದ ನಿವೃತ್ತರಿಗೆ ದೊರೆಯುವ ಸೌಲಭ್ಯಗಳು ಸರಿಯಾದ ಸಮಯದಲ್ಲಿ ದೊರೆಯಬೇಕು. ಇಲ್ಲದಿದ್ದಲ್ಲಿ ತೊಂದರೆಗೆ ಸಿಲುಕಬೇಕಾಗುತ್ತದೆ ಎಂದು ಹೇಳಿದರು.

ನಿವೃತ್ತ ನೌಕರರಿಗೆ ಸರ್ಕಾರದ ಸೌಲಭ್ಯಗಳು ಸಕಾಲದಲ್ಲಿ ದೊರೆತಾಗ ನಿವೃತ್ತಿ ಜೀವನ ನಡೆಸಲು ಸಾಧ್ಯ. ಆ ನಿಟ್ಟಿನಲ್ಲಿ ಯಾವದೇ ರೀತಿ ವಿಳಂಬ ಮಾಡದೆ ಪಿಂಚಣಿ ಸೌಲಭ್ಯವನ್ನು ಒದಗಿಸಬೇಕು ಎಂದು ಕುಶಾಲನಗರದ ನಿವೃತ್ತ ನೌಕರರ ಸಂಘದ ಅಧ್ಯಕ್ಷ ರಾಘವೇಂದ್ರ ಹೇಳಿದರು.