ಮಡಿಕೇರಿ, ಸೆ. 7: ಕೌಶಲ್ಯಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಹೆಚ್ಚಿನ ಮುತುವರ್ಜಿ ವಹಿಸಿ ಅನುಷ್ಠಾನ ಗೊಳಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್‍ನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯುವಕರಿಗೆ ಹಾಗೂ ನಿರುದ್ಯೋಗಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವದರಿಂದ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಹಕಾರಿಯಾಗಿದ್ದು, ತರಬೇತಿ ಪಡೆದ ಯುವ ಸಮುದಾಯಕ್ಕೆ ಆರ್ಥಿಕವಾಗಿ ಸ್ವಾವಲಂಭಿಯಾಗಲು ಸಹಾಯವಾಗಲಿದೆ ಎಂದು ತಿಳಿಸಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗನ್ನಾಥ್ ಮಾತನಾಡಿ, 2019-20ನೇ ಸಾಲಿನಲ್ಲಿ ವಿವಿಧ ಇಲಾಖೆಗಳಿಂದ ಅನುಷ್ಠಾನಗೊಳ್ಳುತ್ತಿರುವ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳ ವಿವರಗಳು ಮತ್ತು ರಾಜ್ಯ ಕೌಶಲ್ಯ ಮಿಷನ್‍ನಿಂದ ಅನುಮೋದನೆಗೊಂಡಿರುವ ತರಬೇತಿ ಸಂಸ್ಥೆಗಳ ಮುಖಾಂತರ ಅಯೋಜಿಸಬೇಕಾದ ಕೌಶಲ್ಯಾಭಿವೃದ್ಧಿ ತರಬೇತಿ ಕುರಿತು ಹಾಗೂ ಸರ್ಕಾರಿ ಮತ್ತು ಅರೆ ಸರ್ಕಾರಿ ಸಂಸ್ಥೆಗಳಿಂದ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವ ಬಗ್ಗೆ ಸಭೆಗೆ ತಿಳಿಸಿದರು.

2019-20ನೇ ಸಾಲಿನ ಜಿಲ್ಲಾ ಕೌಶಲ್ಯ ಮಿಷನ್‍ಗೆ ನಿಗದಿಪಡಿಸಿರುವ ಆರ್ಥಿಕ ಹಾಗೂ ಭೌತಿಕ ಗುರಿಗಳ ಸಾಧನೆಗೆ ಕ್ರಿಯಾ ಯೋಜನೆಯನ್ನು ಸಿದ್ದ ಪಡಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಸಭೆಯಲ್ಲಿ ವಿವಿಧ ಇಲಾಖೆಯ ಜಿಲ್ಲಾಮಟ್ಟದ ಅಧಿಕಾರಿಗಳು ಇತರರು ಇದ್ದರು.