ಬೆಂಗಳೂರು, ಸೆ. 10: ರಾಜ್ಯ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ ಹಾಗೂ ನಾಟಕ ಅಕಾಡೆಮಿ ಅಧ್ಯಕ್ಷ ಸ್ಥಾನಗಳಿಗೆ ಈ ಹಿಂದಿನ ಸರಕಾರ ನೇಮಕ ಮಾಡಿದ್ದ ಆದೇಶವನ್ನು ಈಗಿನ ಸರಕಾರ ಹಿಂಪಡೆದಿರುವ ಕ್ರಮ ಕಾನೂನು ಬಾಹಿರ ಎಂದು ಆಕ್ಷೇಪಿಸಲಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತುರ್ತು ನೋಟೀಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ನಾಟಕ ಅಕಾಡೆಮಿ ಅಧ್ಯಕ್ಷರಾಗಿದ್ದ ಜೆ. ಲೋಕೇಶ್ ಮತ್ತು ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಪೆಮ್ಮಂಡ ಕೆ. ಪೊನ್ನಪ್ಪ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರು ಮತ್ತು ನಾಟಕ ಅಕಾಡೆಮಿ ರಿಜಿಸ್ಟ್ರಾರ್ ಅವರಿಗೂ ತುರ್ತು ನೋಟೀಸ್ ಜಾರಿಗೆ ಆದೇಶಿಸಿದ ನ್ಯಾಯಪೀಠ, ಈ ಕುರಿತಂತೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ವಿಚಾರಣೆಯನ್ನು ಇದೇ ತಾ. 26ಕ್ಕೆ ಮುಂದೂಡಲಾಗಿದೆ.
ನೇಮಕಾತಿ ರದ್ದುಗೊಳಿಸಿ 2019ರ ಜುಲೈ 31 ರಂದು ಹೊರಡಿಸಿ ರುವ ಸರ್ಕಾರದ ಆದೇಶ ನೇಮಕಾತಿ ಷರತ್ತುಗಳಿಗೆ ವಿರುದ್ಧವಾಗಿದೆ. ಇದರಲ್ಲಿ ಅಕಾಡೆಮಿ ಅಥವಾ ಸಾರ್ವಜನಿಕರ ಹಿತಾಸಕ್ತಿ ಅಡಗಿಲ್ಲ. ಹೀಗಾಗಿ ಈತನಕ ಹೊಸ ಅಧ್ಯಕ್ಷರ ನೇಮಕಾತಿ ನಡೆದಿಲ್ಲ. ಸರ್ಕಾರ ತನ್ನಿಷ್ಟಕ್ಕೆ ತಕ್ಕಂತೆ ನೇಮಕಾತಿ ರದ್ದುಗೊಳಿಸಿರುವದು ಏಕಪಕ್ಷೀಯ ವಾಗಿದೆ ಎಂದು ಅರ್ಜಿದಾರರು ಆಕ್ಷೇಪಿಸಿದ್ದಾರೆ. ಅರ್ಜಿದಾರರ ಪರ ವಕೀಲ ಎ.ಎಸ್. ಪೊನ್ನಣ್ಣ ವಾದ ಮಂಡಿಸಿದರು.