ಮಡಿಕೇರಿ, ಅ.26 : ಕಳೆದ ವರ್ಷ ಕೊಡಗಿನಲ್ಲಿ ಸಂಭವಿಸಿದ ಮಹಾಮಳೆ ಹಾನಿಯ ಸಂದರ್ಭ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಕಾಲದಲ್ಲಿ ಸ್ಪಂದಿಸಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿ ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಆದರೆ ಮನೆಗಳ ಹಸ್ತಾಂತರದ ಸಂದರ್ಭ ಇಂದಿನ ಬಿಜೆಪಿ ಸರ್ಕಾರ ಕುಮಾರಸ್ವಾಮಿ ಅವರನ್ನು ಕಡೆಗಣಿಸಿದೆ ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಆರೋಪಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು, ತಾ.25 ರಂದು ಸಂತ್ರಸ್ತರಿಗಾಗಿ ಮೊದಲ ಹಂತದಲ್ಲಿ 35 ಮನೆಗಳನ್ನು ಹಸ್ತಾಂತರಿಸಲಾಗಿದೆ. ಆದರೆ ಈ ಸಮಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅವರನ್ನು ಆಹ್ವಾನಿಸದೇ ಇರುವದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೊಡಗು ಜಿಲ್ಲೆ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಮಹಾಮಳೆಯಿಂದ ಸಂಕಷ್ಟಕ್ಕೆ ಸಿಲುಕಿದಾಗ ಜನರಲ್ಲಿ ಆತ್ಮಸ್ಥೈರ್ಯ ತುಂಬಿದವರು ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾ.ರಾ.ಮಹೇಶ್ ಅವರುಗಳು. ಇಂದು ಜಿಲ್ಲೆಯ ವಿವಿಧೆಡೆ ನೊಂದ ಸಂತ್ರಸ್ತರಿಗಾಗಿ ಎಂಟುನೂರಕ್ಕೂ ಹೆಚ್ಚು ಸುಸಜ್ಜಿತ ಮತ್ತು ಗುಣಮಟ್ಟದ ಮನೆಗಳು ನಿರ್ಮಾಣಗೊಳ್ಳುತ್ತಿವೆ ಎಂದರೆ ಅದಕ್ಕೆ ಪ್ರಮುಖ ಕಾರಣ ಇವರಿಬ್ಬರು.
ಆದರೆ ಮನೆಗಳ ಹಸ್ತಾಂತರದ ಸಂದರ್ಭ ಸೌಜನ್ಯಕ್ಕಾದರೂ ಕುಮಾರಸ್ವಾಮಿ ಮತ್ತು ಸಾ.ರಾ.ಮಹೇಶ್ ಅವರನ್ನು ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಗಣೇಶ್ ಆರೋಪಿಸಿದ್ದಾರೆ.