ಮಡಿಕೇರಿ, ನ. 9: ಐತಿಹಾಸಿಕ ಅಯೋಧ್ಯೆ ತೀರ್ಪು ಪ್ರಕಟಿಸಿರುವ ಐವರು ನ್ಯಾಯಮೂರ್ತಿಗಳ ಬಗ್ಗೆ ವಿವರ ಹೀಗಿದೆ.ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್
ಮುಖ್ಯ ನ್ಯಾಯಮೂರ್ತಿಗಳಾಗಿರುವ ರಂಜನ್ ಗೊಗೊಯ್ ಅಸ್ಸಾಂ ಮೂಲದವರು. ದೇಶದ ಈಶಾನ್ಯ ಭಾಗದಿಂದ ನ್ಯಾಯಾಂಗ ವ್ಯವಸ್ಥೆಯಲ್ಲಿ ಉನ್ನತ ಸ್ಥಾನಕ್ಕೆ ನೇಮಕಗೊಂಡ ಮೊದಲಿಗರು. ರಂಜನ್ ಗೊಗೊಯ್ ಅವರು 1978ರಲ್ಲಿ ಗುವಾಹಟಿಯ ಹೈಕೋರ್ಟ್ನಲ್ಲಿ ವಕೀಲರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ಫೆಬ್ರವರಿ 28, 2001ರಂದು ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡರು. ನ್ಯಾಯಾಧೀಶರಾದ ನಂತರ ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಏಪ್ರಿಲ್ 2012ರಂದು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ಬಡ್ತಿ ಪಡೆದರು. ನವೆಂಬರ್ 17ರಂದು ನಿವೃತ್ತಿ ಹೊಂದುತ್ತಿರುವ ರಂಜನ್ ಗೊಗೊಯ್, ವೃತ್ತಿ ಜೀವನದಲ್ಲಿ ಹಲವು ಪ್ರಕರಣಗಳನ್ನು ಆಲಿಸಿದ್ದು, ಅವುಗಳಲ್ಲಿ ಅಯೋಧ್ಯೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್ಸಿಆರ್) ಸೇರಿವೆ. ಶುಕ್ರವಾರ ಸ್ವತಃ ಉತ್ತರ ಪ್ರದೇಶ ಪೊಲೀಸರ ಜೊತೆ ಭದ್ರತೆ ವಿಚಾರದ ಬಗ್ಗೆ ಚರ್ಚೆ ನಡೆಸಿದ್ದರು.
ನ್ಯಾ. ಶರದ್ ಅರವಿಂದ್ ಬೋಬ್ಡೆ
ರಂಜನ್ ಗೊಗೊಯ್ ಅವರ ನಿವೃತ್ತಿ ಬಳಿಕ ನ್ಯಾ. ಶರದ್ ಅರವಿಂದ್ ಬೋಬ್ಡೆ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕವಾಗಲಿದ್ದಾರೆ. 2000ನೇ ಇಸವಿಯಲ್ಲಿ ಬಾಂಬೆ ಹೈಕೋರ್ಟ್ನಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಬೋಬ್ಡೆ ಅವರು ನೇಮಕಗೊಂಡರು.
(ಮೊದಲ ಪುಟದಿಂದ) ಮಧ್ಯ ಪ್ರದೇಶ ಹೈಕೋರ್ಟಿನ ಮುಖ್ಯ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಮಹಾರಾಷ್ಟ್ರ ಮೂಲದವರಾಗಿರುವ ಬೋಬ್ಡೆ ಅವರು ಏಪ್ರಿಲ್ 2013ರಲ್ಲಿ ಸುಪ್ರಿಂಕೋರ್ಟಿಗೆ ಬಡ್ತಿ ಪಡೆದರು. 63 ವರ್ಷದ ಬೋಬ್ಡೆ ಇದೇ ನವೆಂಬರ್ 17ರ ನಂತರ ಸಿಜೆಐ ಆಗಿ 18 ತಿಂಗಳು ಕಾರ್ಯ ನಿರ್ವಹಿಸಲಿದ್ದಾರೆ. ಇತ್ತೀಚೆಗೆ ಖಾಸಗಿ ವಾಹಿನಿಗೆ ನೀಡಿದ್ದ ಸಂದರ್ಶನದಲ್ಲಿ, ವಿಶ್ವದ ಪ್ರಮುಖವಾದ ಕೇಸ್ಗಳಲ್ಲಿ ಅಯೋಧ್ಯೆ ಪ್ರಕರಣ ಸಹ ಒಂದಾಗಿದೆ ಎಂದು ಹೇಳಿದ್ದರು.
ನ್ಯಾ. ಡಿ.ವೈ. ಚಂದ್ರಚೂಡ್
ಸುಪ್ರೀಂ ಕೋರ್ಟಿನಲ್ಲಿ ಮುಖ್ಯ ನ್ಯಾಯಾಧೀಶ ರಾಗಿ ಅತಿ ಹೆಚ್ಚು ವರ್ಷ ಸೇವೆ ಸಲ್ಲಿಸಿದ್ದ ವೈ.ವಿ. ಚಂದ್ರಚೂಡ್ ಅವರ ಪುತ್ರರಾಗಿರುವ ಡಿ.ವೈ. ಚಂದ್ರಚೂಡ್ ಮೇ 2016ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡರು. ಹಾರ್ವರ್ಡ್ನಲ್ಲಿ ಕಾನೂನು ಪದವಿ ಪಡೆದಿರುವ ಚಂದ್ರಚೂಡ್ ಬಾಂಬೆ ಮತ್ತು ಅಲಹಬಾದ್ ಹೈಕೋರ್ಟಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದಾರೆ.
ನ್ಯಾ. ಅಶೋಕ್ ಭೂಷಣ್
1979ರಲ್ಲಿ ನ್ಯಾ. ಅಶೋಕ್ ಭೂಷಣ್ ಅಲಹಬಾದ್ ಹೈಕೋರ್ಟಿನಲ್ಲಿ ವಕೀಲರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. 2001ರಲ್ಲಿ ನ್ಯಾಯಾಧೀಶರಾಗಿ ನೇಮಕ ಗೊಂಡರು. ಜುಲೈ 2014ರಲ್ಲಿ ಕೇರಳ ಹೈಕೋರ್ಟಿಗೆ ವರ್ಗಾವಣೆಗೊಂಡು, ಮಾರ್ಚ್ 2015ರಲ್ಲಿ ಕೇರಳ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಗಳಾಗಿ ನೇಮಕಗೊಂಡರು. ಮೇ 13, 2016ರಲ್ಲಿ ಸುಪ್ರೀಂಕೋರ್ಟಿನ ನ್ಯಾಯಾಧೀಶರಾಗಿ ನೇಮಕಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.
ನ್ಯಾ. ಅಬ್ದುಲ್ ನಜೀರ್
ಫೆಬ್ರವರಿ 1983ರಲ್ಲಿ ಕರ್ನಾಟಕದ ಹೈಕೋರ್ಟಿನಲ್ಲಿ 20 ವರ್ಷಗಳ ಕಾಲ ನ್ಯಾ.ಅಬ್ದುಲ್ ನಜೀರ್ ವಕೀಲರಾಗಿ ಸೇವೆ ಸಲ್ಲಿಸಿದ್ದಾರೆ. 2003ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ನೇಮಕಗೊಂಡರು. ಅನಂತರ ಖಾಯಂ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದರು. ಫೆಬ್ರವರಿ 17, 2017ರಂದು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು.