ಮಡಿಕೇರಿ, ನ.26: ಇಡೀ ಜಗತ್ತಿನಲ್ಲಿಯೇ ಬೃಹತ್ ಲಿಖಿತ ಸಂವಿಧಾನ ಹೊಂದಿರುವ ರಾಷ್ಟ್ರದಲ್ಲಿ, ಸಂವಿಧಾನವು ಪವಿತ್ರ ಮಹಾಗ್ರಂಥ ವಾಗಿದ್ದು, ಸಂವಿಧಾನದ ಮಹತ್ವವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳು ವಂತಾಗಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ವೀರಪ್ಪ ವೀರಭದ್ರಪ್ಪ ಮಲ್ಲಾಪುರ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಎಫ್‍ಎಂಕೆಎಂಸಿ ಕಾಲೇಜು ಮತ್ತು ರಾಷ್ಟ್ರೀಯ ಸೇವಾ ಯೋಜನೆ ಸಂಯುಕ್ತಾಶ್ರಯದಲ್ಲಿ ನಗರದ ಎಫ್‍ಎಂಕೆಎಂಸಿ ಕಾಲೇಜಿನಲ್ಲಿ ಮಂಗಳವಾರ ನಡೆದ ‘ಸಂವಿಧಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಷ್ಟ್ರದ ಸಂವಿಧಾನದಲ್ಲಿ 25 ವಿಭಾಗಗಳಲ್ಲಿ 448 ವಿಧಿಗಳು, 12 ಪರಿಚ್ಛೇದಗಳು, 5 ಅನುಬಂಧಗಳು ಇವೆ. ಇಂಗ್ಲೀಷ್ ಮತ್ತು ಹಿಂದಿಯಲ್ಲಿ ಸಂಪೂರ್ಣ ಕೈಬರಹದಲ್ಲಿ ಬರೆದು ಕ್ಯಾಲಿಗ್ರಾಫ್ ಮಾಡಲಾಗಿದೆ. ಸಂವಿಧಾನದ ಮೂಲ ಪ್ರತಿಗಳನ್ನು ಸಂಸತ್ತಿನ ಗ್ರಂಥಾಲಯದಲ್ಲಿ ಸಂರಕ್ಷಿಸಿಡಲಾಗಿದೆ ಎಂದರು.

1949ರ ನವೆಂಬರ್, 26 ರಂದು ಸಂವಿಧಾನವನ್ನು ಸಂವಿಧಾನ ಸಭೆಯಲ್ಲಿ ಅಂಗೀಕರಿಸಲಾಯಿತು. ಸಂವಿಧಾನ ರಚನೆಯಲ್ಲಿ ಮಹತ್ವದ ಪಾತ್ರ ವಹಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ಪ್ರತಿಯನ್ನು ಸಭೆಯಲ್ಲಿ ಮಂಡಿಸಿದರು. ಅದರಂತೆ 1950 ಜನವರಿ, 26 ರಂದು ಸಂಪೂರ್ಣ ಜಾರಿಯಾಗಿ ಅಂದಿ ನಿಂದಲೇ ಗಣರಾಜ್ಯ ದಿನವಾಗಿ ಆಚರಿಸಿಕೊಂಡು ಬರಲಾಗಿದೆ ಎಂದು ವಿ.ವಿ.ಮಲ್ಲಾಪುರ ಅವರು ವಿವರಿಸಿದರು.

ಪುತ್ತೂರಿನ ವಕೀಲರ ಸಂಘದ ಮಾಜಿ ಅಧ್ಯಕ್ಷರು ಹಾಗೂ ವಿವೇಕಾನಂದ ಕಾನೂನು ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾದ ಕೆ.ಆರ್.ಆಚಾರ್ಯ ಅವರು ಮಾತನಾಡಿ ಸಂವಿಧಾನದಲ್ಲಿ ರಾಷ್ಟ್ರದ ಎಲ್ಲಾ ಪ್ರಜೆಗಳಿಗೆ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ, ವಿಚಾರ, ಅಭಿವ್ಯಕ್ತಿ, ನಂಬಿಕೆ, ಭಕ್ತಿ ಮತ್ತು ಆರಾಧನೆಗಳಲ್ಲಿ ಸ್ವಾತಂತ್ರ್ಯವನ್ನು ನೀಡಿ, ಸಮಾನ ಅವಕಾಶ ಕಲ್ಪಿಸಲಾಗಿದೆ. ವೈಯಕ್ತಿಕ ಘನತೆ ಮತ್ತು ದೇಶದ ಒಗ್ಗಟ್ಟು ಮತ್ತು ಐಕ್ಯತೆಗೆ ಎಲ್ಲರಲ್ಲೂ ಭ್ರಾತೃತ್ವ ಹೊಂದಿ ಸಂವಿಧಾನ ರಚನಾಸಭೆಯಲ್ಲಿ 1949ರ ನವೆಂಬರ್ 26 ರಂದು ಸಂವಿಧಾನ ವನ್ನು ಸ್ವೀಕರಿಸಲಾಗಿದೆ ಎಂದು ನುಡಿದರು.

ಎಫ್‍ಎಂಕೆಎಂಸಿ ಕಾಲೇಜಿನ ಪ್ರಾಂಶುಪಾಲರಾದ ಜಗತ್ ತಿಮ್ಮಯ್ಯ, ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾದಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ವಕೀಲರ ಸಂಘದ ಅಧ್ಯಕ್ಷರಾದ ಕೆ.ಎಸ್.ಕವನ್, ಅಖಿಲ ಭಾರತೀಯ ಅಧಿವಕ್ತ ಪರಿಷತ್‍ನ ಅಧ್ಯಕ್ಷರಾದ ಪಿ.ಕೃಷ್ಣಮೂರ್ತಿ ಇದ್ದರು. ತನುಶ್ರೀ ಮತ್ತು ತಂಡ ಪ್ರಾರ್ಥಿಸಿದರು. ಸಾಕ್ಷತ್ ನಿರೂಪಿಸಿದರು, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕರಾದ ಬಿ.ಎಸ್. ಜಯಪ್ಪ ಅವರು ಸ್ವಾಗತಿಸಿ, ವಂದಿಸಿದರು.

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ: ಕೊಡಗು ಜಿಲ್ಲಾಡಳಿತ ವತಿಯಿಂದ ಸಂವಿಧಾನ ದಿನಾ ಚರಣೆಯ ಪ್ರಯುಕ್ತ ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಪ್ರತಿಜ್ಞಾ ವಿಧಿ ಸ್ವೀಕರಿಸ ಲಾಯಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಪ್ರತಿಜ್ಞಾವಿಧಿ ಯನ್ನು ಬೋಧಿಸಿದರು. ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ವಿವಿಧ ಇಲಾಖೆ ಅಧಿಕಾರಿಗಳು, ಇತರರು ಇದ್ದರು.