ಮಡಿಕೇರಿ, ಡಿ. 5: ಬಾಬರಿ ಮಸೀದಿ ಕೆಡವಿದ ದಿನದ ಹಿನ್ನೆಲೆಯಲ್ಲಿ ವಿಜಯೋತ್ಸವ ಅಥವಾ ಕರಾಳ ದಿನ ಆಚರಣೆಗೆ ನಿರ್ಬಂಧ ವಿಧಿಸಿ ಜಿಲ್ಲೆಯಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ದಂಡ ಪ್ರಕ್ರಿಯಾ ಸಂಹಿತೆ 1973ರ ಸೆಕ್ಷನ್ 144, 144(ಎ) ಮತ್ತು ಕರ್ನಾಟಕ ಪೊಲೀಸ್ ಆಕ್ಟ್ 1963 ರ ಕಲಂ 35 ರಡಿ ದತ್ತವಾದ ಅಧಿಕಾರದಂತೆ ತಾ. 6 ರಂದು (ಇಂದು) ಬೆಳಿಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆವರೆಗೆ ಕೊಡಗು ಜಿಲ್ಲೆಯಾದ್ಯಂತ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆದೇಶ ಹೊರಡಿಸಿದ್ದಾರೆ.ಷರತ್ತುಗಳು: ಸರ್ಕಾರಿ ಕಾರ್ಯ ಕ್ರಮ ಮತ್ತು ಪೂರ್ವ ಯೋಜಿತ ಮದುವೆ, ನಾಮಕರಣ, ಗೃಹಪ್ರವೇಶ ಕಾರ್ಯಕ್ರಮ, ವಾರದ ಸಂತೆ ಹಾಗೂ ಸರ್ಕಾರಿ ಕಾರ್ಯಕ್ರಮಗಳನ್ನು ಮತ್ತು ದೇವಸ್ಥಾನ, ಪೂಜಾ ಮಂದಿರ, ಚರ್ಚ್, ಮಸೀದಿಗಳಲ್ಲಿ ನಡೆಯುವ ಪ್ರತಿ ನಿತ್ಯದ ಪ್ರಾರ್ಥನೆಗಳನ್ನು ಹೊರತು ಪಡಿಸಿ ಉಳಿದಂತೆ ಯಾವದೇ ಸಭೆ ಸಮಾರಂಭ ಮತ್ತು ಮೆರವಣಿಗೆಯನ್ನು ನಿಷೇಧಿಸಿದೆ. ಎಲ್ಲ ಸಾರ್ವಜನಿಕ, ರಾಜಕೀಯ ಬಹಿರಂಗ ಸಭೆ, ಸಮಾರಂಭ, ಪ್ರಚೋದನಾಕಾರಿ ಹೇಳಿಕೆ, ಭಾಷಣ, ಮೆರವಣಿಗೆ, ಜಾಥಾ, ಧರಣಿ, ಮುಷ್ಕರ, ರಸ್ತೆ ತಡೆ ಹಾಗೂ ಮುತ್ತಿಗೆ ಮುಂತಾದವಗಳನ್ನು ಸಂಪೂರ್ಣವಾಗಿ ನಿಷೇಧಿಸಿದೆ.ವಿಜಯೋತ್ಸವ, ಪ್ರತಿಭಟನೆ ನಡೆಸುವದು, ಪಟಾಕಿ ಸಿಡಿಸುವದು, ಕಪ್ಪು ಬಟ್ಟೆ ಧರಿಸಿ ಪ್ರತಿಭಟಿಸುವದು ಮತ್ತು ಕಪ್ಪು ಅಥವಾ (ಮೊದಲ ಪುಟದಿಂದ) ಯಾವದೇ ಪ್ರಚೋದನಾಕಾರಿ ಬಾವುಟ ಪ್ರದರ್ಶಿಸುವದು, ಪ್ರಚೋದನಾತ್ಮಕ ಘೋಷಣೆ ಕೂಗುವದು, ವಾಹನಗಳಲ್ಲಿ ಪ್ರಚೋದನಾತ್ಮಕ ಫಲಕ, ಬಾವುಟಗಳನ್ನು ಪ್ರದರ್ಶಿಸುವದನ್ನು ನಿಷೇಧಿಸಿದೆ. ಯಾವದೇ ಪ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಕರಪತ್ರ, ಭಿತ್ತಿಪತ್ರ ಬಳಸುವದು, ಅಂಟಿಸುವದು ಅಥವಾ ಹಂಚುವುದನ್ನು ಸಂಪೂರ್ಣವಾಗಿ ನಿಷೇಧಿಸಿದೆ.

ನಿಷೇಧಿತ ಅವಧಿಯಲ್ಲಿ 5 ಮತ್ತು ಅದಕ್ಕಿಂತ ಮೇಲ್ಪಟ್ಟು ಜನರು ಗುಂಪು ಸೇರಬಾರದು. ಸರ್ಕಾರಿ ಕರ್ತವ್ಯದ ನಿಮಿತ್ತ ಮತ್ತು ಬ್ಯಾಂಕ್, ಎಟಿಎಂ ಭದ್ರತಾ ಕಾರ್ಯಕ್ಕಾಗಿ ನಿಯೋಜಿಸಲ್ಪಟ್ಟ ಸಿಬ್ಬಂದಿಗಳನ್ನು ಹೊರತುಪಡಿಸಿ, ಖಾಸಗಿ ವ್ಯಕ್ತಿಗಳು ಯಾವದೇ ರೀತಿಯ ಆಯುಧ, ಮಾರಣಾಂತಿಕ ಆಯುಧಗಳನ್ನು ಹೊಂದಿರುವದು, ಪ್ರದರ್ಶಿಸುವದು ಅಥವಾ ಹಿಡಿದುಕೊಂಡು ತಿರುಗಾಡುವದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.