ಕೂಡಿಗೆ, ಡಿ. 19: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಾರ್ಷಿಕೋತ್ಸವದ ಕ್ರೀಡಾಕೂಟಕ್ಕೆ ವಿಎಸ್‍ಎಸ್‍ಎನ್ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಪ್ರತಿಯೊಬ್ಬರಿಗೂ ಅವಶ್ಯಕ. ವಿದ್ಯಾರ್ಥಿಗಳು ದೈಹಿಕವಾಗಿ ಆರೋಗ್ಯವಂತರಾಗಿರಲು ಕ್ರೀಡೆಯಲ್ಲಿ ಪಾಲ್ಗೊಳ್ಳುವದು ಬಹಳಮುಖ್ಯ ಎಂದರು.

ವಾರ್ಷಿಕೋತ್ಸವದ ಅಂಗವಾಗಿ ನಡೆಯುತ್ತಿರುವ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಬಹಳ ಆಸಕ್ತಿಯಿಂದ ಪಾಲ್ಗೊಳ್ಳುತ್ತಿರುವುದು ಅತ್ಯಂತ ಸಂತೋಷಕರ ಎಂದರು. ಪ್ರಾಂಶುಪಾಲ ಹಂಡ್ರಂಗಿ ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಪಾಲ್ಗೊಂಡು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ತಮ್ಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಕ್ರೀಡಾಕೂಟದಲ್ಲಿ ಉಪನ್ಯಾಸಕರಾದ ಎಸ್.ಆರ್. ವೆಂಕಟೇಶ್, ಕೆ.ಕೆ. ಭವಾನಿ, ಸಿ.ಎಸ್. ಹೇಮಲತಾ ಗಣೇಶ್ ಮೊದಲಾದವರು ಪಾಲ್ಗೊಂಡಿದ್ದರು.