ಮಡಿಕೇರಿ, ಜ.18: ಜಿಲ್ಲೆಯ ಅರಣ್ಯ ಇಲಾಖೆ ವಿಷಯಗಳ ಬಗ್ಗೆ ಅರಣ್ಯ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಉಪಸ್ಥಿತಿಯಲ್ಲಿ ಸಮನ್ವಯ ಸಭೆ ನಡೆಯಿತು.
ನಗರದ ಅರಣ್ಯ ಭವನದಲ್ಲಿ ನಡೆದ ಸಭೆಯ ಆರಂಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅರಣ್ಯ ಇಲಾಖೆಗೆ ಸಂಬಂಧಿಸಿದಂತೆ ಪ್ರಮುಖವಾಗಿ ವೀರಾಜಪೇಟೆಯಿಂದ ಕೇರಳ ಸಂಪರ್ಕ ಕಲ್ಪಿಸುವ ಮಾಕುಟ್ಟ ರಸ್ತೆಯು ಮಳೆಗಾಲದ ಸಂದರ್ಭದಲ್ಲಿ ಬರೆಕುಸಿತ ಉಂಟಾಗಿ ಸಾರಿಗೆ ಸಂಚಾರಕ್ಕೆ ವ್ಯತ್ಯಯ ಉಂಟಾಗುತ್ತಿದೆ. ಆದ್ದರಿಂದ ರಸ್ತೆ ಸರಿಪಡಿಸಲು ಅಗತ್ಯ ಸಹಕಾರ ನೀಡಬೇಕಿದೆ ಎಂದರು.
ರಾಜ್ಯದ ಕೇರಳ ಗಡಿ ಭಾಗ ಸಂಪರ್ಕ ಕಲ್ಪಿಸುವ ಪೆರುಂಬಾಡಿ ಬಳಿ ಸೇತುವೆ ನಿರ್ಮಾಣ ಕಾಮಗಾರಿ ಅರ್ಧಕ್ಕೆ ನಿಂತಿದ್ದು, ಈ ಕಾಮಗಾರಿಯನ್ನು ಪೂರ್ಣ ಗೊಳಿಸಬೇಕಿದೆ. ಈ ಸೇತುವೆ ನಿರ್ಮಾಣ ಮಾಡುವುದರಿಂದ ಕಣ್ಣೂರು ಅಂತರರಾಷ್ಟ್ರೀಯ ವಿಮಾನಕ್ಕೆ ತೆರಳಲು ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿ ಗಮನ ಸೆಳೆದರು.
ಧಾರಾಕಾರ ಮಳೆಯಿಂದಾಗಿ ಪ್ರವಾಹ ಸಂದರ್ಭದಲ್ಲಿ ಕೊಚ್ಚಿ ಹೋಗಿ ರಸ್ತೆ ಹಾಗೂ ಸೇತುವೆ ಬಳಿ ಮರಗಳು ಬಿದ್ದಿರುತ್ತವೆ. ಈ ಮರಗಳನ್ನು ತೆರವುಗೊಳಿಸಬೇಕಿದೆ. ಆದರೆ ಈ ಕಾರ್ಯವಾಗುತ್ತಿಲ್ಲ ಎಂದು ಹೇಳಿದರು.
ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಮಾಂದಲಪಟ್ಟಿ ರಸ್ತೆ ಸರಿಪಡಿಸಬೇಕಿದೆ. ಆದರೆ ಅರಣ್ಯ ಇಲಾಖೆಯವರು ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲು ಬಿಡುತ್ತಿಲ್ಲ. ಇದನ್ನು ಸರಿಪಡಿಸದಿದ್ದಲ್ಲಿ ಸಮಸ್ಯೆಗಳು ತಲೆದೋರಲಿವೆ ಎಂದು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ ಗಮನಕ್ಕೆ ತಂದರು.
ಹಾಗೆಯೇ ಜಿಲ್ಲೆಯ ನಾಗರಹೊಳೆ ವ್ಯಾಪ್ತಿ ಸೇರಿದಂತೆ ಜಿಲ್ಲೆಯ ಎಲ್ಲಾ ಹಾಡಿ ಜನರಿಗೆ ಈಗಾಗಲೇ ಅರಣ್ಯ ಹಕ್ಕುಪತ್ರ ನೀಡಿರುವ ಆದಿವಾಸಿ ಕುಟುಂಬಗಳಿಗೆ ಮನೆ, ವಿದ್ಯುತ್ ಸಂಪರ್ಕ, ರಸ್ತೆ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು, ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಈ ವಿಚಾರಗಳನ್ನು ಆಲಿಸಿದ ಕೊಡಗು ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅವರು ಮಾಕುಟ್ಟ ರಸ್ತೆ ಸರಿಪಡಿಸುವ ನಿಟ್ಟಿನಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ಗಳು ಆಗಮಿಸುವ ಸಂದರ್ಭ ಅರಣ್ಯ ಇಲಾಖೆ ಅಧಿಕಾರಿಗಳು ಸಹಕರಿಸುವಂತೆ ನಿರ್ದೇಶನ ನೀಡಿದರು.
ಪ್ರಕೃತಿ ವಿಕೋಪದಿಂದಾಗಿ ರಸ್ತೆ ಹಾಗೂ ಸೇತುವೆ ಬಳಿ ಬಿದ್ದಿರುವ ಮರಗಳನ್ನು ಅರಣ್ಯ ಇಲಾಖೆಯಿಂದ ತೆರವುಗೊಳಿಸಲಾಗುವುದು. ಈ ಕಾರ್ಯವನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು.
ಮಾಂದಲಪಟ್ಟಿಯಲ್ಲಿ ರಸ್ತೆ ನಿರ್ಮಾಣಕ್ಕೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಎಲ್ಲಾ ರೀತಿಯ ಸಹಕಾರ ನೀಡಲಿದ್ದಾರೆ ಎಂದರು.
ಅರಣ್ಯ ಹಕ್ಕುಪತ್ರ ನೀಡಿರುವ ಹಾಡಿ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಅರಣ್ಯ ಇಲಾಖೆಯಿಂದ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ಹಿರಲಾಲ್ ತಿಳಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆಯ ಅಧಿಕಾರಿ ಗಳೊಂದಿಗೆ ಸಮನ್ವಯತೆ ಸಾಧಿಸಿ ಕಾರ್ಯ ನಿರ್ವಹಿಸಬೇಕು. ಆ ನಿಟ್ಟಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಇಲಾಖೆ ಅಧಿಕಾರಿಗಳು, ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸ್ಪಂದಿಸದಿದ್ದರೆ ತನ್ನ ಗಮನಕ್ಕೆ ತರುವಂತೆ ಹೇಳಿದರು.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ನಿರ್ದೇಶಕರಾದ ನಾರಾಯಣ ಸ್ವಾಮಿ ಮಾತನಾಡಿ ಹಾಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದರ ಜೊತೆಗೆ ಕಾಡು ಪ್ರಾಣಿಗಳಿಂದ ರಕ್ಷಣೆ ನೀಡುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ ಎಂದು ಹೇಳಿದರು.
ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್ ನಾಗರಹೊಳೆಯ ಗಿರಿಜನ ಹಾಡಿ ಜನರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಮನವಿ ಮಾಡಿದರು.
ಈ ಸಂದರ್ಭ ಮಾತನಾಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಿರಲಾಲ್ ಅರಣ್ಯ ಹಕ್ಕು ಕಾಯ್ದೆಯಡಿ ಮರು ಪರಿಶೀಲನೆಗೆ ವಾಪಸ್ಸು ಕಳುಹಿಸಿರುವ ಅರ್ಜಿಗಳನ್ನು ಮತ್ತೊಮ್ಮೆ ಕೂಲಂಕುಷವಾಗಿ ಪರಿಶೀಲಿಸಿ ಕಾನೂನು ಪ್ರಕಾರ ನ್ಯಾಯ ಒದಗಿಸುವಂತೆ ಸಲಹೆ ನೀಡಿದರು.
ಈ ಸಂದರ್ಭ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಈಗಾಗಲೇ ಅರಣ್ಯ ಹಕ್ಕುಪತ್ರ ನೀಡಿರುವುದಕ್ಕೆ ಆರ್ಟಿಸಿ ನೀಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳಲಾಗುವುದು. ನಾಗರಹೊಳೆ ವ್ಯಾಪ್ತಿಯ ಸಮಸ್ಯೆಗಳಿರುವ ಹಾಡಿ ಕುಟುಂಬಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಬೇಕಿದ್ದು, ಯಾವುದೇ ರೀತಿ ತೊಂದರೆ ನೀಡಬಾರದು ಎಂದರು.
ಜಿಲ್ಲೆಯಲ್ಲಿ ಅರಣ್ಯ ಹಕ್ಕುಪತ್ರ ನೀಡಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಸೇರಿದಂತೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಹಿರಲಾಲ್ ಮಾತನಾಡಿ ಸಭೆಯ ನಿರ್ಧಾರಗಳು ಒಂದು ತಿಂಗಳಲ್ಲಿ ಕಾರ್ಯ ರೂಪಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ತ್ವರಿತ ಕ್ರಮಕೈಗೊಳ್ಳುವಂತೆ ಸೂಚಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಪ್ರಭಾಕರನ್, ಶಿಂಧೆ, ಕಾರ್ಯಪ್ಪ, ಶಿವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳಾದ ಸೀಮಾ, ದಯಾನಂದ, ರೋಷನ್, ಆಂಥೋನಿ, ಸೆಸ್ಕ್ ಇಇ ಸೋಮಶೇಖರ, ಪಶುಪಾಲನಾ ಇಲಾಖೆ ಉಪ ನಿರ್ದೇಶಕರಾದ ತಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಎಇಇ ಸುರೇಶ್, ಶಿವರಾಮು, ವೇಣುಗೋಪಾಲ್, ತಾ.ಪಂ. ಇಒಗಳಾದ ಲಕ್ಷ್ಮಿ, ಸುನಿಲ್ ಕುಮಾರ್, ತಾಲೂಕು ಸಮಾಜ ಕಲ್ಯಾಣಾದಿಕಾರಿ ಶೇಖರ್ ಇತರರು ಇದ್ದರು.