ಕೂಡಿಗೆ, ಮಾ. 6: ಹೆಬ್ಬಾಲೆ ಗ್ರಾಮ ಪಂಚಾಯಿತಿಯ 2018-19ನೇ ಸಾಲಿನ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಗ್ರಾ.ಪಂ. ಅಧ್ಯಕ್ಷೆ ಲತಾ ಅಧ್ಯಕ್ಷತೆಯಲ್ಲಿ ನಡೆಯಿತು.

ನೋಡಲ್ ಅಧಿಕಾರಿಯಾಗಿ ತಾಲೂಕು ಅಕ್ಷರ ದಾಸೋಹ ಸಹಾಯಕ ಅಧಿಕಾರಿ ಹೇಮಂತ್‍ಕುಮಾರ್ ಕಾರ್ಯನಿರ್ವಹಿಸಿದರು. ತಾಲೂಕು ಲೆಕ್ಕ ಪರಿಶೋಧನಾ ಇಲಾಖೆಯ ಅಧಿಕಾರಿ ಪ್ರೀತಂ ಪೊನ್ನಪ್ಪ ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರಾಕೇಶ್ ಉದ್ಯೋಗ ಖಾತರಿ ಯೋಜನೆಯಡಿ ಹಾಗೂ ಗ್ರಾ.ಪಂ. ವತಿಯಿಂದ ಕೈಗೊಂಡ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ವತಿಯಿಂದ ನಿರ್ಮಿಸಲಾಗಿದ್ದ ಕೊಟ್ಟಿಗೆಯನ್ನು ಕೆಲವು ಫಲಾನುಭವಿಗಳು ಮನೆಯನ್ನಾಗಿ ಪರಿವರ್ತಿಸಿಕೊಂಡಿರುವ ವಿಚಾರವಾಗಿ ಚರ್ಚೆ ನಡೆಯಿತು.

ಈ ಸಂದರ್ಭ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯವರು ಸ್ಥಳ ಪರಿಶೀಲನೆ ನಡೆಸಿದರು. ಸಭೆಯಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಪ್ರಮೀಳ ಸೇರಿದಂತೆ ಸದಸ್ಯರಾದ ವಿಜಯ್, ವೆಂಕಟೇಶ, ಸರೋಜಮ್ಮ, ಲಕ್ಷ್ಮಮ್ಮ ಹಾಗೂ ಗ್ರಾಮಸ್ಥರು ಇದ್ದರು.