ವೀರಾಜಪೇಟೆ, ಮಾ. 11: ಭಾರತದ ಸಂವಿಧಾನದ ಮೂಲ ಆಶಯವೇ ಸಾಮಾಜಿಕ ನ್ಯಾಯ, ಸಂವಿಧಾನವು ಸಾಮಾಜಿಕ ನ್ಯಾಯವನ್ನು ಅನುಷ್ಠಾನಗೊಳಿಸುವ ಸಲುವಾಗಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು ಕಲ್ಪಿಸಿಕೊಟ್ಟಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ವಿ. ಕೋನಪ್ಪ ಹೇಳಿದರು.

‘ಸಾಮಾಜಿಕ ನ್ಯಾಯಾ ದಿನಾಚರಣೆ’ ಅಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ವೀರಾಜಪೇಟೆ ಹಾಗೂ ಪಾಲಿಬೆಟ್ಟದ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಪ್ರೌಢ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿದ ನ್ಯಾಯಾಧೀಶ ಕೋನಪ್ಪ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ, ಸಮಾಜದಲ್ಲಿನ ಪ್ರತಿಯೊಬ್ಬರಿಗೂ ಆರ್ಥಿಕ ಶೈಕ್ಷಣಿಕ, ನೈಸರ್ಗಿಕ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಬಡತನ ನಿರುದ್ಯೋಗ ಮತ್ತು ಜಾತಿ ವ್ಯವಸ್ಥೆಯನ್ನು ತೊಡೆದು ಹಾಕುವಲ್ಲಿ ಎಲ್ಲರೂ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತಾಗಬೇಕು. ಸರಕಾರ ಕೆಲವೊಂದು ವಿಶೇಷ ರಿಯಾಯಿತಿಗಳನ್ನು ನೀಡಿದ್ದು, ಮಹಿಳೆಯರು ಮತ್ತು ಮಕ್ಕಳು ಇದರ ಸದುಪಯೋಗವನ್ನು ಪಡೆದುಕೊಂಡು ಸಮಾಜದಲ್ಲಿ ಶಾಂತಿ ಮತ್ತು ಸಮಾನತೆಯ ಭಾವನೆಗಳನ್ನು ಬೆಳೆಸುವಂತೆ ಕರೆ ನೀಡಿದರು.

ಪಾಲಿಬೆಟ್ಟ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ಪಾರ್ವತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದ ಪ್ರಸ್ತಾವನೆಯೇ ಸಾಮಾಜಿಕ ನ್ಯಾಯಕ್ಕೆ ಹಿಡಿದ ಕನ್ನಡಿಯಾಗಿದೆ.

ಎಲ್ಲಾ ಕಾರ್ಯಗಳ ಅನುಷ್ಠಾನವನ್ನು ಮಾಡಲು ವಿದ್ಯಾರ್ಥಿಗಳಿಂದ ಸಾಧ್ಯವಾಗುತ್ತದೆ. ಇಂದಿನ ವಿದ್ಯಾರ್ಥಿಗಳು ದೇಶದ ಮುಂದಿನ ಉತ್ತಮ ಪ್ರಜೆಗಳಾಗುವಂತೆ ಹೇಳಿದರು.

ಈ ಸಂದರ್ಭ ವಿದ್ಯಾರ್ಥಿಗಳಿಗೆ ಕಾನೂನಿನ ಅರಿವು ನೀಡುವ ಪುಸ್ತಕಗಳನ್ನು ನೆನೆಪಿನ ಕಾಣಿಕೆಯಾಗಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಾಪಕ ವೃಂದ, ಪೊಲೀಸ್ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.