ಮಡಿಕೇರಿ, ಏ. 4: ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿರುವ ವಲಸೆ ಕಾರ್ಮಿಕರಿಗೆ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಸಮೀಪ ಕೆಲವು ಕಾರ್ಮಿಕ ಕುಟುಂಬಗಳು ವಾಸಿಸುತ್ತಿದ್ದು, ಸ್ಥಳಕ್ಕೆ ತೆರಳಿದ ಸಮಿತಿ ಪ್ರಮುಖರು ಬಡ ವರ್ಗಕ್ಕೆ ಧೈರ್ಯ ತುಂಬಿದರು.

ಕಳೆದ ಎರಡು ವಾರಗಳ ಲಾಕ್‍ಡೌನ್‍ನಿಂದ ಕೆಲಸವಿಲ್ಲದೆ ಆಹಾರ ಸಾಮಗ್ರಿಗಳ ಕೊರತೆಯನ್ನು ಎದುರಿಸುತ್ತಿರುವ ಬಗ್ಗೆ ಮಾಹಿತಿ ದೊರೆತ ಕಾರಣ ಹಸಿವನ್ನು ನೀಗಿಸುವುದಕ್ಕಾಗಿ ಅಕ್ಕಿ ಸೇರಿದಂತೆ ವಿವಿಧ ದಿನಸಿಯನ್ನು ವಿತರಿಸಿರುವು ದಾಗಿ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್ ತಿಳಿಸಿದರು. ಸಮಿತಿ ವತಿಯಿಂದ ಮೂರು ತಾಲೂಕುಗಳಲ್ಲಿ ಇದೇ ರೀತಿಯ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಭರವಸೆ ನೀಡಿದರು. ಮಡಿಕೇರಿ ತಾಲೂಕು ಸಂಚಾಲಕ ದೀಪಕ್ ಸೇರಿದಂತೆ ಸದಸ್ಯರು ಹಾಜರಿದ್ದರು.