ಮಡಿಕೇರಿ, ಮೇ 11: ಕೊರೊನಾ ಲಾಕ್‍ಡೌನ್‍ನಿಂದಾಗಿ ಜಿಲ್ಲೆಯ ಜನ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವುದರಿಂದ ನಗರದ ಕ್ರೆಸೆಂಟ್ ಶಾಲೆಯಲ್ಲಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್‍ಕೆಜಿ ವಿದ್ಯಾರ್ಥಿಗಳಿಗೆ ಶುಲ್ಕ ರಹಿತವಾಗಿ ಸಂಪೂರ್ಣ ಉಚಿತ ಪ್ರವೇಶಾತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಿಜಾಮುದ್ದೀನ್ ಸಿದ್ದಿಕ್ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊಡಗು ಜಿಲ್ಲೆ ಪ್ರಾಕೃತಿಕ ವಿಕೋಪಗಳಿಂದ ತತ್ತರಿಸಿ ಹೋಗಿದ್ದು, ಸ್ವಲ್ಪ ಚೇತರಿಕೆ ಕಂಡುಕೊಳ್ಳುವ ಸಂದರ್ಭ ಕೊರೊನಾ ಲಾಕ್‍ಡೌನ್‍ನಲ್ಲಿ ಇರುವಂತಹ ಪರಿಸ್ಥಿತಿ ಬಂದೊದಗಿದೆ. ಇದನ್ನು ಮನಗಂಡು ಶಾಲಾ ಆಡಳಿತ ಮಂಡಳಿ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್‍ಕೆಜಿ ವಿದ್ಯಾರ್ಥಿಗಳನ್ನು ಉಚಿತವಾಗಿ ದಾಖಲಿಸಿಕೊಳ್ಳಲು ನಿರ್ಧರಿಸಿರುವುದಾಗಿ ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ಅಲ್ಲದೆ ಇತರ ವಿದ್ಯಾರ್ಥಿಗಳ ಪ್ರೆವೇಶಾತಿ ಶುಲ್ಕದಲ್ಲಿ ಶೇ 50 ರಷ್ಟು ಕಡಿತವನ್ನು ಮಾಡಲಾಗುವುದು. ಕ್ರೆಸೆಂಟ್ ಶಾಲಾ ಅಧ್ಯಾಪಕರುಗಳು ತಮ್ಮ ವೇತನದಲ್ಲಿ ಶೇ.25 ರಷ್ಟು ಕಡಿತಗೊಳಿಸಿ ಸೇವೆ ಸಲ್ಲಿಸುವುದಾಗಿ ಸ್ವಯಂ ನಿರ್ಣಯ ಕೈಗೊಂಡಿದ್ದಾರೆ ಎಂದು ನಿಜಾಮುದ್ದೀನ್ ಸಿದ್ದಿಕ್ ತಿಳಿಸಿದ್ದಾರೆ.