ಮಡಿಕೇರಿ ಜೂ.3 : ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ನಿರ್ಮಿಸಿಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸದೆ ಅವಮಾನಿಸಲಾಗಿದೆ ಎಂದು ಆರೋಪಿಸಿರುವ ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಅವರು, ತಾ.4 ರಂದು (ಇಂದು) ಜಂಬೂರಿನಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದಾರೆ.

ಜಂಬೂರು ಗ್ರಾಮದ ಮನೆಗಳ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಆರೋಪಿಸಿದ ಅವರು, 2018 ರಲ್ಲಿ ಕೊಡಗಿನಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡ 800 ಕ್ಕೂ ಹೆಚ್ಚು ಕುಟುಂಬಗಳಿಗೆ ತಕ್ಷಣ ಸ್ಪಂದಿಸಿದ ಅಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪ್ರಯತ್ನದಿಂದಲೇ ಇಂದು ನೂತನ ಮನೆಗಳು ನಿರ್ಮಾಣಗೊಂಡಿವೆ. ಕನಿಷ್ಟ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ ಕೃತಜ್ಞತೆ ಸಲ್ಲಿಸುವ ಔದಾರ್ಯವನ್ನು ಕೂಡ ಆಡಳಿತ ನಡೆಸುತ್ತಿರುವವರು ತೋರುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಮದೆ ಗ್ರಾಮದ ನೂತನ ಮನೆಗಳಿಗೆ ತೆರಳುವ ಗೋಳಿಕಟ್ಟೆ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸಂತ್ರಸ್ತರಿಗೆ ಹಾಗೂ ಸ್ಥಳೀಯ ಗ್ರಾಮಸ್ಥರಿಗೆ ಸಂಚರಿಸಲು ಸಾಧ್ಯವಾಗದ ಪರಿಸ್ಥಿತಿ ಇದೆ. ಮಳೆ ಜೋರಾಗುವ ಮೊದಲು ರಸ್ತೆ ದುರಸ್ತಿ ಕಾರ್ಯವನ್ನು ಕೈಗೆತ್ತಿಕೊಳ್ಳಬೇಕೆಂದು ಗಣೇಶ್ ಒತ್ತಾಯಿಸಿದರು.

ಈ ಸಂದರ್ಭ ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್, ಖಜಾಂಚಿ ಡೆನ್ನಿ ಬರೋಸ್, ಕಾರ್ಯದರ್ಶಿ ಎನ್.ಸಿ.ಸುನಿಲ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಅಬ್ದುಲ್ ಬೆಟ್ಟಗೇರಿ, ಗಣೇಶ್, ಮಡಿಕೇರಿ ನಗರ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಖಲೀಲ್ ಬಾದ್‍ಶಾ, ಮಡಿಕೇರಿ ನಗರ ಎಸ್.ಸಿ. ಘಟಕದ ಅಧ್ಯಕ್ಷ ಹೆಚ್.ಎ.ರವಿ ಮತ್ತಿತರರು ಹಾಜರಿದ್ದರು.

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಆಕ್ಷೇಪ

2018ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರಾದ ಕುಟುಂಬಗಳಿಗೆ ವಸತಿ ಸೌಲಭ್ಯ ಕಲ್ಪಿಸಿಕೊಡುವಲ್ಲಿ ಮಹತ್ತರ ಪಾತ್ರ ವಹಿಸಿದ ಅಂದಿನ ಮುಖ್ಯಮಂತ್ರಿ ಗಳಾದ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ವಸತಿ ಸಚಿವ ಯು.ಟಿ.ಖಾದರ್ ಅವರನ್ನು ಮನೆಗಳ ಹಸ್ತಾಂತರ ಕಾರ್ಯಕ್ರಮಕ್ಕೆ ಆಹ್ವಾನಿಸದ ಬಗ್ಗೆ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಾಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಎಂ.ಎ.ಉಸ್ಮಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆಹಾನಿ ಸಂತ್ರಸ್ತರು ಅತಂತ್ರ ಸ್ಥಿತಿಯಲ್ಲಿದ್ದಾಗ ತಕ್ಷಣ ಸ್ಪಂದಿಸಿದ ಮಾಜಿ ಸಿ.ಎಂ. ಕುಮಾರಸ್ವಾಮಿ ಹಾಗೂ ಯು.ಟಿ. ಖಾದರ್ ಅವರು ಸುಮಾರು 800 ಮನೆಗಳ ನಿರ್ಮಾಣಕ್ಕೆ ಕಾರಣಕರ್ತ ರಾಗಿದ್ದಾರೆ. ಇದೀಗ ನೂತನ ಮನೆಗಳ ಹಸ್ತಾಂತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇವರುಗಳನ್ನು ಆಹ್ವಾನಿಸಿಲ್ಲ ಎಂದು ಆಕ್ಷೇಪಿಸಿದ್ದಾರೆ.

5 ಸಾವಿರ ಖಾತೆಗೆ ಹಾಕಿ

ಸುದ್ದಿಗೋಷ್ಠಿಯಲ್ಲಿ ಅಸಂಘಟಿತ ಕಾರ್ಮಿಕರ ಘಟಕದ ರಾಜ್ಯ ಕಾರ್ಯದರ್ಶಿ ಎಂ.ಇ.ಅಶ್ರಫ್, ಮಡಿಕೇರಿ ಬ್ಲಾಕ್ ಅಲ್ಪಾಸಂಖ್ಯಾತರ ಘಟಕದ ಅಧ್ಯಕ್ಷ ಎಂ.ಎ.ಕಲೀಲ್ ಭಾಷ, ಕಾರ್ಯದರ್ಶಿ ಎಂ.ಎ.ಮುನೀರ್ ಮಾಚರ್ ಹಾಗೂ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಳಿರ ಉಪಸ್ಥಿತರಿದ್ದರು.