ಮಡಿಕೇರಿ, ಜೂ. 11 : ಹೊಂಡಾ ಗುಂಡಿಗಳಿಂದ ಕೂಡಿರುವ ಮಡಿಕೇರಿ ನಗರದ ರಸ್ತೆಗಳನ್ನು ತಕ್ಷಣ ದುರಸ್ತಿ ಪಡಿಸಬೇಕೆಂದು ಒತ್ತಾಯಿಸಿ ಜಾತ್ಯತೀತ ಜನತಾದಳದ ನಗರ ಘಟಕ ಪ್ರತಿಭಟನೆ ನಡೆಸಿತು. ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿಗೆ ತೆರಳುವ ರೇಸ್ಕೋರ್ಸ್ ರಸ್ತೆಯ ಗುಂಡಿಗಳಲ್ಲಿ ಜೆಡಿಎಸ್ ಕಾರ್ಯಕರ್ತರು ಬಾಳೆಗಿಡ ನೆಟ್ಟು ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭ ಮಾತನಾಡಿದ ಪಕ್ಷದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಇಬ್ರಾಹಿಂ, ನಗರದ ಮುಖ್ಯ ರಸ್ತೆಗಳು ಹೊಂಡ ಗುಂಡಿಗಳಿಂದ ಕೂಡಿದ್ದು, ಕೆರೆಗಳಂತಾಗಿವೆ. ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸಂಚರಿಸಲು ಸಾಧ್ಯವೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಲಾಕ್ಡೌನ್ ಸಂದರ್ಭ ರಸ್ತೆ ಕಾಮಗಾರಿ ನಡೆಸಲು ಸಾಕಷ್ಟು ಕಾಲಾವಕಾಶವಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಕಾರ್ಮಿಕರಿಗೆ ಬೇಕಾದ ಸೌಲಭ್ಯವನ್ನು ಕಲ್ಪಿಸಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬಹುದಿತ್ತು. ಆದರೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಗರದ ರಸ್ತೆಗಳ ಬಗ್ಗೆ ಕಾಳಜಿಯೇ ವಹಿಸುತ್ತಿಲ್ಲವೆಂದು ಆರೋಪಿಸಿದರು.
ಅಲ್ಪಸಂಖ್ಯಾತರ ಘಟಕದ ನಗರಾಧ್ಯಕ್ಷ ಕಲೀಲ್ ಭಾಷಾ ಮಾತನಾಡಿ, ನಗರದ ಕೇಂದ್ರ ಬಿಂದುವಾಗಿದ್ದ ಹಳೆಯ ಖಾಸಗಿ ಬಸ್ ನಿಲ್ದಾಣದಲ್ಲಿ 2018 ರಲ್ಲಿ ಬರೆ ಕುಸಿದು ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿತ್ತು. ಆದರೆ ವರ್ಷಗಳೇ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ನಗರದ ಮೀನು ಮಾರುಕಟ್ಟೆಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದೆ, ಸಾರ್ವಜನಿಕರು ಪರದಾಡು ವಂತಾಗಿದೆ. ಇಂಟರ್ ಲಾಕ್ ಹಾಕುವ ಮೂಲಕ ಮಾರುಕಟ್ಟೆ ಕಾಮಗಾರಿ ಯನ್ನು ಪೂರ್ಣಗೊಳಿಸುವಂತೆ ಒತ್ತಾಯಿಸಿದ ಅವರು ಪ್ರತಿ ವಾರ್ಡ್ನ ರಸ್ತೆಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.
(ಮೊದಲ ಪುಟದಿಂದ)
ಉಪಾಧ್ಯಕ್ಷ ಸುಖೇಶ್ ಚಂಗಪ್ಪ, ಜಿಲ್ಲಾ ಕಾರ್ಯದರ್ಶಿ ಸುನಿಲ್, ಸಂಘಟನಾ ಕಾರ್ಯದರ್ಶಿ ಬಿ.ಪಿ. ಗಣೇಶ್, ಪ್ರಮುಖ ಕೆ.ಪಿ. ಗಣೇಶ್, ಮಡಿಕೇರಿ ತಾಲೂಕು ಅಧ್ಯಕ್ಷ ಬಲ್ಲಚಂಡ ಗೌತಮ್, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಲೀಲಾ ಶೇಷಮ್ಮ, ನಗರ ಮಹಿಳಾ ಅಧ್ಯಕ್ಷೆ ಸುನಂದ, ಉಪಾಧ್ಯಕ್ಷೆ ಎನ್.ಸಿ. ಮಮತ, ಪ್ರಧಾನ ಕಾರ್ಯದರ್ಶಿ ಜೆಸಿಂತಾ ಶ್ರೀಧರ್, ಪ್ರಮುಖರಾದ ರಾಜೇಶ್ವರಿ, ಲತಾ, ಬಿ.ಎಲ್. ಮೋಹನ್, ಫಾರುಕ್, ಶರೀನ್, ಪ್ರವೀಣ್ ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.