ಶ್ರೀಮಂಗಲ, ಜೂ. 17 : ಕೊಡಗು ಜಿಲ್ಲೆಯ ಬೆಳೆಗಾರರು ಸತತ ಎರಡು ವರ್ಷಗಳಿಂದ ಪ್ರಾಕೃತಿಕ ವಿಕೋಪಕ್ಕೆ ತುತ್ತಾಗುವುದರೊಂದಿಗೆ ಕಳೆದ ಎರಡು ದಶಕದಿಂದ ಅತಿವೃಷ್ಟಿ, ಅನಾವೃಷ್ಟಿ, ವನ್ಯಪ್ರಾಣಿಗಳ ಹಾವಳಿಯಿಂದ ನಿರಂತರ ಬೆಳೆ ನಷ್ಟ ಅಲ್ಲದೇ ಬೆಲೆಕುಸಿತ, ಉತ್ಪಾದನಾ ವೆಚ್ಚ ಹೆಚ್ಚಳ ಸಮಸ್ಯೆಯಿಂದ ನಲುಗಿದ್ದು, ಜಿಲ್ಲೆಯ ಸಣ್ಣ ಬೆಳೆಗಾರರನ್ನು ಬಿಪಿಎಲ್ ಪಟ್ಟಿಗೆ ಸೇರಿಸಿ ಸರಕಾರದ ವಿವಿಧ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಬೇಕೆಂದು ಕೊಡಗು ಜಿಲ್ಲಾ ಬೆಳೆಗಾರರ ಒಕ್ಕೂಟ ಆಗ್ರಹಿಸಿದೆ.ಗೋಣಿಕೊಪ್ಪ ಮಹಿಳಾ ಸಮಾಜದಲ್ಲಿ ಒಕ್ಕೂಟದ ಅಧ್ಯಕ್ಷ ಕೈಬಿಲೀರ ಹರೀಶ್ಅಪ್ಪಯ್ಯರವರ ಅಧ್ಯಕ್ಷತೆಯಲ್ಲಿ ನಡೆದ ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆದು ಈಗಾಗಲೇ ಜಿಲ್ಲೆಯ ಸರ್ವ ಬೆಳೆಗಾರರ ಒಕ್ಕೂಟದಿಂದ ನೀಡಿದ ಮನವಿಗೆ ಸ್ಪಂದಿಸಿರುವ ಶಾಸಕ ಅಪ್ಪಚ್ಚು ರಂಜನ್ ಅವರು ಜಿಲ್ಲೆಗೆ ಆಗಮಿಸಿದ್ದ ಆಹಾರ ಮತ್ತು ನಾಗರಿಕ (ಮೊದಲ ಪುಟದಿಂದ) ಸರಬರಾಜು ಸಚಿವ ಕೆ. ಗೋಪಾಲಯ್ಯ ಅವರ ಗಮನಕ್ಕೆ ತಂದಿದ್ದು, ಸಚಿವರು ಕೊಡಗು ಜಿಲ್ಲೆಯಲ್ಲಿ ನಾಲ್ಕು ಚಕ್ರದ ವಾಹನವಿರುವವರಿಗೂ ಬಿಪಿಎಲ್ ಕಾರ್ಡ್ ನೀಡುವ ಬಗ್ಗೆ ಇಂಗಿತ ವ್ಯಕ್ತಪಡಿಸಿದ್ದಾರೆ. ಇದನ್ನು ಬೆಳೆಗಾರರ ಒಕ್ಕೂಟ ಸ್ವಾಗತಿಸುವುದಾಗಿ ಹೇಳಿದರು. ಜಿಲ್ಲೆಯಲ್ಲಿ ಕಾಫಿ ಮತ್ತು ಇತರ ಬೆಳೆಗಾರರ ಆದಾಯ ತೀವ್ರವಾಗಿ ಕುಸಿದಿದ್ದು, ಆದಾಯ ಪ್ರಮಾಣ ಪತ್ರ ನೀಡುವಾಗ ಇದನ್ನು ಕಂದಾಯ ಇಲಾಖೆ ಗಮನಕ್ಕೆ ತೆಗೆದುಕೊಳ್ಳಬೇಕು. ತಪ್ಪು ಕಲ್ಪನೆಯಿಂದ ಹೆಚ್ಚು ಆದಾಯ ಇದೆ ಎಂದು ನೀಡುತ್ತಿರುವ ಆದಾಯ ದೃಢೀಕರಣ ಪತ್ರದಿಂದ ಸಣ್ಣ ಬೆಳೆಗಾರರು ಬಿಪಿಎಲ್ ಪಟ್ಟಿಗೆ ಸೇರಲು ವಂಚಿತರಾಗುವಂತಾಗಿದೆ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.
ಕಂದಾಯ ಇಲಾಖೆಯಲ್ಲಿ ವಿಲೇವಾರಿ ಆಗದೇ ಬಾಕಿ ಇರುವ ಕಡತಗಳ ವಿಲೇವಾರಿಗೆ ಹೋಬಳಿ ಮಟ್ಟದಲ್ಲಿ ಕಂದಾಯ ಅದಾಲತನ್ನು ನಡೆಸಬೇಕು. ಜಿಲ್ಲೆಯ ಬೆಳೆಗಾರರ ಎಲ್ಲಾ ಸಾಲವನ್ನು ಮನ್ನಾ ಮಾಡಬೇಕು. ಕೃಷಿ ಸಾಲ ಪಡೆಯಲು ಬ್ಯಾಂಕಿನಲ್ಲಿ ವಿದಿಸಿರುವ ‘ಸಿಬಿಲ್’ ಅರ್ಹತೆಯನ್ನು ತೆಗೆಯಬೇಕು. ಕೋವಿಡ್-19 ಸಂಕಷ್ಟ ದಲ್ಲಿರುವವರಿಗೆ ಕೇಂದ್ರ ಸರಕಾರ ಪ್ರಕಟಿಸಿರುವ 20 ಲಕ್ಷ ಕೋಟಿ ಪ್ಯಾಕೇಜ್ನಲ್ಲಿ ಕಾಫಿ ಬೆಳೆಗಾರರಿಗೂ ಸೌಲಭ್ಯ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು.
ಕೃಷಿ ಭೂಮಿಯನ್ನು ಕೃಷಿಕರಲ್ಲದವರಿಗೂ ಖರೀದಿಸಲು ಅವಕಾಶ ಕಲ್ಪಿಸುವ ರಾಜ್ಯ ಸರಕಾರದ ನೂತನ ಭೂ ಸುದಾರಣಾ ಕಾಯಿದೆಯ ಬಗ್ಗೆ ಅಧ್ಯಯನ ನಡೆಸಿ ಆದಷ್ಟು ಬೇಗ ಈ ಬಗ್ಗೆ ಒಕ್ಕೂಟದಿಂದ ಮುಂದಿನ ನಿರ್ಧಾರ ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಒಕ್ಕೂಟದ ಉಪಾಧ್ಯಕ್ಷ ಡಾ. ಸಣ್ಣುವಂಡ ಕಾವೇರಪ್ಪ, ಪ್ರಧಾನ ಕಾರ್ಯದರ್ಶಿ ಅಣ್ಣೀರ ಹರೀಶ್ಮಾದಪ್ಪ, ಕಾರ್ಯದರ್ಶಿ ಬೊಳ್ಳೇರ ರಾಜಸುಬ್ಬಯ್ಯ, ಖಜಾಂಚಿ ಮಾಣೀರ ವಿಜಯನಂಜಪ್ಪ, ತಾಂತ್ರಿಕ ಸಲಹೆಗಾರ ಚೆಪ್ಪುಡೀರ ಶರಿಸುಬ್ಬಯ್ಯ, ಆಡಳಿತ ಮಂಡಳಿಯ ಚೋಡುಮಾಡ ಶರಿನ್ಸುಬ್ಬಯ್ಯ, ಮಾಪಂಗಡ ಯಮುನಾ ಚಂಗಪ್ಪ, ಆಶಾ ಜೇಮ್ಸ್, ತೀತಿರ ಊರ್ಮಿಳಾ ಸೋಮಯ್ಯ, ಕರ್ತಮಾಡ ನಂದ, ಕಾಳಿಮಾಡ ರಶಿಕ, ಕಾಳಿಮಾಡ ತಮ್ಮ ಮುತ್ತಣ್ಣ ಮತ್ತಿತರು ಭಾಗವಹಿಸಿದ್ದರು.