ಮಡಿಕೇರಿ, ಜೂ. 21: ಕೋವಿಡ್-19 ನಿಯಂತ್ರಿಸುವಲ್ಲಿ ಕೊರೊನಾ ವಾರಿಯರ್ಸ್ ಅವರ ಪಾತ್ರ ಅತಿಮುಖ್ಯವಾಗಿದ್ದು, ಅವರುಗಳ ಆರೋಗ್ಯವು ಅಷ್ಟೇ ಅಮೂಲ್ಯವಾದದ್ದು ಎಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೊರೊನಾ ವಾರಿಯರ್ಸ್‍ಗಳಿಗೆ ಕೋವಿಡ್-19 ರೋಗ ನಿರೋಧಕ ಔಷಧ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಕೋವಿಡ್-19 ರ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಕೊರೊನಾ ವಾರಿಯರ್ಸ್‍ಗಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಔಷಧಿ ವಿತರಿಸುತ್ತಿದ್ದು ಇವುಗಳನ್ನು ಪ್ರತಿನಿತ್ಯ ಸೇವಿಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆಂದು ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ತಿಳಿಸಿದ್ದಾರೆ.

ಸಾರ್ವಜನಿಕರ ಸೇವೆಯಲ್ಲಿರುವ ಕೊರೊನಾ ವಾರಿಯರ್ಸ್‍ಗಳ ಆರೋಗ್ಯವು ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಹೋಮಿಯೋಪತಿ, ಯುನಾನಿ, ಆಯುರ್ವೇದ ಇವುಗಳ ಸಂಯುಕ್ತ ಔಷಧವನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ವೃದ್ಧಿಯಾಗುವುದಾಗಿ ಶಾಸಕರು ತಿಳಿಸಿದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮಾತನಾಡಿ, ಆಯುಷ್ ಇಲಾಖೆಯು ಕೊರೊನಾ ವಾರಿಯರ್ಸ್‍ಗಳಿಗೆ ರೋಗ ನಿರೋಧಕ ಔಷಧವನ್ನು ನೀಡುತ್ತಿದ್ದು, ಇದನ್ನು ಪ್ರತಿಯೊಬ್ಬ ಕೊರೊನಾ ವಾರಿಯರ್ಸ್‍ಗಳು ವೈದ್ಯರ ಸಲಹೆಯಂತೆ ಸೇವನೆ ಮಾಡಿ ಆರೋಗ್ಯವನ್ನು ಸುಸ್ಥಿತಿಯಲ್ಲಿಟ್ಟು ಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ.ರಾಮಚಂದ್ರ ಅವರು ಕೊರೊನಾ ವಾರಿಯರ್ಸ್‍ಗಳಿಗೆ ನೀಡುತ್ತಿರುವ ಔಷಧದ ಸೇವನೆ ಕ್ರಮ ಹಾಗೂ ರೋಗ ನಿರೋಧಕ ಶಕ್ತಿಯನ್ನು ವೃದ್ಧಿಸುವಲ್ಲಿ ಈ ಔಷಧದ ಮಹತ್ವವನ್ನು ತಿಳಿಸಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಮತ್ತು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ, ಕೆಎಸ್‍ಆರ್‍ಟಿಸಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹೀಗೆ ಅಗತ್ಯ ಸೇವೆ ಇಲಾಖೆಗಳ ಕೊರೊನಾ ವಾರಿಯರ್ಸ್‍ಗೆ ಸಾಂಕೇತಿಕವಾಗಿ ಔಷಧಿಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ. ಮೋಹನ್, ಆರ್‍ಸಿಎಚ್ ಅಧಿಕಾರಿ ಡಾ. ಗೋಪಿನಾಥ್, ಡಾ. ಮಹೇಶ್, ಡಾ. ಶುಭ, ಕೆಎಸ್‍ಆರ್‍ಟಿಸಿಯ ಹರೀಶ್ ಬಿ.ಹೆಚ್. ಇತರರು ಇದ್ದರು.