ಮಡಿಕೇರಿ, ಜು. 31: ಕೊರೊನಾ ನಿರ್ವಹಣಾ ವೈದ್ಯಕೀಯ ಕಿಟ್‍ಗಳ ಖರೀದಿ ವ್ಯವಹಾರದಲ್ಲಿ ಸರ್ಕಾರ ಅವ್ಯವಹಾರ ನಡೆಸಿದೆ ಎನ್ನುವ ಕಾಂಗ್ರೆಸ್ ಆರೋಪ ಹಾಸ್ಯಾಸ್ಪದವಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾದ ಸಂದಿಗ್ಧ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿಗಳು, ಸಂಪುಟದ ಸಹೋದ್ಯೋಗಿಗಳು, ಜಿಲ್ಲೆಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಜನಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ಕಾಳಜಿಯನ್ನು ಪರಿಗಣಿಸದೆ ಕಾಂಗ್ರೆಸ್ ಉಸ್ತುವಾರಿ ವೆಂಕಪ್ಪ ಗೌಡ ಹಾಗೂ ಜಿಲ್ಲಾಧ್ಯಕ್ಷ ಮಂಜುನಾಥ್‍ಕುಮಾರ್ ಆಧಾರ ರಹಿತ ಆರೋಪಗಳನ್ನು ಮಾಡಿರುವುದು ಖಂಡನೀಯವೆಂದರು.

ಕೊಡಗು ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಮೆಚ್ಚುವ ತಂಡ ಕಾಂಗ್ರೆಸ್ ಪಕ್ಷದಲ್ಲಿದೆ. ಕಾಂಗ್ರೆಸ್‍ನೊಳಗಿನ ಬಂಡಾಯದಿಂದ ಬೇಸತ್ತಿರುವ ಮಂಜುನಾಥ್‍ಕುಮಾರ್ ಕಾರ್ಯಕರ್ತರ ಗಮನವನ್ನು ಬೇರೆಡೆ ಸೆಳೆಯಲು ಇಲ್ಲಸಲ್ಲದ ಆರೋಪದಲ್ಲಿ ತೊಡಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಕೊರೊನಾ ವ್ಯಾಪಿಸುವುದನ್ನು ತಡೆಯುವಲ್ಲಿ ಜಿಲ್ಲಾಡಳಿತ ಹೆಚ್ಚು ಕಾರ್ಯಪ್ರವೃತ್ತವಾಗಿದೆ, ಆದರೆ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಜಿಲ್ಲಾಡಳಿತ ವಿಫಲವಾಗಿದೆ ಎಂದು ಟೀಕಿಸುತ್ತಿದ್ದು, ಇದು ಖಂಡನೀಯ. ಸಂಕಷ್ಟದ ಪರಿಸ್ಥಿತಿಯಲ್ಲಿ ಅಧಿಕಾರಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುವ ಕಾರ್ಯವನ್ನು ಮಾಡಬೇಕೆ ಹೊರತು ಪ್ರಚಾರ ಗಿಟ್ಟಿಸಿಕೊಳ್ಳುವುದಕ್ಕಾಗಿ ಅಪಪ್ರಚಾರ ಮಾಡಬಾರದೆಂದು ಅಸಮಾಧಾನ ವ್ಯಕ್ತಪಡಿಸಿದರು.

ಶಾಸಕರ ರಾಜೀನಾಮೆ ಕೇಳುತ್ತಿರುವ ಜೆಡಿಎಸ್ ಜಿಲ್ಲಾಧ್ಯಕ್ಷರು ಪತ್ರಿಕಾ ಹೇಳಿಕೆ ನೀಡುವುದನ್ನು ಬಿಟ್ಟರೆ ಬೇರೇನು ಮಾಡಿದ್ದಾರೆ ಎನ್ನುವುದನ್ನು ಮೊದಲು ತಿಳಿಸಲಿ ಎಂದು ಅವರು ಸವಾಲು ಹಾಕಿದರು.

ಕೊರೊನಾ ವೈರಸ್ ಇಡೀ ವಿಶ್ವದ ವಿರುದ್ಧ ಸಮರ ಸಾರಿರುವಾಗ ಇದನ್ನು ನಿರ್ಮೂಲನೆ ಮಾಡಲು ಪಕ್ಷಭೇದ ಮರೆತು ಎಲ್ಲರೂ ಒಗ್ಗಟ್ಟಾಗಿ ಕಾರ್ಯ ನಿರ್ವಹಿಸಬೇಕೆ ಹೊರತು ಕ್ಷುಲ್ಲಕ ರಾಜಕಾರಣ ಮಾಡಬಾರದು ಎಂದರು.

ಗೋಷ್ಠಿಯಲ್ಲಿ ಜಿಲ್ಲಾ ಕಾರ್ಯದರ್ಶಿ ಎಸ್.ಸಿ. ಸತೀಶ್, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆ.ಎಂ. ಅಪ್ಪಣ್ಣ, ಉಮೇಶ್ ಸುಬ್ರಮಣಿ ಹಾಗೂ ಮಾಧ್ಯಮ ಸಹ ಸಂಚಾಲಕ ಶಜೀಲ್ ಕೃಷ್ಣ ಉಪಸ್ಥಿತರಿದ್ದರು.