ಸಿದ್ದಾಪುರ, ಆ. 2: ನೆಲ್ಲಿಹುದಿಕೇರಿ ಭಾಗದ ಬೆಟ್ಟದಕಾಡು ಅತ್ತಿಮಂಗಲ ವ್ಯಾಪ್ತಿಯ ಕಾಫಿ ತೋಟಗಳಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟು ದಾಂಧಲೆ ನಡೆಸುತ್ತಿರುವ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಕುಶಾಲನಗರ ಮೀನು ಕೊಲ್ಲಿ ಹಾಗೂ ಆನೆಕಾಡು ಉಪ ವಲಯ ಅರಣ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದರು.
ಆದರೆ ಕಾಡಾನೆಗಳು ಕಾಫಿ ತೋಟಗಳನ್ನು ಬಿಟ್ಟು ಕದಲದೆ ಅರಣ್ಯ ಇಲಾಖೆ ಅಧಿಕಾರಿಗಳನ್ನು ಸಿಬ್ಬಂದಿಗಳಿಗೆ ಸುಸ್ತು ಹೊಡೆಸಿದವು. ಛಲಬಿಡದ ಅರಣ್ಯ ಇಲಾಖೆ ಅಧಿಕಾರಿಗಳು ಭಾನುವಾರದಂದು ಕೂಡ ಕಾರ್ಯಾಚರಣೆಯನ್ನು ಕೈಗೊಂಡರು. ಸಂಜೆವರೆಗೂ ಸುರಿವ ಮಳೆ ನಡುವೆ ಕಾರ್ಯಾಚರಣೆ ನಡೆಸಲಾಯಿತು. ನಂತರ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಯಿತು.
ಒಂದು ಗುಂಪಿನ ಕಾಡಾನೆಗಳು ಮರಿ ಆನೆಗಳೊಂದಿಗೆ ಮೇರಿಲ್ಯಾಂಡ್ ಕಾಫಿತೋಟದಲ್ಲಿ ಬೀಡುಬಿಟ್ಟಿವೆ. ಮತ್ತೊಂದು ಗುಂಪಿನ ಕಾಡಾನೆಗಳನ್ನು ದುಬಾರೆ ಅರಣ್ಯಕ್ಕೆ ಓಡಿಸಲಾಯಿತು. ಕಾರ್ಯಾಚರಣೆಯಲ್ಲಿ ಎಸಿಎಫ್ ನೆಹರು ಮಾರ್ಗದರ್ಶನದಲ್ಲಿ ವಲಯ ಅರಣ್ಯಧಿಕಾರಿ ಅನನ್ಯ ಕುಮಾರ್ ನೇತೃತ್ವದಲ್ಲಿ ಉಪವಲಯ ಅರಣ್ಯಧಿಕಾರಿ ಕೂಡಕಂಡಿ ಸುಬ್ರಾಯ ಮಹದೇವ್ ನಾಯಕ್ ಸೇರಿದಂತೆ 20 ಮಂದಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.