ಮಡಿಕೇರಿ, ಆ. 11: ಕೊಡಗು ಜಿಲ್ಲೆ ಮತ್ತೆ ಮಹಾಮಳೆಯ ಸಂಕಷ್ಟಕ್ಕೆ ಸಿಲುಕಿದ್ದು, ಜನರ ನೋವಿಗೆ ಸ್ಪಂದಿಸಲು ಜಾತ್ಯತೀತ ಮತ್ತು ಪಕ್ಷಾತೀತವಾಗಿ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಸಂಘ, ಸಂಸ್ಥೆಗಳು ಒಗ್ಗೂಡಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಜಾತ್ಯತೀತ ಜನತಾದಳದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ತಿಳಿಸಿದ್ದಾರೆ.

ಧಾರಾಕಾರ ಮಳೆಯಿಂದ ಪ್ರವಾಹಕ್ಕೆ ಸಿಲುಕಿರುವ ಮತ್ತು ಭೂಕುಸಿತದಿಂದ ಅಪಾಯವನ್ನು ಎದುರಿಸುತ್ತಿರುವ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಗಳಿಗೆ ನೆರವಿನ ಹಸ್ತ ಚಾಚಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆ ಪ್ರವಾಹ ಹಾಗೂ ಭೂಕುಸಿತದಿಂದ ನಲುಗಿ ಹೋಗಿದ್ದು, ತುರ್ತು ನೆರವಿನ ಅಗತ್ಯವಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ತಕ್ಷಣ ವಿಶೇಷ ಅನುದಾನ ನೀಡುವ ಮೂಲಕ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೆ ಆತ್ಮಸ್ಥೈರ್ಯ ತುಂಬಬೇಕು. ಜಿಲ್ಲೆಯಲ್ಲಿ ಸಾವಿರಾರು ಎಕರೆ ತೋಟ ಹಾಗೂ ಗದ್ದೆಗಳು ಕೂಡ ಸಂಪೂರ್ಣವಾಗಿ ನಾಶವಾಗಿದ್ದು, ಕೃಷಿಕರಿಗೂ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕೆಂದು ಗಣೇಶ್ ಒತ್ತಾಯಿಸಿದರು.

ಸಾಮೂಹಿಕ ಪ್ರಾರ್ಥನೆಗೆ ಮನವಿ

ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯನ್ನು ಮಹಾಮಳೆ ಕಾಡುತ್ತಲೇ ಇದೆ. ಯಾವುದೇ ವೈಜ್ಞಾನಿಕ ಕಾರಣಗಳನ್ನು ನೀಡಿದರೂ ಪ್ರಾಕೃತಿಕ ವಿಕೋಪವನ್ನು ತಡೆಯಲು ಯಾರಿಂದಲೂ ಸಾಧ್ಯವಾಗುತ್ತಿಲ್ಲ. ಪ್ರತಿಯೊಂದು ಸಮುದಾಯವೂ ತಮ್ಮ ತಮ್ಮ ಧರ್ಮದ ಮೇಲೆ ಅಪಾರ ನಂಬಿಕೆಯನ್ನು ಇಟ್ಟುಕೊಂಡಿದ್ದಾರೆ. ಕೊಡಗಿನಲ್ಲಿ ಇನ್ನು ಮುಂದೆ ಯಾವುದೇ ರೀತಿಯ ಪ್ರಾಕೃತಿಕ ವಿಕೋಪಗಳು ನಡೆಯದಂತೆ ಎಲ್ಲಾ ಧರ್ಮೀಯರು ಏಕಕಾಲದಲ್ಲಿ ಪ್ರಾರ್ಥನೆ ಸಲ್ಲಿಸುವ ಅಗತ್ಯವಿದೆ ಎಂದು ಗಣೇಶ್ ಅಭಿಪ್ರಾಯಪಟ್ಟರು.

ಜಲಾವೃತಗೊಂಡಿರುವ ಕೊಂಡಂಗೇರಿ ಗ್ರಾಮ, ಬೇತ್ರಿ, ಬೊಟ್ಲಪ್ಪ ಪೈಸಾರಿ, ಕಡಗಾದಾಳುವಿನ ತುರ್ಕರಟ್ಟಿ, ಮೂರ್ನಾಡು ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಗಣೇಶ್ ಹಾಗೂ ಜೆಡಿಎಸ್ ಪ್ರಮುಖರು ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿ ಸಾಂತ್ವನ ಹೇಳಿದರು, ಅಲ್ಲದೆ ಆರ್ಥಿಕ ನೆರವು ನೀಡಿದರು.