ಮಡಿಕೇರಿ, ಆ. 28: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರ ಅಧ್ಯಕ್ಷತೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಕಂದಾಯಾಧಿಕಾರಿಗಳ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಅವರು, ನಿವೇಶನ, ಕಸ ವಿಲೇವಾರಿ, ಸ್ಮಶಾನ ಇತ್ಯಾದಿ ಅಗತ್ಯತೆಗಳ ಸಂಬಂಧ ಶೀಘ್ರವೇ ಸರ್ವೆ ಕಾರ್ಯ ಮುಗಿಸಿ ಸಂಬಂಧಪಟ್ಟ ಇಲಾಖೆಗಳಿಗೆ ನಿವೇಶನ ನೀಡುವಿಕೆಗೆ ಅಗತ್ಯ ಕ್ರಮ ವಹಿಸುವಂತೆ ಸೂಚನೆ ನೀಡಿದರು. ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ ಮನೆಗಳಿಗೆ ನೀರು ತುಂಬಿ ಗೃಹೋಪಯೋಗಿ ಸಲಕರಣೆಗಳು ಹಾನಿಯಾಗಿದ್ದಲ್ಲಿ ಅದರ ನಿರ್ವಹಣೆಗಾಗಿ ಸರ್ಕಾರದ ನಿಯಮಾನುಸಾರ 10 ಸಾವಿರ ರೂ.ಗಳನ್ನು ಫಲಾನುಭವಿಗಳಿಗೆ ತಲುಪಿಸುವಂತೆ ತಹಶೀಲ್ದಾರರಿಗೆ ಸೂಚನೆ ನೀಡಿದರು. ಅಲ್ಲದೇ ಜಾನುವಾರುಗಳು ಪ್ರಕೃತಿ ವಿಕೋಪದಿಂದಾಗಿ ಸಾವನ್ನಪ್ಪಿದ್ದು ನಿಯಮಾನುಸಾರ ಪರಿಹಾರವನ್ನು ಸಂಬಂಧಪಟ್ಟವರಿಗೆ ನೀಡುವಂತೆ ಅವರು ಸೂಚನೆ ನೀಡಿದರು.

ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅರುಂಧತಿ ಮಾತನಾಡಿ, ಅಂಗನವಾಡಿಗಳ ನಿರ್ಮಾಣಕ್ಕೆ ನಿವೇಶನಗಳ ಅಗತ್ಯವಿದೆ. ಕೆಲವು ನಿವೇಶನಗಳು ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಸೂಕ್ತವಾಗಿಲ್ಲ ಎಂದು ವರದಿ ನೀಡಲಾಗಿದೆ. ಈ ಸಂಬಂಧ ಬದಲಿ ಜಾಗ ಗುರುತಿಸುವಿಕೆಯ ಕಾರ್ಯವಾಗಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಮಾತನಾಡಿದ ಜಿಲ್ಲಾಧಿಕಾರಿಗಳು ಯಾವ ಹೋಬಳಿಗಳಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ನಿವೇಶದ ಅಗತ್ಯವಿದೆಯೋ ಅಂತಹ ಗ್ರಾ.ಪಂ.ನಿಂದ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಿದರು. ಅಲ್ಲದೆ ಅಂಗನವಾಡಿಗಳ ನಿರ್ಮಾಣ ಸಂಬಂಧ ಶೀಘ್ರವೆ ಸರ್ವೆ ಕಾರ್ಯ ಮುಗಿಸಬೇಕು ಎಂದು ಸಂಬಂಧಪಟ್ಟ ಕಂದಾಯಾಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಪಸಂಖ್ಯಾತರ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ನಿಂಗರಾಜಪ್ಪ ಮಾತನಾಡಿ, ಹಿಂದುಳಿದ ವರ್ಗಗಳ ಇಲಾಖೆಯ 4 ವಸತಿ ನಿಲಯಗಳ ನಿರ್ಮಾಣಕ್ಕಾಗಿ ನಿವೇಶನ ಬೇಕಿದೆ. ಮಡಿಕೇರಿಯಲ್ಲಿ 3 ಮತ್ತು ಕುಶಾಲನಗರದಲ್ಲಿ 1 ಹಾಸ್ಟೆಲ್ ನಿರ್ಮಾಣ ಮಾಡಲು ನಿವೇಶನದ ಅಗತ್ಯತೆ ಇದೆ ಎಂದು ಹೇಳಿದರು. ಈ ಸಂಬಂಧ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಹಾಸ್ಟೆಲ್ ನಿರ್ಮಾಣಕ್ಕಾಗಿ ಲಭ್ಯವಿರುವ ನಿವೇಶನದ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ ಈ ನಿವೇಶನಗಳಿಗೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿಯವರು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

ಕಸ ನಿರ್ವಹಣೆ: ಅಲ್ಲದೆ ಕಸ ವಿಲೇವಾರಿ ಘಟಕಗಳ ನಿರ್ಮಾಣ ಸಂಬಂಧ ಮಾತನಾಡಿದ ಜಿಲ್ಲಾಧಿಕಾರಿಗಳು ಜಿಲ್ಲೆಯ 104 ಗ್ರಾ.ಪಂ.ಗಳಿಗೆ ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಸಂಬಂಧ ರಾಜ್ಯ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ರಾಜ್ಯದಲ್ಲಿಯೇ ಜಿಲ್ಲೆಯ ಎಲ್ಲಾ ಗ್ರಾ.ಪಂ.ಗಳಲ್ಲಿಯೂ ಘನ ತ್ಯಾಜ್ಯ ವಿಲೇವಾರಿ ಘಟಕಗಳ ನಿರ್ಮಾಣ ಸಂಬಂಧ ಆಡಳಿತಾತ್ಮಕ ಅನುಮೋದನೆ ದೊರೆತ ಜಿಲ್ಲೆ ಕೊಡಗು ಆಗಿದೆ ಎಂದು ಹೇಳಿದರು.

ಕಸ ವಿಲೇವಾರಿ ಘಟಕಗಳ ನಿರ್ಮಾಣ ಸಂಬಂಧ ಅಗತ್ಯ ನಿವೇಶನಗಳನ್ನು ನೀಡುವ ಕಾರ್ಯವಾಗಬೇಕು ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳುವಂತೆ ಹೇಳಿದರು. ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್ ಮಾತನಾಡಿ, ತಿತಿಮತಿಯಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಆದಿವಾಸಿ ಭವನ ನಿರ್ಮಾಣ ಸಂಬಂಧ ಸೂಕ್ತ ನಿವೇಶನದ ಅಗತ್ಯತೆ ಇದೆ ಎಂದು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭ ಮಾತನಾಡಿದ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿವೇಶನವನ್ನು ನೀಡುವಂತೆ ಸೂಚಿಸಿದರು. ಅಲ್ಲದೆ ಆದಿವಾಸಿಗಳ ಹಕ್ಕುಪತ್ರ ವಿತರಣೆ ಸಂಬಂಧಿಸಿದಂತೆ ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ಹೇಳಿದರು.

ಬೆಳೆ ಸಮೀಕ್ಷೆ: ರೈತರಿಂದ ಬೆಳೆ ಸಮೀಕ್ಷೆ ಕಾರ್ಯವು ರಾಜ್ಯಾದ್ಯಂತ ನಡೆಯುತ್ತಿದ್ದು, ಮುಂದಿನ ಒಂದು ವಾರದ ಒಳಗಾಗಿ ಬೆಳೆ ಸಮೀಕ್ಷೆಯಲ್ಲಿ ಪ್ರಗತಿ ಸಾಧಿಸಿ. ಈ ಸಂಬಂಧ ಅಗತ್ಯ ತಯಾರಿಗಳೊಂದಿಗೆ ಕಾರ್ಯನಿರ್ವಹಿಸುವಂತೆ ಕೃಷಿ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಸ್ನೇಹ, ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್ ಖಂಡು, ತಹಶೀಲ್ದಾರರು, ತಾ.ಪಂ ಇಒಗಳು, ಕಂದಾಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳು ಇತರರು ಇದ್ದರು.