ಮಡಿಕೇರಿ, ಸೆ. 24: ಬೆಳೆ ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣ ಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೆಳೆ ಸಮೀಕ್ಷೆಯ ಪ್ರಗತಿ ಸಂಬಂಧ ಮಾಹಿತಿ ಪಡೆದು ಅವರು ಮಾತನಾಡಿದರು.

ಬೆಳೆಯನ್ನು ನಿಖರವಾಗಿ ಸಮೀಕ್ಷೆ ಮಾಡಬೇಕು. ಬೆಳೆ ಸಮೀಕ್ಷೆ ಬಗ್ಗೆ ದೂರುಗಳು ಕೇಳಿ ಬರದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಶಬಾನಾ ಎಂ. ಶೇಖ್ ಮಾತನಾಡಿ ಜಿಲ್ಲೆಯಲ್ಲಿ 2,59,886 ತಾಲೂಕು ಗಳಲ್ಲಿ 56,969 ಬೆಳೆ ಸಮೀಕ್ಷೆಯ ಸರ್ವೇ ಆಗಿದೆ ಎಂದರು.

ಬೆಳೆ ವಿಮೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಕೃಷಿ ಇಲಾಖೆಯ ಉಪ ನಿರ್ದೇಶಕರಾದ ರಾಜು ಅವರು ಜಿಲ್ಲೆಯಲ್ಲಿ 648 ಮಂದಿ ಬೆಳೆ ವಿಮೆಯಡಿ ಹೆಸರು ನೋಂದಾಯಿಸಿದ್ದು, ಸಂಪೂರ್ಣ ಬೆಳೆ ನಷ್ಟವಾದ ಒಂದು ಎಕರೆ ನೀರಾವರಿ ಭತ್ತಕ್ಕೆ 34 ಸಾವಿರ ರೂ. ಮಳೆಯಾಶ್ರಿತ ಭತ್ತ ಬೆಳೆಗೆ 22 ಸಾವಿರ ರೂ. ಹಾಗೂ ಮುಸುಕಿನ ಜೋಳಕ್ಕೆ 23 ಸಾವಿರ ರೂ. ವಿಮೆ ಸೌಲಭ್ಯವಿದೆ ಎಂದು ಮಾಹಿತಿ ನೀಡಿದರು. ಭತ್ತ ಮತ್ತು ಮುಸುಕಿನ ಜೋಳ ಬೆಳೆ ಸಂಪೂರ್ಣ ಹಾನಿಯಾಗಿದ್ದಲ್ಲಿ ಮಾತ್ರ ಬೆಳೆ ವಿಮೆ ನೀಡಲಾಗುತ್ತದೆ ಎಂದರು.

ಬೆಳೆ ವಿಮೆ ಸಂಬಂಧಿಸಿದಂತೆ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ರೈತರೊಂದಿಗೆ ಚರ್ಚಿಸುವುದರ ಜೊತೆಗೆ ಸಹಕಾರ ಸಂಘಗಳ ಸಹಕಾರ ಪಡೆಯುವಂತೆ ಸಲಹೆ ಮಾಡಿದರು.

ತಹಶೀಲ್ದಾರ್ ಮಹೇಶ್, ಗೋವಿಂದ ರಾಜು, ನಂದೀಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರು, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.