ಕುಶಾಲನಗರ, ಸೆ. 25: ಸ್ವಾಸ್ಥ್ಯ ಸಮಾಜ ನಿರ್ಮಾಣ ಕಾರ್ಯದಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದು ನಿವೃತ್ತ ಸುಬೇದಾರ್ ರಾಮನಾಥನ್ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮಾದಾಪಟ್ಟಣ ಗ್ರಾಮದ ಸಮುದಾಯ ಭವನದಲ್ಲಿ ನಡೆದ ಬೀದಿ ನಾಟಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಸಂಘಸಂಸ್ಥೆಗಳ ಮೂಲಕ ಉತ್ತಮ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳುವಂತಾಗಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಉಪಾಧ್ಯಕ್ಷ ಎಂ.ಎನ್. ಚಂದ್ರಮೋಹನ್, ಭಯ ಭಕ್ತಿಯಿದ್ದಲ್ಲಿ ಕಾರ್ಯಕ್ರಮಗಳು ಯಶಸ್ವಿಯಾಗುವುದರೊಂದಿಗೆ ಗುರಿ ಮುಟ್ಟಲು ಸಾಧ್ಯ ಎಂದರಲ್ಲದೆ ಮಹಿಳೆಯರು ಆರೋಗ್ಯ, ಶಿಕ್ಷಣ ಮತ್ತು ಪರಿಸರ ನೈರ್ಮಲ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಯುವ ಪೀಳಿಗೆ ದುಶ್ಚಟಗಳಿಗೆ ಬಲಿಯಾಗದಂತೆ ಎಚ್ಚರವಹಿಸಬೇಕೆಂದು ಕಿವಿಮಾತು ಹೇಳಿದರು.

ಜ್ಞಾನವಿಕಾಸ ಯೋಜನೆಯ ಸಮನ್ವಯಾಧಿಕಾರಿ ಪದ್ಮಾ ಅವರು ಸ್ಥಳೀಯ ಶಾಲೆಗಳಲ್ಲಿ ಹೆಚ್ಚಿನ ಅಂಕ ಪಡೆದ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹಕರ ಬಹುಮಾನ ವಿತರಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ದಾವಣಗೆರೆಯ ಶೃತಿ ಸಾಂಸ್ಕøತಿಕ ತಂಡದ ಸದಸ್ಯರಿಂದ ಕೊರೊನಾ, ಮದ್ಯಪಾನದಿಂದ ಉಂಟಾಗುವ ಅನಾಹುತಗಳು, ಪರಿಸರ ಜಾಗೃತಿ ಬಗ್ಗೆ ಬೀದಿ ನಾಟಕ ನಡೆಯಿತು. ಒಕ್ಕೂಟದ ಅಧ್ಯಕ್ಷ ಜಗದೀಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚಾಯಿತಿ ಮಾಜಿ ಸದಸ್ಯೆ ಡಾಟಿ, ಸೇವಾ ಪ್ರತಿನಿಧಿಗಳಾದ ಯಶೋಧ, ಜಯಲಕ್ಷ್ಮಿ, ದೃಶ್ಯ ತಂಡದ ಮುಖ್ಯಸ್ಥ ವೆಂಕಟೇಶ್ ಮತ್ತಿತರರು ಇದ್ದರು.