ಮಡಿಕೇರಿ ಸೆ. 30: ಜಿಲ್ಲೆಯಲ್ಲಿ ಅಕ್ಟೋಬರ್ 2 ರಿಂದ ನವೆಂಬರ್ 15 ರವರೆಗೆ 01 ನೇ ಸುತ್ತಿನ ಕಾಲು ಬಾಯಿ ಜ್ವರ ರೋಗ ನಿರೋಧಕ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯ ರೈತರು ತಮ್ಮ ರಾಸುಗಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾಲು ಬಾಯಿ ರೋಗ ಲಸಿಕಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ನಿರ್ವಾಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ವತಿಯಿಂದ ರೈತರು ತಮ್ಮ ರಾಸುಗಳಿಗೆ ಲಸಿಕೆ ಹಾಕುವ ಸಂಬಂಧ ಪ್ರಚಾರ ನೀಡಲು ಕ್ರಮವಹಿಸು ವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ಲಸಿಕೆಯು ಸಂಪೂರ್ಣ ವಾಗಿ ಉಚಿತವಾಗಿದ್ದು ಯಾವುದೇ ರೀತಿಯ ಶುಲ್ಕವಿರುವುದಿಲ್ಲ. ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ಲಸಿಕಾದಾರರು ಜಾನುವಾರು ಮಾಲೀಕರ ಮನೆಗಳಿಗೆ ಬಂದಾಗ ಸಹಕಾರ ನೀಡಿ 3 ತಿಂಗಳ ಮೇಲ್ಪಟ್ಟ ಎಲ್ಲಾ ದನ/ಎಮ್ಮೆ ಮತ್ತು ಹಂದಿಗಳಿಗೆ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಹೇಳಿದರು. ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಸುರೇಶ ಭಟ್ಟ ಮಾತನಾಡಿ ಪ್ರತಿ 6 ತಿಂಗಳಿಗೊಮ್ಮೆ ಲಸಿಕೆ ಹಾಕಿಸಿ, ರೋಗ ಬಾರದಂತೆ ತಡೆಗಟ್ಟಬಹುದಾಗಿರುತ್ತದೆ. 20ನೇ ಜಾನುವಾರು ಗಣತಿಯಂತೆ ಜಿಲ್ಲೆಯಲ್ಲಿ ದನ ಹಾಗೂ ಎಮ್ಮೆಗಳ ಸಂಖ್ಯೆ 77,776 ಇದ್ದು 8625 ಹಂದಿಗಳಿರುತ್ತವೆ. ಒಟ್ಟು 86,401 ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿಯನ್ನು ಹೊಂದಲಾಗಿದೆ. ಈಗಾಗಲೇ ಲಸಿಕಾ ಕಾರ್ಯಕ್ರಮಕ್ಕೆ ಎಲ್ಲಾ ಪೂರ್ವಸಿದ್ದತೆಯನ್ನು ಮಾಡಿಕೊಳಲಾಗಿದ್ದು 75 ಲಸಿಕಾ ದಾರರನ್ನೊಳಗೊಂಡ ಒಟ್ಟು 11 ತಂಡಗಳನ್ನು ರಚಿಸಲಾಗಿರುತ್ತದೆ. ಲಸಿಕಾದಾರರು ರೈತರ/ಜಾನುವಾರು ಮಾಲೀಕರ ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಸಂಬಂಧ ಹೆಚ್ಚಿನ ಮಾಹಿತಿ ಗಾಗಿ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಮಡಿಕೇರಿ 08272 228805, ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಸೋಮವಾರಪೇಟೆ 08276 282127, ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ವೀರಾಜಪೇಟೆ 08274 257228 ಸಂಪರ್ಕಿಸುವಂತೆ ತಿಳಿಸಿದರು. ಹಾಸನ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಸುಂದರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ. ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಅರುಂಧತಿ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಪಿ.ಬೊಳಕ್, ಡಾ. ಎಸ್.ವಿ ಬಾದಾಮಿ, ಡಾ. ಎ.ಬಿ. ತಮ್ಮಯ್ಯ ಇತರರು ಇದ್ದರು.