ಮಡಿಕೇರಿ, ಅ. 3: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್ (ಗ್ರಾ), ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲೆಯಲ್ಲಿ ಈಗಾಗಲೇ 104 ಗ್ರಾಮ ಪಂಚಾಯಿತಿಗಳಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕ್ರಿಯಾಯೋಜನೆಯನ್ನು ತಯಾರಿಸಿ ಸರ್ಕಾರದಿಂದ ಅನುಮೋದನೆ ಪಡೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ 25 ಗ್ರಾಮ ಪಂಚಾಯಿತಿಗಳು ಕ್ರಿಯಾತ್ಮಕವಾಗಿದ್ದು, “ಸ್ವಚ್ಛ್ಯೋತ್ಸವ-ನಿತ್ಯೋತ್ಸವ” ಮಾಸಚರಣೆ ಅಕ್ಟೋಬರ್ 2 ರಿಂದ 31 ರವರೆಗೆ ಜಿಲ್ಲೆಯಲ್ಲಿ ನಡೆಯುತ್ತಿದೆ.

ಜಿಲ್ಲಾ ಉಸ್ತವಾರಿ ಸಚಿವರಾದ ವಿ.ಸೋಮಣ್ಣ ಅವರು 69 ಗ್ರಾಮ ಪಂಚಾಯಿತಿಗಳ ಸ್ವಚ್ಛ ವಾಹಿನಿ (ಘನ ತ್ಯಾಜ್ಯ ವಿಲೇವಾರಿ ವಾಹನ)ಯನ್ನು ಕೊಡಗು ಜಿಲ್ಲಾ ಪಂಚಾಯತ್ ಸಂಕೀರ್ಣದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭ ಶಾಸಕರಾದ ಅಪ್ಪಚ್ಚು ರಂಜನ್, ಕೊಡಗಿನಲ್ಲಿ ಹಲವು ಪಂಚಾಯಿತಿ ವ್ಯಾಪ್ತಿಯಲ್ಲಿ ಗುಡ್ಡಗಾಡು ಪ್ರದೇಶಗಳಿದ್ದು, ಅಂತಹ ಪ್ರದೇಶಗಳಿಗೆ ಟಾಟಾ ಏಸ್ ಬದಲಿಗೆ ಪಿಕ್‍ಅಪ್ ವಾಹನ ನೀಡುವಂತಾಗಬೇಕೆಂದು ಮನವಿ ಮಾಡಿದರು. ಕೆ.ಜಿ.ಬೋಪಯ್ಯ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಎ.ಹರೀಶ್, ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾಧಿಕಾರಿಗಳು ಅನೀಸ್ ಕಣ್ಮಣಿ ಜಾಯ್, ಜಿ.ಪಂ ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು.

ಜುಲೈ 15 ರಿಂದ ಸೆಪ್ಟೆಂಬರ್ 15ರ ವರೆಗೆ ರಾಜ್ಯ ಆರ್‍ಡಿಪಿಆರ್ ಇಲಾಖೆ ಸಾಮಾಜಿಕ ಜಾಲತಾಣ ಘಟಕವು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತ್ ಫೇಸ್‍ಬುಕ್ ಫಾಲೋವರ್ ಹೆಚ್ಚಿಸುವ ಸ್ಪರ್ಧೆಯನ್ನು ಏರ್ಪಡಿಸಿದ್ದು, ಇದರಲ್ಲಿ ಕೊಡಗು ಸಣ್ಣ ಜಿಲ್ಲೆಯಾದರು ರಾಜ್ಯದಲ್ಲಿ 3ನೇ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಇದಕ್ಕೆ ಕೊಡಗು ಜಿಲ್ಲಾ ಪಂಚಾಯತ್‍ಗೆ ರೂ. 15 ಸಾವಿರ ಬಹುಮಾನ ಮೊತ್ತದ ಚೆಕ್‍ನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಜಿಲ್ಲಾ ಸಮಾಲೋಚಕರಾದ ಡಿ.ಡಿ. ಪೆಮ್ಮಯ್ಯ, ಎ.ಎಂ. ಸೂರಜ್, ಎಚ್.ಎಸ್. ವಾಸುದೇವ, ಹರ್ಷಿತಾ ಎ.ಆರ್., ರಾಜೇಶ್ ವಿ. ಹಾಗೂ ಜಿಲ್ಲಾ ನೆರವು ಘಟಕದ ಭವ್ಯ ಎಚ್.ಸಿ ಇವರಿಗೆ ವಿತರಿಸಿದರು.