ಮಡಿಕೇರಿ, ಅ. 19: ಪ್ರವಾದಿ ಮೊಹಮ್ಮದ್ ಅವರ ಹುಟ್ಟು ಹಬ್ಬವನ್ನು ಈದ್ ಮಿಲಾದ್ ಹಬ್ಬವಾಗಿ ಮುಸ್ಲಿಂ ಬಾಂಧವರು ರಾಜ್ಯದಾದ್ಯಂತ ಆಚರಿಸಲಿದ್ದು, ಈ ಹಬ್ಬವನ್ನು ಮೆರವಣಿಗೆ (ಜುಲೂಸ್), ಸಾಮೂಹಿಕವಾಗಿ ಫಾತೇಹಾ, ಝಿಯಾರತ್ ಹಾಗೂ ಅನ್ನದಾನ ರಹಿತವಾಗಿ ಆಚರಿಸಲು ರಾಜ್ಯ ಸರಕಾರ ಆದೇಶಿಸಿದೆ. ಪ್ರಸ್ತುತ ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣವು ಹೆಚ್ಚಾಗುತ್ತಿರುವುದರಿಂದ ಸರಳವಾಗಿ ಆಚರಿಸುವಂತೆ ಆದೇಶಿಸಿದೆ.

ಭಾರತ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯ, ಇವರ ಅಧಿಕೃತ ಜ್ಞಾಪನದ ಪ್ರಕಾರ ಈ ಕೆಳಕಂಡ ಮಾರ್ಗಸೂಚಿಗಳನ್ನು ರಾಜ್ಯದಲ್ಲಿರುವ ಎಲ್ಲಾ ಮಸೀದಿ/ ದರ್ಗಾ ಹಾಗೂ ಇನ್ನಿತರ ಎಲ್ಲಾ ವಕ್ಛ್ ಸಂಸ್ಥೆಗಳು ಕಡ್ಡಾಯವಾಗಿ ಅನುಸರಿಸಬೇಕಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಹಾಗೂ ತಾ. 6.6.2020ರ ಸುತ್ತೋಲೆಯಲ್ಲಿ ಧಾರ್ಮಿಕ ಸ್ಥಳಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಮುಂದುವರಿಸುತ್ತಾ, ಪ್ರಸ್ತುತ 2020ನೇ ಸಾಲಿನ ಈದ್ ಮಿಲಾದ್ ಆಚರಿಸಲು ಮಾರ್ಗಸೂಚಿಗಳು ಈ ಕೆಳಕಂಡಂತಿವೆ.

ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಮೊಹಲ್ಲಾಗಳಲ್ಲಿ ನಡೆಯುವ ಯಾವುದೇ ರೀತಿಯ ಹಗಲು ಮತ್ತು ರಾತ್ರಿಯ ಪ್ರವಚನ ಕಾರ್ಯಕ್ರಮ, ಸಾಂಸ್ಕøತಿಕ ಕಾರ್ಯಕ್ರಮ, ಸಭೆ ಸಮಾರಂಭಗಳನ್ನು ನಿಷೇಧಿಸಲಾಗಿದೆ.

ಮಸೀದಿಗಳಲ್ಲಿ, ದರ್ಗಾಗಳಲ್ಲಿ ಸಾಮಾಜಿಕ ಅಂತರ ಹಾಗೂ ಕೋವಿಡ್-19ರ ಶಿಷ್ಟಾಚಾರದೊಂದಿಗೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳ ಜೊತೆಗೆ ದೈಹಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ನೆರವೇರಿಸಬೇಕು. ಸಾರ್ವಜನಿಕ ಪ್ರದೇಶಗಳಲ್ಲಿ ಧ್ವನಿವರ್ಧಕಗಳು, ಡಿಜಿಟಲ್ ಸೌಂಡ್ ಸಿಸ್ಟಮ್ (ಡಿಜೆ) ಬಳಕೆಯನ್ನು ನಿಷೇಧಿಸಲಾಗಿದೆ.

ಮುಖಗವಸುಗಳನ್ನು ಕಡ್ಡಾಯವಾಗಿ ಬಳಸಬೇಕು. 60 ವರ್ಷ ಮೇಲ್ಪಟ್ಟ ನಾಗರಿಕರು ಮತ್ತು 10 ವರ್ಷದೊಳಗಿನ ಮಕ್ಕಳು ಮನೆಯಲ್ಲಿಯೇ ಹಬ್ಬದ ಆಚರಣೆಯನ್ನು ಮಾಡಬೇಕು. ಸ್ಯಾನಿಟೈಸರ್ ಹಾಗೂ ಸೋಪಿನೊಂದಿಗೆ ಕೈ ತೊಳೆಯಲು ಪ್ರವೇಶ ದ್ವಾರದಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು.

ಖಬರಸ್ಥಾನ್ ಒಳಗೊಂಡಂತೆ ಯಾವುದೇ ರೀತಿಯ ತೆರೆದ ಜಾಗದಲ್ಲಿ ಸಾಮೂಹಿಕ ಪ್ರಾರ್ಥನೆ, ಪ್ರವಚನ ಮುಂತಾದವುಗಳನ್ನು ಆಯೋಜಿಸುವಂತಿಲ್ಲ.