ಬೆಂಗಳೂರು, ನ. 24 : ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು; ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶು ಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌಹಾಣ್ ತಮ್ಮ ಸಂತಸ ವ್ಯಕ್ತಪಡಿಸಿದ್ದಾರೆ.ಈ ಕುರಿತಾಗಿ ಮುಖ್ಯಮಂತ್ರಿ ಗಳೊಂದಿಗೆ ಚರ್ಚೆ ನಡೆಸಲಾಗಿದ್ದು ಇದೇ ಡಿಸೆಂಬರ್ 7 ರಿಂದ ಆರಂಭವಾಗಲಿರುವ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮಂಡನೆ ಮಾಡಲಿದ್ದು ಅದಕ್ಕೆ ಬೇಕಾದ ಎಲ್ಲ ಪೂರ್ವ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸಚಿವರು ತಿಳಿಸಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿರುವ ಬೇರೆ ಬೇರೆ ರಾಜ್ಯಗಳಲ್ಲಿ ಅನುಷ್ಠಾನಗೊಂಡ ಕಾಯ್ದೆಯ ಅಧ್ಯಯನ ನಡೆಸಲಾಗಿದ್ದು ಈ ಬಗ್ಗೆ ಇಲಾಖಾ ಅಧಿಕಾರಿಗಳ ಮಟ್ಟದಲ್ಲಿ ಹಾಗೂ ಪರಿಣಿತರೊಂದಿಗೆ ಚರ್ಚೆ ಮಾಡಲಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಗೋಹತ್ಯೆ ನಿಷೇಧ ಕಾಯ್ದೆ ಹೆಚ್ಚು ಬಲವಾಗಿಸುವ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಇನ್ನು ಮುಂದೆ ಗೋಹತ್ಯೆ ನಿಷೇಧವಾಗಲಿದ್ದು ರಾಜ್ಯದ ಒಳಗೂ ಮತ್ತು ಹೊರಗೂ ಗೋಮಾಂಸ ಆಮದು ಮತ್ತು ರಫ್ತು ಸಂಪೂರ್ಣ ನಿಷೇಧ ಆಗಲಿದೆ.

2010 ರಲ್ಲಿ ಕರ್ನಾಟಕ ಗೋ ಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯ 1964 ಬದಲಾಗಿ, ಕರ್ನಾಟಕ ಜಾನುವಾರು ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ 2010ನ್ನು ಅಂದಿನ ನಮ್ಮ ಸರ್ಕಾರದ ಅವಧಿಯಲ್ಲಿ ವಿಧಾನಮಂಡಲದಲ್ಲಿ ಮಂಡಿಸಿದ ನಂತರ ರಾಜ್ಯಪಾಲರ ಅನು ಮೋದನೆಗೆ ಕಳುಹಿಸಲಾಗಿತ್ತು. ಅಂದು ರಾಜ್ಯಪಾಲರಾಗಿದ್ದ ಹಂಸರಾಜ್ ಭಾರಧ್ವಾಜ್ ಅವರು ಇದನ್ನು ರಾಷ್ಟ್ರಪತಿಗಳ ಅನುಮೋದನೆಗೆ ಕಳುಹಿಸಿದ್ದರಿಂದ ಕಾಯ್ದೆಯ ಅನುಷ್ಠಾನದಲ್ಲಿ ವಿಳಂಬವಾಯಿತು. ಅಲ್ಲದೆ ಕೇಂದ್ರ

(ಮೊದಲ ಪುಟದಿಂದ) ಗೃಹ ಇಲಾಖೆ ಸಹ ಕೆಲವು ಆಕ್ಷೇಪಣೆಗಳನ್ನು ವ್ಯಕ್ತಪಡಿಸಿ ತಿದ್ದುಪಡಿಗೆ ಸೂಚನೆ ನೀಡಿತ್ತು.

ಹಿಂದಿನ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ 1964ರ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮುಂದುವರೆಸಿತು. ಸದ್ಯ ರಾಜ್ಯದಲ್ಲಿ ನಮ್ಮದೇ ಸರ್ಕಾರವಿದ್ದು ಕಾಯ್ದೆಯನ್ನು ಮತ್ತಷ್ಟು ಬಲಪಡಿಸಿ ಅನುಷ್ಠಾನಗೊಳಿಸುವ ಪ್ರಯತ್ನ ದಲ್ಲಿದ್ದೇವೆ ಎಂದು ಸಚಿವರು ಹೇಳಿದ್ದಾರೆ.

ಈಗಾಗಲೇ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿ ಅಸ್ತಿತ್ವಕ್ಕೆ ಬಂದಿದ್ದು ಅದರ ಅಡಿಯಲ್ಲಿ ಯಾವುದೇ ರೀತಿಯ ಪ್ರಾಣಿ ಹಿಂಸೆಯನ್ನು ತಡೆಯಬಹುದಾಗಿದ್ದು, ಗೋವಂಶ ಹತ್ಯ, ಗೋವುಗಳ ಅಕ್ರಮ ಸಾಗಾಟ, ಹಿಂಸೆ ತಡೆಯುವ ಬಗ್ಗೆ ಮಂಡಳಿ ಈಗಾಗಲೇ ಕಾರ್ಯಪ್ರವೃತ್ತವಾಗಿದೆ. ದೇಶದಲ್ಲಿ ಹಲವು ರಾಜ್ಯಗಳು ಗೋಹತ್ಯೆ ನಿಷೇಧ ಅನುಷ್ಠಾನ ಜಾರಿಗೆ ತಂದಿದ್ದು ಕರ್ನಾಟಕದಲ್ಲಿಯೂ ಸಮರ್ಪಕವಾಗಿ ಕಾರ್ಯಗತಗೊಳಿಸಲು ಸಿದ್ದವಾಗಿದೆ.

ರಾಜಸ್ಥಾನ್, ಆಂಧ್ರಪ್ರದೇಶ ತೆಲಂಗಾಣ, ಅಸ್ಸಾಂ, ಬಿಹಾರ, ಚಂಡೀಗಡ, ಛತ್ತೀಸಗಡ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಜಾಖರ್ಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ಪಂಜಾಬ್, ತಮಿಳುನಾಡು, ಉತ್ತರಪ್ರದೇಶ ರಾಜ್ಯಗಳಲ್ಲಿ ಗೋಹತ್ಯೆ ನಿಷೆಧ ಕಾಯ್ದೆ ಜಾರಿಯಲ್ಲಿದೆ.