ಸೋಮವಾರಪೇಟೆ, ಡಿ. 8: ಜೆಡಿಎಸ್‍ನಲ್ಲಿದ್ದ ಮಾಜಿ ಸಚಿವ ಬಿ.ಎ.ಜೀವಿಜಯ ಅವರು ಇದೀಗ ಕಾಂಗ್ರೆಸ್ ಸೇರ್ಪಡೆಯಾಗುತ್ತಿರು ವದರಿಂದ ಜೆಡಿಎಸ್ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಜೀವಿಜಯ ಅವರೊಂದಿಗೆ ಜೆಡಿಎಸ್‍ನ ನಿಷ್ಠಾವಂತ ಕಾರ್ಯಕರ್ತರ್ಯಾರೂ ಪಕ್ಷ ಬಿಡುವುದಿಲ್ಲ ಎಂದು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ. ಗಣೇಶ್ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಜೆಡಿಎಸ್ ಬಲಿಷ್ಠವಾಗುತ್ತಿದೆ. ಜೀವಿಜಯ ಅವರ ಜತೆ ಪಕ್ಷದ ನಾಯಕರು ಹೋದರೆ ಅಂತಹವರನ್ನು ಪಕ್ಷದಿಂದ ಉಚ್ಛಾಟಿಸಲಾಗುವುದು ಎಂದು ಎಚ್ಚರಿಸಿದರು.

ನಾಯಕರಿಲ್ಲದೆ ಹೀನಾಯ ಸ್ಥಿತಿಯಲ್ಲಿರುವ ಕಾಂಗ್ರೆಸ್‍ನ್ನು ಸೇರಿರುವ ಜೀವಿಜಯ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದಿದ್ದಾಗ ಮತ್ತೆ ಜೆಡಿಎಸ್ ಕದ ತಟ್ಟಿದರೆ ಯಾವುದೇ ಕಾರಣಕ್ಕೂ ಸೇರಿಸುವುದಿಲ್ಲ ಎಂದು ಹೇಳಿದರು.

ಮಡಿಕೇರಿ ಕ್ಷೇತ್ರದಲ್ಲಿ 750 ಮಂದಿ ಜೆಡಿಎಸ್ ಬೆಂಬಲಿಗರು ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. 400 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿಯವರು 14 ತಿಂಗಳು ಮುಖ್ಯಮಂತ್ರಿಯಾಗಿದ್ದ ಸಂದರ್ಭ ರೈತರ 1 ಲಕ್ಷ ರೂ.ಗಳ ಸಾಲಮನ್ನಾ ಮಾಡಿ, ರೈತರ ಕಷ್ಟಕ್ಕೆ ಆಸರೆಯಾಗಿದ್ದಾರೆ. ವೃದ್ಧಾಪ್ಯವೇತನ, ವಿಧವಾವೇತನ, ಅಂಗವಿಕಲ ವೇತನ ಮೊತ್ತವನ್ನು ಹೆಚ್ಚಿಸಿದ್ದಾರೆ. ಪ್ರಕೃತಿ ವಿಕೋಪ ಸಂತ್ರಸ್ತರಿಗೆ 840 ಮನೆಗಳನ್ನು ನಿರ್ಮಿಸಲು ಅನುದಾನ ಕಲ್ಪಿಸಿದ್ದಾರೆ. ಇಂತಹ ಸಾಧನೆಯನ್ನೇ ಹೇಳಿ ಮತ ಯಾಚಿಸುತ್ತೇವೆ ಎಂದರು.

ನಿಷ್ಕ್ರಿಯವಾಗಿರುವ ಕಾಂಗ್ರೆಸ್ ಮತ್ತು ರೈತರ ಮರಣ ಶಾಸನಗಳನ್ನು ಜಾರಿಗೆ ತಂದಿರುವ ಬಿಜೆಪಿ ವಿರುದ್ಧ ಚುನಾವಣೆಯಲ್ಲಿ ಹೋರಾಟ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ರೈತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಕೃಷಿ ಮಸೂದೆಗಳ ಮೂಲಕ ರೈತರ ಕಗ್ಗೊಲೆಗೆ ಮುಂದಾಗಿದೆ. ರೈತರ ರಕ್ಷಣೆ ಮಾಡುತ್ತಿದ್ದ ಸಹಕಾರ ಸಂಘಗಳನ್ನು ನಾಶ ಮಾಡಲು ಕಾಯ್ದೆ ರೂಪಿಸಿದ್ದಾರೆ. ಶೂನ್ಯ ಬಡ್ಡಿ ದರದಲ್ಲಿ ಸಾಲ ಸಿಗುವುದನ್ನು ತಡೆದಿದ್ದಾರೆ. ರೈತರ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ತಂತ್ರ ರೂಪಿಸುತ್ತಿದ್ದಾರೆ ಎಂದು ಗೋಷ್ಠಿಯಲ್ಲಿದ್ದ ಜೆಡಿಎಸ್ ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ಹೇಳಿದರು.

ಗೋಷ್ಠಿಯಲ್ಲಿ ಪಕ್ಷದ ತಾಲೂಕು ಅಧ್ಯಕ್ಷ ಸಿ.ಎಸ್.ನಾಗರಾಜ್, ರಾಜ್ಯ ಸಂಘಟನಾ ಕಾರ್ಯದರ್ಶಿ ತಮ್ಮಯ್ಯ, ಪ್ರಮುಖ ಕೆ.ಟಿ.ಪರಮೇಶ್ ಉಪಸ್ಥಿತರಿದ್ದರು.