ಮಡಿಕೇರಿ, ಮೇ ೨: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಕೊಡಗು ಜಿಲ್ಲೆಯಲ್ಲೂ ಪರಿಸ್ಥಿತಿ ಕೈಮೀರುತ್ತಿದೆ. ಒಂದೇ ದಿನದಲ್ಲಿ ೭-೮ ಸೋಂಕಿತರು ಸಾವನ್ನಪ್ಪುತ್ತಿದ್ದು, ಸರ್ಕಾರ ಕೈಚೆಲ್ಲಿ ಕುಳಿತಂತೆ ಕಂಡು ಬರುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯೆ ಶಾಂತೆಯAಡ ವೀಣಾಅಚ್ಚಯ್ಯ ಅವರು ಟೀಕಿಸಿದ್ದಾರೆ. ಸರ್ಕಾರ ಈ ಸಂದಿಗ್ಧ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ ವೈದ್ಯಕೀಯ ವ್ಯವಸ್ಥೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.
ಜಿಲ್ಲೆಯ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು ತಮ್ಮ ಪ್ರಾಣದ ಹಂಗುತೊರೆದು ಕೋವಿಡ್ ಸೋಂಕಿತರ ರಕ್ಷಣೆಗಾಗಿ ರಾತ್ರಿ, ಹಗಲೆನ್ನದೆ ಶ್ರಮಿಸುತ್ತಿದ್ದಾರೆ. ಆದರೆ ಸರ್ಕಾರ ಮಾತ್ರ ಎಲ್ಲವನ್ನೂ ಅಧಿಕಾರಿಗಳ ಮೇಲೆ ಹಾಕಿ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಕೊಡಗಿನ ಉಸ್ತುವಾರಿ ಸಚಿವರು ಇಲ್ಲಿನ ಸಮಸ್ಯೆಗಳ ಬಗ್ಗೆ ಯಾವುದೇ ಕಾಳಜಿಯನ್ನು ತೋರುತ್ತಿಲ್ಲ. ಕೋವಿಡ್ ಪರಿಸ್ಥಿತಿ ಕೈಮೀರುತ್ತಿರುವ ಬಗ್ಗೆ ಅವರಿಗೆ ಯಾವುದೇ ಮಾಹಿತಿ ಇದ್ದಂತ್ತಿಲ್ಲ. ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಸಂಸದರು ಕೂಡ ಉಸ್ತುವಾರಿ ಸಚಿವರು ಬರುವಾಗ ಬಂದು ಹೋಗುತ್ತಾರೆಯೇ ಹೊರತು ಜಿಲ್ಲೆಯ ಮೇಲೆ ಹೆಚ್ಚಿನ ಆಸಕ್ತಿ ವಹಿಸಿ ಯಾವುದೇ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ವೀಣಾಅಚ್ಚಯ್ಯ ಆರೋಪಿಸಿದ್ದಾರೆ.
ತಕ್ಷಣ ಉಸ್ತುವಾರಿ ಸಚಿವರು ಹಾಗೂ ಸಂಸದರು ಜಿಲ್ಲೆಯ ಆಸ್ಪತ್ರೆಗಳಿಗೆ ಬೇಕಾಗಿರುವ ಎಲ್ಲಾ ಸೌಲಭ್ಯಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಬೇಕು, ಕೋವಿಡ್ ಪರೀಕ್ಷೆಗೆ ಮತ್ತು ಲಸಿಕೆ ಪಡೆಯಲು ಬರುತ್ತಿರುವವರಿಗೆ ಆಗುತ್ತಿರುವ ಅನಾನುಕೂಲತೆಗಳನ್ನು ಸರಿಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಉಸ್ತುವಾರಿ ಸಚಿವರ ಸಭೆಯಲ್ಲಿ ಅಧಿಕಾರಿಗಳು ಸಚಿವರನ್ನು ತೃಪ್ತಿ ಪಡಿಸುವುದಕ್ಕಷ್ಟೇ ವರದಿ ನೀಡುತ್ತಿದ್ದಾರೆ. ಕಳೆದ ಸಭೆಯಲ್ಲಿ ಮಡಿಕೇರಿಯ ಕೊಡಗು ವಿದ್ಯಾಲಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಆದರೆ ಅಲ್ಲಿ ಕೋವಿಡ್ ಕೇರ್ ಸೆಂಟರ್ ಇಲ್ಲವೆಂದು ತಿಳಿದು ಬಂದಿದೆ.
ಮಡಿಕೇರಿ ಕೋವಿಡ್ ಆಸ್ಪತ್ರೆಗೆ ಪ್ರತಿದಿನ ೫೦೦ ಕ್ಕೂ ಅಧಿಕ ಮಂದಿ ಕೋವಿಡ್ ಪರೀಕ್ಷೆಗಾಗಿ ಆಗಮಿಸುತ್ತಿದ್ದಾರೆ. ಬರುವ ರೋಗಿಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಶುದ್ಧ ಕುಡಿಯುವ ಬಿಸಿ ನೀರು, ನೆರಳು ಮತ್ತು ಕುರ್ಚಿಗಳ ವ್ಯವಸ್ಥೆಯನ್ನು ಮಾಡಬೇಕೆಂದು ವೀಣಾ ಅಚ್ಚಯ್ಯ ಆಗ್ರಹಿಸಿದ್ದಾರೆ.
ಜಿಲ್ಲೆಯ ಎಲ್ಲಾ ಗ್ರಾ.ಪಂ ವ್ಯಾಪ್ತಿಯಲ್ಲಿ ಕೋವಿಡ್ ಕೇಂದ್ರಗಳನ್ನು ಸ್ಥಾಪಿಸಿ ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕು. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಮತ್ತು ಖಾಸಗಿ ಆಸ್ಪತ್ರೆಯ ವೈದ್ಯರುಗಳಿಂದ ಸೇವೆಯನ್ನು ಪಡೆಯಲು ಆರೋಗ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆ ನಗರದಲ್ಲಿ ತುರ್ತು ಸಂಚಾರಕ್ಕೆ ಆಟೋ ರಿಕ್ಷಾಗಳಿಗೆ ಅವಕಾಶ ನೀಡಬೇಕು ಎಂದು ತಿಳಿಸಿದ್ದಾರೆ.