ಕಣಿವೆ, ಸೆ. ೫: ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನಕ್ಕೆ ಶಿಫಾರಸ್ಸು ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಭರವಸೆ ನೀಡಿದರು. ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಭಾನುವಾರ ಮೈಸೂರಿಗೆ ತೆರಳುತ್ತಿದ್ದ ವೇಳೆ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಕುಶಾಲನಗರದ ಕೊಪ್ಪ ಗೇಟ್ ಬಳಿಯ ಕಾವೇರಿ ಪ್ರತಿಮೆ ಬಳಿ ಕಟೀಲ್ ಅವರನ್ನು ಸ್ವಾಗತಿಸಿದರು. ಈ ಸಂದರ್ಭ ಸ್ಥಳದಲ್ಲಿದ್ದ ಸ್ಥಳೀಯರು, ಐದು ಬಾರಿ ಪೂರ್ಣಾವಧಿ ಶಾಸಕರಾಗಿರುವ ಅಪ್ಪಚ್ಚು ರಂಜನ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ನಳಿನ್ ಕುಮಾರ್ ಕಟೀಲ್ ಅವರ ಬಳಿ ಮನವಿ ಮಾಡಿದರು.

ಕೊಡಗು ಜಿಲ್ಲೆಯಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ ಶಾಸಕ ರಂಜನ್ ಅವರಿಗೆ ಈ ಬಾರಿಯ ಬೊಮ್ಮಾಯಿ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ನೀಡಬೇಕಿದೆ. ಕೊಡಗು ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಗೊಳಿಸಲು ಕೊಡಗು ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಸಚಿವರಾಗಿಸಬೇಕಿದೆ. ಮುಂಬರುವ ಸಚಿವ ಸಂಪುಟ ವಿಸ್ತರಣೆ ವೇಳೆ ಅಪ್ಪಚ್ಚು ಅವರಿಗೆ ಸಚಿವ ಸ್ಥಾನ ನೀಡದೇ ಹೋದರೆ ಪಕ್ಷ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಕೂಡ ಸ್ಥಳೀಯರು ನೀಡಿದರು.

ಸ್ಥಳೀಯರ ಕೋರಿಕೆ ಆಲಿಸಿ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಮಗೂ ಕೂಡ ಅಪ್ಪಚ್ಚು ರಂಜನ್ ಮಂತ್ರಿಯಾಗ ಬೇಕೆಂಬ ಅಪೇಕ್ಷೆ ಇದೆ. ನೋಡೋಣ. ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದರು. ಬಳಿಕ ಕಟೀಲ್ ಅವರು ಅಪ್ಪಚ್ಚು ಅವರನ್ನು ತಮ್ಮ ಕಾರಿಗೆ ಕರೆದು ಕುಳ್ಳಿರಿಸಿ ಜೊತೆಯಲ್ಲೇ ಮೈಸೂರಿನತ್ತ ತೆರಳಿದರು.