ಮಡಿಕೇರಿ, ಸೆ.೧೭: ಕೊಡಗು ಜಿಲ್ಲೆಯಲ್ಲಿ ತಾ.೧೮ (ಇಂದು) ಮತ್ತು ೧೯ (ನಾಳೆ) ರಂದು ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುತ್ತಿರುವ ರಾಜ್ಯದ ವಿವಿಧ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ್ ಕರ್ನಾಟಕ ವೃಂದದ ಕಿರಿಯ ಸಹಾಯಕರು/ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಅವ್ಯವಹಾರಗಳಿಲ್ಲದಂತೆ, ಸುಗಮವಾಗಿ ನಡೆಸುವ ಸಲುವಾಗಿ ದಂಡ ಪ್ರಕ್ರಿಯಾ ಸಂಹಿತೆ ೧೯೭೩ರ ಕಲಂ ೧೪೪ ರಡಿ ಪರೀಕ್ಷಾ ಕೇಂದ್ರ ಸೇರಿದಂತೆ ಸದರಿ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ವ್ಯಾಪ್ತಿಯಲ್ಲಿನ ಪ್ರÀದೇಶವನ್ನು ನಿರ್ಬಂಧಿತ ಸ್ಥಳ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು, ಚೀಟಿ ಅಥವಾ ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು, ಇನ್ನಾವುದೇ ವಸ್ತುಗಳನ್ನು ಹಂಚುವುದು/ ರವಾನಿಸುವುದು ಮತ್ತಿತರ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ಮುಂತಾದ ಎಲೆಕ್ಟಾçನಿಕ್ ಉಪಕರಣಗಳನ್ನು ಒಯ್ಯುವುದು ಮತ್ತು ಬಳಸುವುದನ್ನು ಪರೀಕ್ಷಾ ಕೇಂದ್ರದೊಳಗೆ ಸಂಪೂರ್ಣವಾಗಿ ನಿಷೇಧಿಸಿದೆ. ಅನಧಿಕೃತ ವ್ಯಕ್ತಿಗಳು ಪ್ರವೇಶ, ಯಾವುದೇ ನಿಯಮಬಾಹಿರ ಕಾರ್ಯಗಳನ್ನು ನಡೆಸತಕ್ಕದ್ದಲ್ಲ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಪೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು, ಚಿತ್ರೀಕರಣ ಹಾಗೂ ಇನ್ನಿತರ ಮಾರಕ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ.