ಸೋಮವಾರಪೇಟೆ, ಜ. ೫: ರಾಮನಗರದಲ್ಲಿ ಮುಖ್ಯಮಂತ್ರಿಗಳು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ. ಸುರೇಶ್ ಅವರು ಗೂಂಡಾವರ್ತನೆ ತೋರಿದ್ದು, ಇವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು.
ಇಲ್ಲಿನ ಖಾಸಗಿ ಬಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಯುವ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪಕ್ಷದ ಮುಖಂಡರು ಕಾಂಗ್ರೆಸ್ ನಾಯಕ ಹಾಗೂ ಸಂಸದರಾಗಿರುವ ಡಿ.ಕೆ. ಸುರೇಶ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಮಾತನಾಡಿ, ಸಂಸದ ಡಿ.ಕೆ. ಸುರೇಶ್ ಗೂಂಡಾಗಿರಿ ತೋರಿರುವುದು ಖಂಡನೀಯ ಎಂದರು. ರಾಜ್ಯ ಪಶ್ಚಿಮಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯAಡ ರವಿಕುಶಾಲಪ್ಪ ಮಾತನಾಡಿದರು..
ಪ್ರತಿಭಟನೆಯಲ್ಲಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ, ತಾಲೂಕು ಅಧ್ಯಕ್ಷ ಚಂದ್ರಶೇಖರ್, ಕುಶಾಲನಗರ ಶಕ್ತಿ ಕೇಂದ್ರ ಅಧ್ಯಕ್ಷ ಸುಮನ್, ಮಂಡಲ ಪ್ರಧಾನ ಕಾರ್ಯದರ್ಶಿ ಪದ್ಮನಾಭ್, ಮೋಹಿತ್ ತಿಮ್ಮಯ್ಯ, ರಾಜ್ಯ ಕಾರ್ಯಕಾರಿಣಿ ಸದಸ್ಯ ಮಹೇಶ್ ತಿಮ್ಮಯ್ಯ, ಬಿಜೆಪಿ ಮಂಡಲ ಅಧ್ಯಕ್ಷ ಮನುಕುಮಾರ್ ರೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಕೆ. ಮಾದಪ್ಪ, ಎಸ್ಸಿ ಮೋರ್ಚಾ ಅಧ್ಯಕ್ಷ ರಾಮಕೃಷ್ಣ, ಪ.ಪಂ. ಅಧ್ಯಕ್ಷ ಪಿ.ಕೆ. ಚಂದ್ರು, ಪ್ರಮುಖರಾದ ಅಭಿಮನ್ಯುಕುಮಾರ್, ರೂಪಾ ಸತೀಶ್, ಸೋಮೇಶ್, ಮೋಕ್ಷಿಕ್ರಾಜ್, ಪೂರ್ಣಿಮಾ ಗೋಪಾಲ್, ಮಂಜುಳಾ ಸುಬ್ರಮಣಿ, ಸೇರಿದಂತೆ ಇತರರು ಉಪಸ್ಥಿತರಿದ್ದರು.