ಮಡಿಕೇರಿ, ಫೆ.೨೧: ಜಿಲ್ಲೆಯ ಪೊನ್ನಂಪೇಟೆ ಗ್ರಾಮ ಪಂಚಾಯಿತಿಯಲ್ಲಿ ಕೇಂದ್ರ ಸರ್ಕಾರದ ಮಹತ್ತರವಾದ ಯೋಜನೆಯಾದ ಇ-ಶ್ರಮ್ ನೋಂದಣಿ ಕಾರ್ಯಕ್ರಮಕ್ಕೆ ತಾ.ಪಂ.ಇಒ ಕೆ.ಸಿ.ಅಪ್ಪಣ್ಣ ಚಾಲನೆ ನೀಡಿದರು.

ನಂತರ ಮಾತನಾಡಿ ಇ-ಶ್ರಮ್ ಯೋಜನೆಯು ಅಸಂಘಟಿತ ಕಾರ್ಮಿಕರಿಗೆ ಪೂರಕವಾದ ಯೋಜನೆ ಯಾಗಿದ್ದು, ಈ ಯೋಜನೆಯಿಂದ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆ ಪಡೆದುಕೊಳ್ಳಬಹುದಾಗಿದೆ.

ಅಪಘಾತದಿಂದ ಮರಣ ಹೊಂದಿದಲ್ಲಿ ೨ ಲಕ್ಷ ರೂ. ಪರಿಹಾರ ಪಡೆದುಕೊಳ್ಳಬಹುದಾಗಿದೆ. ಮನರೇಗಾದ ಎಲ್ಲಾ ಕೂಲಿ ಕಾರ್ಮಿಕರು ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ತಿಳಿಸಿದರು. ಮನರೇಗಾ ಯೋಜನೆ ಮಾಹಿತಿ ಇರುವ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಿ, ನರೇಗಾ ಕೂಲಿ ಕಾರ್ಮಿಕರಿಗೆ ಇ- ಶ್ರಮ್ ಕಾರ್ಡ್ಗಳನ್ನು ವಿತರಿಸಿದರು.

ಮನರೇಗಾದ ಸಹಾಯಕ ನಿರ್ದೇಶಕ ಶ್ರೀನಿವಾಸ್ ಮಾತನಾಡಿ ಇ-ಶ್ರಮ್ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಯಾರು ಅರ್ಹರು ಹಾಗೂ ಮನರೇಗಾ ಯೋಜನೆಯ ಕುರಿತಾದ ಮಾಹಿತಿಯನ್ನು ನೀಡಿದರು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಪುಟ್ಟರಾಜು ಅವರು ಮನರೇಗಾ ಎಲ್ಲಾ ಕೂಲಿ ಕಾರ್ಮಿಕರಿಗೆ ಇ- ಶ್ರಮ್ ಕಾರ್ಡ್ ನೋಂದಣಿ ಮಾಡಿಕೊಂಡು ಕೇಂದ್ರ ಸರ್ಕಾರದ ಯೋಜನೆಗಳನ್ನು ಪಡೆದುಕೊಳ್ಳಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ತಾಲೂಕು ಐಇಸಿ ಸಂಯೋಜಕ ನರೇಂದ್ರ ಮಹಾತ್ಮಗಾಂಧಿ ರಾಷ್ಟಿçÃಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಮಾಹಿತಿಯನ್ನು ನೀಡಿ ಇ-ಶ್ರಮ್ ಯೋಜನೆಯು ಅಸಂಘಟಿತ ಕಾರ್ಮಿಕರಿಗೆ ಭದ್ರತೆಯನ್ನು ನೀಡಲು ಹಾಗೂ ಒಂದು ವರ್ಷದ ಅವಧಿಗೆ ಪ್ರಧಾನಮಂತ್ರಿ ಸುರಕ್ಷಾ ಬಿಮಾ ಯೋಜನೆಯ ಪ್ರಯೋಜನ ಪಡೆಯಬಹುದಾಗಿದ್ದು, ನೋಂದಣಿ ಮಾಡಿಕೊಳ್ಳಲು ೧೬ ರಿಂದ ೫೯ ವರ್ಷ ವಯೋಮಿತಿ, ಇಎಸ್‌ಐ, ಪಿಎಫ್ ಸೌಲಭ್ಯ ಹೊಂದಿಲ್ಲದೆ ಯಾವುದೇ ಕಾರ್ಮಿಕರು ನೋಂದಾಯಿಸಿ ಕೊಳ್ಳಬಹುದಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಪೊನ್ನಂಪೇಟೆ ಗ್ರಾ.ಪಂ.ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷೆ ದಶಮಿ, ಗ್ರಾ.ಪಂ. ಸದಸ್ಯರುಗಳು, ಗ್ರಾಮಸ್ಥರು, ಅಂಗನವಾಡಿ ಆಶಾ ಕಾರ್ಯಕರ್ತೆಯರು ಇದ್ದರು.