ಮಡಿಕೇರಿ, ಏ.೧೫: ಜಿಲ್ಲೆಯಲ್ಲಿ ತಾಲೂಕು ಮಟ್ಟದ ಆರೋಗ್ಯ ಮೇಳವು ತಾ. ೨೦ ರಂದು ಮಡಿಕೇರಿ, ಕುಶಾಲನಗರ ಮತ್ತು ಗೋಣಿಕೊಪ್ಪದಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ತಿಳಿಸಿದ್ದಾರೆ.
ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ತಾಲೂಕು ಮಟ್ಟದ ಆರೋಗ್ಯ ಮೇಳವು ಜಿಲ್ಲಾಡಳಿತ, ಕಂದಾಯ ಇಲಾಖೆ, ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಕೋಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ , ಸಾರ್ವಜನಿಕ ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ನೆಹರೂ ಯುವಕ ಕೇಂದ್ರ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಾರ್ತಾ ಮತ್ತು ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಡಿಕೇರಿ ತಾಲೂಕಿನಲ್ಲಿ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಜೂನಿಯರ್ ಕಾಲೇಜು ಆವರಣ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಕಚೇರಿ ಬಳಿ ನಡೆಯಲಿದೆ. ಕುಶಾಲನಗರ ಮತ್ತು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ಸರಕಾರಿ ಮಾದರಿ ಪ್ರಾಥಮಿಕ ಶಾಲೆ, ಇಲ್ಲಿ ಆರೋಗ್ಯ ಮೇಳ ನಡೆಯಲಿದೆ ಎಂದು ಅವರು ತಿಳಿಸಿದರು.
ಆರೋಗ್ಯ ಮೇಳದಲ್ಲಿ ಸಾಮಾನ್ಯ ಖಾಯಿಲೆಗಳು (ಜನರಲ್ ಮೆಡಿಸಿನ್), ಕಿವಿ, ಮೂಗು ತಪಾಸಣೆ. ಕಣ್ಣಿನ ಪೊರೆ ತಪಾಸಣೆ. ದಂತ ತಪಾಸಣೆ. ಸಾಂಕ್ರಾಮಿಕ ಅಥವಾ ಅಸಾಂಕ್ರಾಮಿಕ ರೋಗಗಳ ತಪಾಸಣೆ, ಮದುಮೇಹ, ರಕ್ತದೊತ್ತಡ, ಕ್ಯಾನ್ಸರ್ ತಪಾಸಣೆ. ಐಸಿಟಿಸಿ ಆಪ್ತ ಸಮಾಲೋಚನೆ. ಕ್ಷಯ ರೋಗ ಹಾಗೂ ಕುಷ್ಟ ರೋಗ ತಪಾಸಣೆ, ತಂಬಾಕು ಉತ್ಪನ್ನಗಳ ಸೇವನೆಗಳ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ.
ಕುಟುಂಬ ಕಲ್ಯಾಣ ಯೋಜನೆ ಸಮಾಲೋಚನೆ, ಆಹಾರ ಕಲಬೆರಕೆ ಬಗ್ಗೆ ಮಾಹಿತಿ. ತಾಯಿ ಮತ್ತು ಮಕ್ಕಳ ಆರೋಗ್ಯ ಸೇವೆಗಳು. ಲಸಿಕಾಕರಣ. ಔಷಧ ವಿತರಣೆ ಮತ್ತು ಪ್ರಯೋಗಾಲಯ ಸೇವೆಗಳು. ಆರೋಗ್ಯ ಮತ್ತು ಕ್ಷೇಮ ಕೇಂದ್ರ ಮಾಹಿತಿ ಮತ್ತು ಸೌಲಭ್ಯ. ಆರೋಗ್ಯ ಕಾರ್ಯಕ್ರಮಗಳು ಮತ್ತು ಆರೋಗ್ಯ ಸೇವೆಗಳ ಬಗ್ಗೆ ಮಾಹಿತಿ ಶಿಕ್ಷಣ ಸಂವಹನ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ. ಡಿಜಿಟಲ್ ಐಡಿ ಕ್ರಿಯೇಷನ್. ಆಯುಷ್ ಸೇವೆಗಳು, ಯೋಗ ಮತ್ತು ಧ್ಯಾನದ ಬಗ್ಗೆ ಮಾಹಿತಿ. ಇ-ಸಂಜೀವಿನಿ ಟೆಲಿ ಕನ್ಸಲ್ಟೇಷನ್ ಸೇವೆಗಳು ದೊರೆಯಲಿದೆ ಎಂದು ಅವರು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಶೇ.೭೮ ರಷ್ಟು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ವಿತರಿಸಲಾಗಿದೆ. ಇನ್ನೂ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯುವವರು ಪಡೆದುಕೊಳ್ಳಲು ಮುಂದಾಗಬೇಕು. ಆ ನಿಟ್ಟಿನಲ್ಲಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಪ್ರತಿ ತೆಗೆದುಕೊಂಡು ಬರಬೇಕು ಎಂದು ಕೋರಿದರು.
ಆರೋಗ್ಯ ಮೇಳದಲ್ಲಿ ನುರಿತ ತಜ್ಞ ವೈದ್ಯರು, ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.