ಮಡಿಕೇರಿ, ಏ. ೨೧: ಸರ್ಕಾರಿ ಕೆಲಸವು ಸಾರ್ವಜನಿಕರ ಕಾರ್ಯವಾಗಿದ್ದು, ಸರ್ಕಾರಿ ನೌಕರರು ತಂಡವಾಗಿ ಕೆಲಸ ಮಾಡಿದರೆ ಸರ್ಕಾರದ ಕಾರ್ಯಕ್ರಮಗಳನ್ನು ನಾಗರಿಕರಿಗೆ ಪರಿಣಾಮಕಾರಿಯಾಗಿ ತಲುಪಿಸಬಹುದು ಎಂದು ಜಿಲ್ಲಾಧಿಕಾರಿ ಡಾ. ಬಿ.ಸಿ ಸತೀಶ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಪ್ರಶಸ್ತಿ ಪಡೆದವರು ಮತ್ತು ಮುಂದಿನ ದಿನಗಳಲ್ಲಿ ಪ್ರಶಸ್ತಿ ಪಡೆಯಬೇಕೆಂದಿರುವವರ ಪಾತ್ರ ಇನ್ನೂ ಹೆಚ್ಚಾಗಿದೆ. ಪ್ರಶಸ್ತಿ ಪಡೆದವರಿಗೆ ಮತ್ತು ಎಲೆಮರೆಯ ಕಾಯಿಯಂತೆ ಕರ್ತವ್ಯ ಸಲ್ಲಿಸುತ್ತಿರುವ ಪ್ರತಿಯೊಬ್ಬರಿಗೂ ಅಭಿನಂದನೆ ಸಲ್ಲಿಸಿದರು.
ರಾಜ್ಯದ ಯಾವುದೇ ಭಾಗದಲ್ಲಿ ಕೆಲಸ ಮಾಡಿದರೂ ನಮ್ಮ ಊರು, ನಮ್ಮ ಜಾಗ ಎಂದು ಭಾವಿಸಿ ಉತ್ತಮವಾಗಿ ಸೇವೆ ಸಲ್ಲಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಸರ್ಕಾರಿ ನೌಕರರ ಕಟ್ಟಡ ನಿರ್ಮಾಣಕ್ಕೆ ಜಾಗವನ್ನು ಶೀಘ್ರ ಗುರುತಿಸಲಾಗುವುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಸದೃಢ ಸಮಾಜ ನಿರ್ಮಾಣಕ್ಕೆ ಸರ್ಕಾರಿ ನೌಕರರ ಕಾರ್ಯದಕ್ಷತೆ ಪ್ರಮುಖ ಪಾತ್ರ ವಹಿಸುತ್ತದೆ; ಜನಪ್ರತಿನಿಧಿಗಳು ಶಾಸನ ಮಾಡಿದರೆ, ಶಾಸನಗಳನ್ನು ಜನರಿಗೆ ತಲುಪಿಸುವ ಕೆಲಸ ಕಾರ್ಯಾಂಗದ್ದಾಗಿದೆ. ಕಾರ್ಯಾಂಗ ದಲ್ಲಿ ಸೇವೆ ಸಲ್ಲಿಸುವವರು ಸರ್ಕಾರಿ ನೌಕರರಾಗಿರುತ್ತಾರೆ. ಸರ್ಕಾರದ ಪ್ರತಿಯೊಂದು ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರಿಂದ ಆಗಬೇಕು. ಉತ್ತಮ ಸಮಾಜಕ್ಕೆ ಸರ್ಕಾರಿ ನೌಕರರ ಪಾತ್ರ ಬಹಳ ಮುಖ್ಯ. ಸರ್ಕಾರದ ಕೆಲಸ ದೇವರ ಕೆಲಸವಾಗಿರುವುದರಿಂದ ಎಲ್ಲರೂ ನಿಷ್ಠೆಯಿಂದ ದುಡಿಯಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸಿಇಒ ಭಂವರ್ ಸಿಂಗ್ ಮೀನಾ ಮಾತನಾಡಿ ಸರ್ಕಾರದ ಪ್ರತಿಯೊಂದು ಯೋಜನೆಗಳು ಮತ್ತು ಸೌಲಭ್ಯಗಳನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನಗೊಳಿಸುವ ಕೆಲಸ ಸರ್ಕಾರಿ ನೌಕರರದ್ದಾಗಿದೆ. ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಎಂಬ ಮೂರು ಅಂಶಗಳಿವೆ. ಕಾರ್ಯಾಂಗದಲ್ಲಿ ಸರ್ಕಾರಿ ನೌಕರರು ಕೆಲಸ ಮಾಡುತ್ತಾರೆ. ಜನರ ಸಮಸ್ಯೆಗಳನ್ನು ಗಮನಹರಿಸಿ ಪ್ರತಿಯೊಂದು ಸೇವೆ ಮತ್ತು ಸೌಲಭ್ಯಗಳನ್ನು ಅನುಷ್ಠಾನಗೊಳಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ಸರ್ಕಾರಿ ನೌಕರರ ಮಕ್ಕಳನ್ನು ಸನ್ಮಾನಿಸಲಾಯಿತು. ೨೦೨೦-೨೧ ನೇ ಸಾಲಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಸಾಧಕರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ನೀಡಿ ಗೌರವಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುAಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಳ್ಳಾಲ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಲಕ್ಷಿö್ಮ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಪೊನ್ನಚ್ಚನ ಶ್ರೀನಿವಾಸ್, ಜಿಲ್ಲಾ ಆರೋಗ್ಯಧಿಕಾರಿ ಡಾ. ವೆಂಕಟೇಶ್, ತಹಶೀಲ್ದಾರ್ ಮಹೇಶ್, ಸೋಮವಾರಪೇಟೆ ತಾಲೂಕು ಸರ್ಕಾರಿ ನೌಕರರ ಅಧ್ಯಕ್ಷ ಪ್ರದೀಪ್ ಇತರರು ಇದ್ದರು.
ಚಿತ್ರಾವತಿ ಪ್ರಾರ್ಥಿಸಿದರು, ಪೊನ್ನಚ್ಚನ ಶ್ರೀನಿವಾಸ್ ಸ್ವಾಗತಿಸಿದರು, ಎಸ್.ಟಿ.ಶಮ್ಮಿ ವಂದಿಸಿದರು, ಎಸ್.ಡಿ.ಅನಿತಾ ನಿರೂಪಿಸಿದರು.