ಮಡಿಕೇರಿ, ಜೂ. ೧೯: ಕರ್ನಾಟಕ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ನೆಲ್ಲಿಹುದಿಕೇರಿ ಮುತ್ತಪ್ಪ ಯುವ ಕಲಾ ಸಂಘ ಮತ್ತು ರೆಡ್ ಕ್ರಾಸ್ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ನೆಲ್ಲಿಹುದಿಕೇರಿ ಕೃಷಿ ಪತ್ತಿನ ಸಹಕಾರಿ ಸಂಘ ಸಭಾಂಗಣದಲ್ಲಿ ಮಂಗಳವಾರ “ವಿಶ್ವ ರಕ್ತದಾನಿಗಳ ದಿನಾಚರಣೆ ಕಾರ್ಯಕ್ರಮ ಹಾಗೂ “ಸ್ವಯಂಪ್ರೇರಿತ ರಕ್ತದಾನ ಶಿಬಿರ” ನಡೆಯಿತು.
“ವಿಶ್ವ ರಕ್ತದಾನಿಗಳ ದಿನಾಚರಣೆ-೨೦೨೨ ಕಾರ್ಯಕ್ರಮದ ಪ್ರಯುಕ್ತ ನೆಲ್ಲಿಹುದಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಾಥಾ ನಡೆಯಿತು.
ಜಾಥಾವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಆರ್. ವೆಂಕಟೇಶ್ ಅವರು ಉದ್ಘಾಟಿಸಿದರು. ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಆನಂದ್, ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ನೆಲ್ಲಿಹುದಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಅಂತೋಣಿ, ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷರು ಮತ್ತು ಪಿಡಿಓ., ಶಾಲಾ ಅಭಿವೃದ್ಧಿ ಮಂಡಳಿ ಅಧ್ಯಕ್ಷರು, ಮುತ್ತಪ್ಪ ಯುವ ಕಲಾ ಸಂಘದ ಅಧ್ಯಕ್ಷರಾದ ಶರಣು ಪ್ರಕಾಶ್ ಇತರರು ಇದ್ದರು.
ನೆಲ್ಲಿಹುದಿಕೇರಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಸನ್ನ ಕಾರ್ಯಕ್ರಮ ಉದ್ಘಾಟಿಸಿದರು. ರೆಡ್ಕ್ರಾಸ್ ಸಂಸ್ಥೆಯ ಶ್ಯಾಮ್ ಜೋಸೆಫ್ ಮತ್ತು ಮುರಳೀಧರ್, ನೆಲ್ಲಿಹುದಿಕೇರಿ ಗ್ರಾ.ಪಂ. ಅಧ್ಯಕ್ಷ ಸಾಬು ವರ್ಗಿಸ್ ಇತರರು ಇದ್ದರು. ರಕ್ತ ದಾನಿಗಳ ದಿನಾಚರಣೆಯ ಮಹತ್ವದ ಕುರಿತು ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಆನಂದ್ ಮತ್ತು ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಅವರು ರಕ್ತದ ಅವಶ್ಯಕತೆ ಹಾಗೂ ರಕ್ತದಾನ ಮಾಡುವುದರಿಂದ ಆಗುವ ಉಪಯೋಗಗಳ ಕುರಿತು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಅತೀ ಹೆಚ್ಚು ರಕ್ತದಾನ ಮಾಡಿದ ಅಶ್ರಫ್ (೪೯ ಬಾರಿ), ಪದ್ಮನಾಭ (೧೪ ಬಾರಿ), ಯೋಗಿತಾ (೬ ಬಾರಿ) ಅವರನ್ನು ಸನ್ಮಾನಿಸಲಾಯಿತು. ಸನ್ಮಾನಿತರಾದ ಪದ್ಮನಾಭ ಅವರು ಹೆಚ್ಚು ರಕದಾನ ಮಾಡಲು ಪ್ರೇರಣೆಯಾದ ಬಗ್ಗೆ ಮಾಹಿತಿ ನೀಡಿದರು. ರಕ್ತದಾನದ ಮಹತ್ವದ ಕುರಿತು ಕಾಲೇಜು ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಆಯೋಜಿಸಿ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ರಕ್ತದಾನ ಶಿಬಿರದಲ್ಲಿ ಒಟ್ಟು ೪೪ ಯೂನಿಟ್ ರಕ್ತ ಸಂಗ್ರಹಿಸಲಾಯಿತು. ನೆಲ್ಲಿಹುದಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುತ್ತಪ್ಪ ಯುವ ಕಲಾ ಸಂಘದ ಸದಸ್ಯರು ಸ್ವಾಗತಿಸಿ, ವಂದಿಸಿದರು.
ನೆಲ್ಲಿಹುದಿಕೇರಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ “ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ ನಡೆಯಿತು. ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಬಹುಮಾನ ವಿತರಿಸಲಾಯಿತು. ವಿಜೇತರ ವಿವರ: ನೆಲ್ಲಿಹುದಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆರ್. ದೀಪ್ತಿ (ಪ್ರಥಮ), ಪಿ.ಎ. ಸಿಂಚನ (ದ್ವಿತೀಯ) ಮತ್ತು ಕೆ.ಜಿ. ರಶ್ಮಿ (ತೃತೀಯ) ಸ್ಥಾನ ಪಡೆದಿದ್ದಾರೆ.