ಮಡಿಕೇರಿ, ಅ.೨೭. ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸಣ್ಣ ಕತೆಗಳ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆಯ ಪರೀಕ್ಷೆಯು ತಾ.೨೯ರ ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ (ಜೂನಿಯರ್ ಕಾಲೇಜು ಆವರಣದಲ್ಲಿ) ಕೊಡಗು ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಯಲಿದೆ.
ಸ್ಪರ್ಧೆಯ ಉದ್ಘಾಟನೆಯನ್ನು ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ವೇದಮೂರ್ತಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕೊಡಗು ಜಿಲ್ಲಾ ಕಸಾಪ ಅಧ್ಯಕ್ಷ ಎಂ.ಪಿ.ಕೇಶವ ಕಾಮತ್ ವಹಿಸಲಿದ್ದಾರೆ. ಸಣ್ಣ ಕತೆ ರಚನೆ ಕುರಿತು ಯುವ ಕತೆಗಾರ ರಂಜಿತ್ ಕಮಲಪಾರ ಮಾತನಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಡಿಕೇರಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ.ಡಿ. ಶಿವಶಂಕರ, ಮುಖ್ಯೋಪಾಧ್ಯಾಯರಾದ ಹೆಚ್.ಕೆ. ಸುಶೀಲ ಉಪಸ್ಥಿತರಿರುತ್ತಾರೆ. ಜಿಲ್ಲೆಯ ೫೫ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷೆಯ ಕುರಿತು ಮಾಹಿತಿಯನ್ನು ಕೊಡಗು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ನೀಡಲಿದ್ದಾರೆ ಎಂದು ಕೊಡಗು ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಎಸ್.ಐ. ಮುನಿರ್ ಅಹಮದ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.