ಮಡಿಕೇರಿ. ಸೆ. ೬ : ಸಿದ್ದಾಪುರದ ಶ್ರೀ ನಾರಾಯಣ ಧರ್ಮ ಪರಿಪಾಲನಾ (ಎಸ್.ಎನ್.ಡಿ.ಪಿ.) ಯೋಗಂ ಕೊಡಗು ಯೂನಿಯನ್ ವತಿಯಿಂದ ತಾ. ೧೦ ರಂದು ಶ್ರೀ ನಾರಾಯಣ ಗುರುಗಳ ೧೬೮ನೇ ಜಯಂತಿ ನಡೆಯಲಿದೆ ಎಂದು ಯೂನಿಯನ್ ಅಧ್ಯಕ್ಷ ವಿ.ಕೆ. ಲೋಕೇಶ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‌ಎನ್‌ಡಿಪಿ ಕೊಡಗು ಯೂನಿಯನ್, ಜಯಂತಿ ಆಚರಣಾ ಸಮಿತಿ ಹಾಗೂ ಎಸ್‌ಎನ್‌ಡಿಪಿ ಶಾಖೆಗಳ ಸಂಯುಕ್ತ ಆಶ್ರಯದಲ್ಲಿ ಸಿದ್ದಾಪುರದ ನಾರಾಯಣ ಸಭಾಂಗಣದಲ್ಲಿ (ಸ್ವರ್ಣಮಾಲ ಕಲ್ಯಾಣ ಮಂಟಪ) ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪೂರ್ವಾಹ್ನ ೯ ಗಂಟೆಗೆ ಗುರುಪೂಜೆ ನಡೆಯಲಿದ್ದು, ೯.೩೦ಕ್ಕೆ ದಾಸವಾಳ ಮ್ಯಾಗ್‌ಡೂರ್ ಎಸ್ಟೇಟ್ ಟಿ.ಕೆ.ಸೋಮನ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ಶ್ರೀ ನಾರಾಯಣ ಗುರುಗಳ ಮೂರ್ತಿಯ ಅಲಂಕೃತ ಮಂಟಪಕ್ಕೆ ಶ್ರೀ ಅಯ್ಯಪ್ಪಸ್ವಾಮಿ ದೇವಾಲಯಗಳ ಮುಂಭಾಗದಲ್ಲಿ ೭ನೇ ಹೊಸಕೋಟೆ ಪ್ಯಾಡಿಂಗ್ಟನ್ ರೆಸಾರ್ಟ್ನ ಮ್ಯಾನೇಜಿಂಗ್ ಡೈರೆಕ್ಟರ್ ಟಿ.ಎಲ್. ಪ್ರವೀಣ್ ಚಾಲನೆ ನೀಡಲಿದ್ದಾರೆ. ನಂತರ ವಾದ್ಯ ಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ ಎಂದರು.

ಅಪರಾಹ್ನ ೧೨ ಗಂಟೆಗೆ ನಡೆಯಲಿರುವ ಸಭಾ ಕಾರ್ಯಕ್ರಮ ವನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನೀಲ್ ಕುಮಾರ್ ಉದ್ಘಾಟಿಸಲಿದ್ದು, ಸೋಲೂರು ಗ್ರಾಮದ ಶ್ರೀ ನಾರಾಯಣ ಗುರು ಮಠ, ರೇಣುಕಾ ಪೀಠ ಹಾಗೂ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ ಎಂದರು.

ತನ್ನ ಅಧ್ಯಕ್ಷತೆಯಲ್ಲಿ ನಡೆಯಲಿ ರುವ ಕಾರ್ಯಕ್ರಮದಲ್ಲಿ ಕೊಡಗು-ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ, ವೀರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷ ಎ.ಎಸ್. ಪೊನ್ನಣ್ಣ ಹಾಗೂ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ೨೦೨೧-೨೨ನೇ ಸಾಲಿನ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವ ಸಮರ್ಪಣೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಕಾರ್ಯದರ್ಶಿ ಕೆ.ವಿ. ಪ್ರೇಮಾನಂದ, ಜಯಂತಿ ಆಚರಣಾ ಸಮಿತಿ ಅಧ್ಯಕ್ಷ ಆರ್.ಗಿರೀಶ್, ಕಾರ್ಯದರ್ಶಿ ರೀಶಾ ಸುರೇಂದ್ರ ಸದಸ್ಯರಾದ ಸತೀಶ್, ಆನಂದ್ ಉಪಸ್ಥಿತರಿದ್ದರು.