ಶನಿವಾರಸಂತೆ, ಸೆ. ೧೬: ಸಮೀಪದ ಆಲೂರು-ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮನೆಹಳ್ಳಿಗೆ ತೆರಳಲು ಪ್ರವಾಸೋದ್ಯಮ ಇಲಾಖೆ ಲೋಕೋಪಯೋಗಿ ಇಲಾಖೆ ಮೂಲಕ ಅನುದಾನ ರೂ. ೧ ಕೋಟಿ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಚಾಲನೆ ನೀಡಿದರು.
ನಂತರ ಶಾಸಕರು ಮಾತನಾಡಿ, ಸತತ ೩ ವರ್ಷಗಳ ಪ್ರಯತ್ನದ ನಂತರ ಪ್ರವಾಸೋದ್ಯಮ ಇಲಾಖೆ ಅನುದಾನ ಬಿಡುಗಡೆ ಮಾಡಿದೆ. ಟೆಂಡರ್ ಪ್ರಕ್ರಿಯೆ ಮುಗಿದಿದ್ದು, ದೀರ್ಘ ಕಾಲ ಬಾಳಿಕೆ ಬರುವಂತೆ ಶೀಘ್ರ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಿದರು.
ಮನೆಹಳ್ಳಿ ಮಠಾಧೀಶ ಮಹಾಂತಶಿವಲಿAಗ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್, ನಿವೃತ್ತ ತಹಶೀಲ್ದಾರ್ ಗೋವಿಂದ್ ರಾಜ್, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲ ಇಂಜಿನಿಯರ್ ಮಹೇಂದ್ರ ಕುಮಾರ್, ಇಂಜಿನಿಯರ್ ವೆಂಕಟೇಶ್, ಗುತ್ತಿಗೆದಾರ ಟಿ.ಆರ್. ಪುರುಷೋತ್ತಮ್ ಇತರರು ಹಾಜರಿದ್ದರು.
ಈ ಸಂದರ್ಭ ಮೈಲಾತ್ಪುರ, ಮನೆಗಳ್ಳಿ, ನಿಡ್ತ ಕೊಪ್ಪಲು, ಹಾರೆಹೊಸೂರು ಮೂಲಕ ಶನಿವಾರಸಂತೆಗೆ ತೆರಳುವ ರಸ್ತೆಯನ್ನು ಅಭಿವೃದ್ಧಿಪಡಿಸಿ ಮೇಲ್ದರ್ಜೆಗೇರಿಸುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೋಹನ್ ಕುಮಾರ್ ಹಾಗೂ ಗ್ರಾಮ ಪ್ರಮುಖ ಬಸಪ್ಪ ನೇತೃತ್ವದಲ್ಲಿ ಗ್ರಾಮಸ್ಥರು ಶಾಸಕ ಅಪ್ಪಚ್ಚು ರಂಜನ್ ಅವರಿಗೆ ಮನವಿಪತ್ರ ಸಲ್ಲಿಸಿದರು.