ಮಡಿಕೇರಿ, ಸೆ. ೧೭: ವಿಶ್ವಕರ್ಮ ಸಮಾಜವು ಭಾರತೀಯ ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕ ಕೆ.ಜಿ. ಬೋಪಯ್ಯ ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ನಡೆದ ವಿಶ್ವಕರ್ಮ ಜಯಂತಿ ಆಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿಶ್ವಕರ್ಮ ಸಮಾಜಕ್ಕೆ ತನ್ನದೇ ಆದ ಚಾರಿತ್ರಿಕ ಹಿನ್ನೆಲೆ ಇದೆ. ವೇದ, ಋಗ್ವೇದ ಕಾಲದಿಂದಲೂ ಸಮಾಜಕ್ಕೆ ವಿಶ್ವಕರ್ಮರು ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಕೆ.ಜಿ. ಬೋಪಯ್ಯ ತಿಳಿಸಿದರು.
ಸಮಾಜದಲ್ಲಿ ಅಭಿವೃದ್ಧಿ ಮತ್ತು ಬದಲಾವಣೆ ಅನಿವಾರ್ಯ. ಆ ನಿಟ್ಟಿನಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ನಿಗಮ ದಿಂದ ದೊರೆಯುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತಾಗ ಬೇಕು ಎಂದು ಶಾಸಕರು ಹೇಳಿದರು.
ನರೇಂದ್ರ ಮೋದಿ ಅವರು ಹುಟ್ಟಿದ ದಿನದಂದು ವಿಶ್ವಕರ್ಮ ಜಯಂತಿಯನ್ನು ಆಚರಿಸುತ್ತಿರುವುದು ವಿಶಿಷ್ಟವಾಗಿದೆ. ಸ್ವಾವಲಂಬಿ ಭಾರತ ಆಗಬೇಕು. ಆ ದಿಸೆಯಲ್ಲಿ ಪ್ರತಿಯೊಬ್ಬರೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂದು ಬೋಪಯ್ಯ ನುಡಿದರು.
ಕೋಟೇಕಾರು ಗೋಸೇವಾಶ್ರಮ ಟ್ರಸ್ಟ್ನ ಅಧ್ಯಕ್ಷರಾದ ಯೋಗಾಚಾರ್ಯ ಶ್ರೀ ಪುಂಡರೀಕಾಕ್ಷ ಬೆಳ್ಳೂರು ಅವರು ಮಾತನಾಡಿ,
(ಮೊದಲ ಪುಟದಿಂದ) ವಿಶ್ವ ಎಂದರೆ ಜಗತ್ತು, ಆದ್ದರಿಂದ ವಿಶ್ವಕರ್ಮ ಜಗತ್ತು, ಜಗತ್ತನ್ನು ಸೃಷ್ಟಿ ಮಾಡಿದವರೇ ವಿಶ್ವಕರ್ಮ. ಯುಗ ಯುಗ ಕಳೆದರೂ ಸಮಾಜ ಬದಲಾವಣೆ ಹೊಂದುತ್ತದೆ. ವಿಶ್ವಕರ್ಮವು ಒಂದು ಜಾತಿ ಸಮುದಾಯಕ್ಕೆ ಸೇರಿದ್ದಲ್ಲ. ವಿಷ್ಣು ಪುರಾಣದಲ್ಲಿ ವಿಶ್ವಕರ್ಮ ಬಗ್ಗೆ ವಿವರಿಸಲಾಗಿದೆ. ವಿಶ್ವಕರ್ಮ ಸಮಾಜ ಕುಲಕಸುಬು ಮಾಡುವುದರೊಂದಿಗೆ ಆರ್ಥಿಕವಾಗಿ ಸಬಲರಾಗಬೇಕು. ಸ್ವಾವಲಂಬಿ ಬದುಕು ನಡೆಸುವಂತಾಗ ಬೇಕು ಎಂದು ಹೇಳಿದರು.
ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ ಮಾತನಾಡಿ, ವಿಶ್ವಕರ್ಮ ದೇವಲೋಕದ ಶಿಲ್ಪಿ ಎಂದರೆ ತಪ್ಪಾಗಲಾರದು. ಆ ನಿಟ್ಟಿನಲ್ಲಿ ವಿಶ್ವಕರ್ಮ ಸಮಾಜದ ಬಂಧುಗಳು ಮುಖ್ಯವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ ಮಾತನಾಡಿ ಕಲೆ, ಸಂಸ್ಕೃತಿಗೆ ವಿಶ್ವಕರ್ಮ ಸಮಾಜ ತಮ್ಮದೇ ಆದ ಕೊಡುಗೆ ನೀಡಿರುವುದನ್ನು ಮರೆಯುವಂತಿಲ್ಲ ಎಂದರು.
ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷ ದೇವದಾಸ್ ಮಾತನಾಡಿ, ವಿಶ್ವಕರ್ಮ ಅಭಿವೃದ್ಧಿ ನಿಗಮದಿಂದ ಇನ್ನೂ ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸುವಂತಾಗಬೇಕು ಎಂದು ಕೋರಿದರು.
ವಿಶ್ವಕರ್ಮ ಸಮುದಾಯದ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್. ಸುಬ್ರಮಣಿ ಮಾತನಾಡಿ ನಿಗಮದಿಂದ ಸಮಾಜದ ಯುವಜನರು ಹಲವು ಸೌಲಭ್ಯ ಪಡೆಯಲು ಅವಕಾಶವಿದ್ದು, ಅದನ್ನು ಬಳಸಿಕೊಳ್ಳುವಂತೆ ಕೋರಿದರು.
ತಹಶೀಲ್ದಾರ್ ಪಿ.ಎಸ್. ಮಹೇಶ್, ವಿಶ್ವಕರ್ಮ ಸಮಾಜ ಸೇವಾ ಸಂಘದ ತಾಲೂಕು ಅಧ್ಯಕ್ಷ ಬಿ. ಜಗದೀಶ್ ಆಚಾರ್ಯ, ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು, ವಿಶ್ವಕರ್ಮ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ವಿದ್ಯಾಲತಾ ಇತರರು ಇದ್ದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಿನ್ನಸ್ವಾಮಿ ಸ್ವಾಗತಿಸಿದರು, ವಿಶ್ವಕರ್ಮ ಮಹಿಳಾ ಒಕ್ಕೂಟದ ಸದಸ್ಯರು ನಾಡಗೀತೆ ಹಾಡಿದರು. ಮಣಜೂರು ಮಂಜುನಾಥ್ ನಿರೂಪಿಸಿದರು. ಪ್ರಕಾಶ್ ಆಚಾರ್ಯ ವಂದಿಸಿದರು.