ಮಡಿಕೇರಿ, ಸೆ. ೨೯: ದೈಹಿಕ ಸಾಮರ್ಥ್ಯಕ್ಕೆ ಕ್ರೀಡೆ ಸಹಕಾರಿಯಾಗಿದ್ದು, ಮನಸ್ಸನ್ನು ಸದೃಢಗೊಳಿಸುತ್ತದೆ ಎಂದು ಗ್ರಾಮಾಂತರ ಠಾಣಾಧಿಕಾರಿ ಉಮೇಶ್ ಉಪ್ಪಳಿಕೆ ಹೇಳಿದರು.

ಮಡಿಕೇರಿ ದಸರಾ ಅಂಗವಾಗಿ ದಸರಾ ಕ್ರೀಡಾ ಸಮಿತಿ ವತಿಯಿಂದ ಏರ್ಪಡಿಸಲಾಗಿದ್ದ ಪುರುಷ ಹಾಗೂ ಮಹಿಳೆಯರ ಮುಕ್ತ ಮ್ಯಾರಥಾನ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕ್ರೀಡೆಯಲ್ಲಿ ಎಲ್ಲರೂ ಪಾಲ್ಗೊಳ್ಳುವಂತಾಗಬೇಕು. ಕ್ರೀಡಾ ಸ್ಫೂರ್ತಿಯೊಂದಿಗೆ ಎಚ್ಚರದಿಂದ ಓಡಿ-ಆಡಬೇಕೆಂದು ಕಿವಿ ಮಾತು ಹೇಳಿದರು.

ಈ ಸಂದರ್ಭ ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಉಮೇಶ್ ಸುಬ್ರಮಣಿ, ಸದಸ್ಯ ಸತೀಶ್ ಕುಮಾರ್, ಕ್ರೀಡಾ ಸಮಿತಿ ಅಧ್ಯಕ್ಷ ರಾಜೀವ್, ಕಾರ್ಯದರ್ಶಿ ದುಗ್ಗಳ ಕಪಿಲ್, ಸಮಿತಿ ಪದಾಧಿಕಾರಿಗಳು, ಸದಸ್ಯರುಗಳು ಇದ್ದರು.

ಪುರುಷರಿಗೆ ೧೦ ಕಿ.ಮೀ. ಹಾಗೂ ಮಹಿಳೆಯರಿಗೆ ೫ ಕಿ.ಮೀ. ಓಟದ ಸ್ಪರ್ಧೆ ನಡೆಯಿತು. ಪುಟಾಣಿ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಕ್ರೀಡಾಪಟುಗಳು ಭಾಗವಹಿಸಿದ್ದರು.