ಕೂಡಿಗೆ, ನ. ೬: ತಾಲೂಕು ಕಾನೂನು ಸೇವಾ ಸಮಿತಿ, ಗ್ರಾಮ ಪಂಚಾಯಿತಿ ಹಾಗೂ ನ್ಯಾಯಾಂಗ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು ಮತ್ತು ನೆರವಿನ ಮೂಲಕ ನಾಗರಿಕರ ಸಬಲೀಕರಣ ಅಭಿಯಾನದ ಅಂಗವಾಗಿ ಅರಿವು ಮತ್ತು ನೆರವು ಜಾಗೃತಿ ಕಾರ್ಯಕ್ರಮ ನಡೆಯಿತು.

ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಕುಶಾಲನಗರದ ಸಿವಿಲ್ ನ್ಯಾಯಾಧೀಶರಾದ ಸರಿತಾ ಕುಮಾರಿ ಉದ್ಘಾಟಿಸಿದರು.

ನಂತರ ಮಾತನಾಡಿ, ಪ್ರತಿಯೊಬ್ಬರು ಕಾನೂನಿನ ಅರಿವು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವಕೀಲರಾದ ಚಂದ್ರಿಕಾ ಹಾಗೂ ಸಂತೋಷ್ ಕುಮಾರ್ ಜನತಾ ಕಾನೂನು, ಉಚಿತ ಕಾನೂನು ಸೇವೆ, ಜನನ-ಮರಣ ನೋಂದಣಿ ವಿಚಾರಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಚೆಲುವರಾಜು, ಉಪಾಧ್ಯಕ್ಷೆ ಜಯಮ್ಮ ಹಾಗೂ ಸದಸ್ಯರು, ಅಭಿವೃದ್ಧಿ ಅಧಿಕಾರಿ ಸುಮೇಶ್, ಮುಳ್ಳುಸೋಗೆ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ವಾಣಿ ಸೇರಿದಂತೆ ಪಂಚಾಯಿತಿ ವ್ಯಾಪ್ತಿಯ ಶಾಲಾ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಸ್ವಸಹಾಯ ಸಂಘದ ಪ್ರತಿನಿಧಿಗಳು ಉಪಸ್ಥಿತರಿದ್ದರು.